ಬಾಗಲಕೋಟೆ: ವೈದ್ಯಕೀಯ ಹಾಗೂ ದೈಹಿಕ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರುವವರಿಗೆ ಕೂಡಲೇ ಲಿಖಿತ ಪರೀಕ್ಷೆ ನಡೆಸಬೇಕು. ಅಗ್ನಿಪಥ ಯೋಜನೆ ಕೈಬಿಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಆಮ್ ಆದ್ಮಿ ಪಾರ್ಟಿ ಸದಸ್ಯರು ಪ್ರತಿಭಟನೆ ನಡೆಸಿದರು.
ವರ್ಷದ ಹಿಂದೆ ಸೇನೆ ಭರ್ತಿಗಾಗಿ ವೈದ್ಯಕೀಯ, ದೈಹಿಕ ಪರೀಕ್ಷೆ ನಡೆಸಲಾಗಿತ್ತು. ಅದರಲ್ಲಿ ಉತ್ತೀರ್ಣರಾದವರು ವರ್ಷದಿಂದ ಲಿಖಿತ ಪರೀಕ್ಷೆಗಾಗಿ ಕಾಯುತ್ತಿದ್ದಾರೆ. ಅವರಿಗೆ ಕೂಡಲೇ ಪರೀಕ್ಷೆ ನಡೆಸಲು ಮುಂದಾಗಬೇಕು ಎಂದು ಆಗ್ರಹಿಸಿದರು.
ಹಿಂದಿನ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರ ಸೈನಿಕರ ಸೇವಾ ಅವಧಿಯನ್ನು 58 ವರ್ಷಗಳವರೆಗೆ ವಿಸ್ತರಿಸಬೇಕು ಎಂದು ಪ್ರಸ್ತಾವ ಸಲ್ಲಿಸಿದ್ದರು. ಆದರೆ, ಅದಕ್ಕೆ ತದ್ವಿರುದ್ಧ ಅಗ್ನಿಪಥ ಯೋಜನೆ ಜಾರಿಗೊಳಿಸಲಾಗಿದೆ ಎಂದು ದೂರಿದರು.
ಸರ್ಕಾರ, ಪಕ್ಷಗಳು ಸೈನಿಕರ ಹೆಸರಿನಲ್ಲಿ ರಾಜಕೀಯ ಮಾಡುವುದನ್ನು ನಿಲ್ಲಿಸಬೇಕು. ದೇಶಪ್ರೇಮ, ರಾಷ್ಟ್ರೀಯತೆ ಹೆಸರಿನಲ್ಲಿ ರಾಜಕಾರಣ ಮಾಡಿ, ಸೈನಿಕರನ್ನು ಗುತ್ತಿಗೆ ಕಾರ್ಮಿಕರಂತೆ ದುಡಿಸಿಕೊಳ್ಳಲು ಮುಂದಾಗಿರುವುದನ್ನು ಖಂಡಿಸಿದರು.
ವಾರ್ಷಿಕ 2 ಕೋಟಿ ಉದ್ಯೋಗ ಸೃಷ್ಟಿಸುವಲ್ಲಿ ವಿಫಲವಾಗಿರುವ ಕೇಂದ್ರವು, ಜನರನ್ನು ದಾರಿ ತಪ್ಪಿಸಲು ಅಗ್ನಿಪಥ ಯೋಜನೆ ಜಾರಿಗೊಳಿಸಿದೆ. ನಾಲ್ಕು ವರ್ಷಗಳ ನಂತರ ನಿವೃತ್ತಿಯಾಗುವ ಸೈನಿಕರು ನಿರುದ್ಯೋಗಿಗಳಾಗುತ್ತಾರೆ. ಸೇನೆಯನ್ನೂ ಖಾಸಗೀಕರಣ ಮಾಡುವ ಹುನ್ನಾರ ನಡೆದಿದೆ. ಆದ್ದರಿಂದ ಯೋಜನೆಯನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.
ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಧರ್ಮಂತಿ, ಭಾಗ್ಯ ಬೆಟಗೇರಿ, ಬಸವರಾಜ ಅಂಬಿಗೇರ, ಮಲ್ಲು ಕಟ್ಟಿಮನಿ, ಶಿಲ್ಪಾ ಕಾಳೆ, ದೇವೇಂದ್ರ ಆಸ್ಕಿ, ಎಎಪಿಯ ಜಿಲ್ಲಾ ಘಟಕದ ಅಧ್ಯಕ್ಷ ರಮೇಶ ಬದ್ನೂರ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.