ಬಾಗಲಕೋಟೆ: ‘ಯುಜಿ ಸಿಇಟಿ ಸಾಮಾನ್ಯ ಪ್ರವೇಶ ಪರೀಕ್ಷೆಗಳು ಏ.16 ಮತ್ತು 17ರಂದು ಜಿಲ್ಲೆಯ 21 ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತಿದ್ದು, 9,369 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ಯಾವುದೇ ತೊಂದರೆಗಳಾಗದಂತೆ ಕ್ರಮಕೈಗೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ಯುಜಿಸಿಇಟಿ ಸಾಮಾನ್ಯ ಪ್ರವೇಶ ಪರೀಕ್ಷೆ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಏ.16 ರಂದು ಬೆಳಿಗ್ಗೆ 10.30 ರಿಂದ 11.50ರ ವರೆಗೆ ಭೌತವಿಜ್ಞಾನ, ಮಧ್ಯಾಹ್ನ 2.30 ರಿಂದ 3.50ರವರೆಗೆ ರಸಾಯನವಿಜ್ಞಾನ ಪರೀಕ್ಷೆ ನಡೆಯಲಿವೆ’ ಎಂದರು.
‘ಏ.17 ರಂದು ಬೆಳಿಗ್ಗೆ 10.30 ರಿಂದ 11.50ರ ವರೆಗೆ ಗಣಿತ, ಮಧ್ಯಾಹ್ನ 2.30 ರಿಂದ 3.50ರ ವರೆಗೆ ಜೀವವಿಜ್ಞಾನ ಪರೀಕ್ಷೆಗಳು ಬಾಗಲಕೋಟೆ ನಗರದ 13 ಹಾಗೂ ಜಮಖಂಡಿ ನಗರದ 8 ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ಕಣ್ಗಾವಲಿನಲ್ಲಿ ಪರೀಕ್ಷೆ ನಡೆಸಲಾಗುವುದು’ ಎಂದರು.
‘ವೆಬ್ ಕಾಸ್ಟಿಂಗ್ ಕಡ್ಡಾಯವಾಗಿದ್ದು, ಯಾವುದೇ ಲೋಪಗಳು ಉಂಟಾಗದಂತೆ ಪರೀಕ್ಷೆಗಳು ಸುಗಮವಾಗಿ ನಡೆಯಬೇಕು. ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗುವುದು’ ಎಂದು ಹೇಳಿದರು.
‘ಝೆರಾಕ್ಸ್ ಅಂಗಡಿಗಳನ್ನು ಮುಚ್ಚಿಸಲು ಕ್ರಮ ಕೈಗೊಳ್ಳಲಾಗುವುದಲ್ಲದೇ, ಪೊಲೀಸ್ ಬಂದೋಬಸ್ತ್ನಲ್ಲಿ ಪ್ರಶ್ನೆ ಪತ್ರಿಕೆಗಳ ಸಾಗಾಟ ಮಾಡಲಾಗುವುದು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕು’ ಎಂದು ತಿಳಿಸಿದರು.
‘ಎಲ್ಲಾ ಪರೀಕ್ಷಾ ಕೊಠಡಿಗಳಲ್ಲಿ ಗೋಡೆ ಗಡಿಯಾರಗಳನ್ನು ಅಳವಡಿಸಬೇಕು. ಜಿಲ್ಲೆಯಲ್ಲಿ ಬಿಸಿಲಿನ ತಾಪ ಹೆಚ್ಚಳವಾಗಿರುವ ಕಾರಣ ಪರೀಕ್ಷಾ ಕೊಠಡಿಗಳಲ್ಲಿ ಫ್ಯಾನ್, ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯಗಳ ಕಲ್ಪಿಸಬೇಕು’ ಎಂದು ಸೂಚಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ತೇಲಿ, ಡಿಡಿಪಿಯು ಪ್ರಕಾಶ ಜೇವೂರ, ಪ್ರಭಾರ ಡಿಡಿಪಿಐ ಎಚ್.ಜಿ. ಮಿರ್ಜಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.