ಬಾಗಲಕೋಟೆ: ಮಳೆಗಾಲದಲ್ಲಿ ಎದುರಾಗಬಹುದಾದ ತುರ್ತು -ಪ್ರವಾಹ ಪರಿಸ್ಥಿತಿ ಸಮರ್ಥವಾಗಿ ಎದುರಿಸಲು ಮುನ್ನೆಚ್ಚರಿಕೆಯಾಗಿ ಸನ್ನದ್ಧರಾಗಿರಬೇಕು ಎಂದು ಜಿಲ್ಲಾಧಿಕಾರಿ ಸಂಗಪ್ಪ, ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪ್ರವಾಹ ಪರಿಸ್ಥಿತಿ ನಿಯಂತ್ರಣಕ್ಕೆ ನಿಯೋಜಿಸಲಾದ ನೋಡಲ್ ಅಧಿಕಾರಿಗಳ ಹಾಗೂ ವಿವಿಧ ಅಧಿಕಾರಿಗಳ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಜನ-ಜಾನುವಾರುಗಳ ರಕ್ಷಣೆ, ಪುರ್ನವಸತಿ, ಪರಿಹಾರ, ಕಾಳಜಿ ಕೇಂದ್ರಗಳ ಸ್ಥಾಪನೆಗೆ ಸಿದ್ಧರಿರಬೇಕು ಎಂದರು.
ರಕ್ಷಣಾ ಸಾಮಗ್ರಿಗಳನ್ನು ಸುಸಜ್ಜಿತವಾಗಿಟ್ಟುಕೊಳ್ಳಬೇಕು. ನುರಿತ ಈಜುಗಾರರು, ಹಾವು ಹಿಡಿಯುವವರ ಪಟ್ಟಿ ಸಿದ್ಧಪಡಿಸಿಟ್ಟುಕೊಳ್ಳಬೇಕು. ಪ್ರವಾಹ ಪರಿಸ್ಥಿತಿ ನಿಯಂತ್ರಣಕ್ಕಾಗಿ ನೇಮಕ ಮಾಡಲಾದ ನೋಡಲ್ ಅಧಿಕಾರಿಗಳು ಸಂಬಂಧಿಸಿದ ತಾಲ್ಲೂಕಿನ ಗ್ರಾಮಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಬೇಕು. ಪ್ರತಿ ವಾರಕ್ಕೊಮ್ಮೆ ಸಭೆ ನಡೆಸಿ, ಆ ವರದಿಯನ್ನು ಜಿಲ್ಲಾಡಳಿತದ ಗಮನಕ್ಕೆ ತರಬೇಕು ಎಂದು ಹೇಳಿದರು.
ಪ್ರವಾಹ ಪೀಡಿತ ಪ್ರದೇಶಗಳನ್ನು ಮುಂಚಿತವಾಗಿ ಗುರುತಿಸಿಕೊಂಡು ಅಗತ್ಯ ಮುಂಜಾಗ್ರತಾ ಕ್ರಮ ವಹಿಸಬೇಕು. ನದಿ ಪಾತ್ರದ ಗ್ರಾಮಗಳಲ್ಲಿ ಡಂಗುರ ಸಾರುವುದು ಸೇರಿದಂತೆ ಸ್ವಚ್ಛವಾಹಿನಿ ಮೂಲಕ ಜನರಿಗೆ ಜಾಗೃತಿ ಮೂಡಿಸಬೇಕು. ಕೆರೆ ಅಥವಾ ಹೊಳೆ ತುಂಬಿದ ಸಂದರ್ಭದಲ್ಲಿ ಆಯಾ ಪ್ರದೇಶದ ಜನರು ಹೊಳೆ, ಕೆರೆಗಳಿಗೆ ಇಳಿಯದಂತೆ ಮುನ್ನೆಚ್ಚರಿಕೆ ವಹಿಸಬೇಕು. ಜನ-ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು, ಕಾಳಜಿ ಕೇಂದ್ರ ಸ್ಥಾಪಿಸಲು ಸೂಕ್ತ ಸ್ಥಳಗಳನ್ನು ಗುರುತಿಸಬೇಕು. ಸಹಾಯವಾಣಿ ಆರಂಭಿಸಬೇಕು ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ, ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ತೇಲಿ, ಜಮಖಂಡಿ ಉಪ ವಿಭಾಗಾಧಿಕಾರಿ ಶ್ವೇತಾ ಬೀಡಿಕರ ಉಪಸ್ಥಿತರಿದ್ದರು.
ಲೋಪವಾದರೆ ಕ್ರಮ
ಬಾಗಲಕೋಟೆ: ಪ್ರಕೃತಿ ವಿಕೋಪ ಪರಿಹಾರ ಕಾರ್ಯದಲ್ಲಿ ಯಾವುದೇ ಲೋಪವಾದಲ್ಲಿ ಸಂಬಂಧಿಸಿದ ಅಧಿಕಾರಿಗಳ ಮೇಲೆ ವಿಪತ್ತು ನಿರ್ವಹಣಾ ಕಾಯ್ದೆ ಅನ್ವಯ ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಸಂಗಪ್ಪ ಎಚ್ಚರಿಸಿದರು. ವೈದ್ಯಕೀಯ ವ್ಯವಸ್ಥೆಯೊಂದಿಗೆ ಔಷಧ ದಾಸ್ತಾನು ಸಂಗ್ರಹಿಸಿಟ್ಟುಕೊಳ್ಳಬೇಕು. ಮಳೆ ನೀರು ಒಂದೆಡೆ ನಿಲ್ಲದಂತೆ ನೋಡಿಕೊಳ್ಳುವುದರ ಜತೆಗೆ ಜನರಲ್ಲಿ ಜಾಗೃತಿ ಮೂಡಿಸಬೇಕು. ಮಳೆಗಾಲದ ಸಂದರ್ಭದಲ್ಲಿ ಗಿಡಗಳು ಬಿದ್ದು ಯಾವುದೇ ಜೀವ ಹಾನಿ ಸಂಭವಿಸದಂತೆ ನೋಡಿಕೊಳ್ಳಬೇಕು ಎಂದರು. ಮಳೆ-ಗಾಳಿ ರಭಸಕ್ಕೆ ವಿದ್ಯುತ್ ತಂತಿ ಹರಿದು ಬಿದ್ದ ಸಂದರ್ಭದಲ್ಲಿ ಹೆಸ್ಕಾಂ ಇಲಾಖೆ ಅಧಿಕಾರಿಗಳು ತಕ್ಷಣ ಇಂತಹ ಅಪಾಯವನ್ನುಂಟು ಮಾಡುವ ತಂತಿ ಕಂಬಗಳ ತೆರವುಗೊಳಿಸಬೇಕು. ಯಾವುದೇ ಘಟನೆ ಸಂಭವಿಸಿದಲ್ಲಿ ಅಧಿಕಾರಿಗಳನ್ನೇ ನೇರ ಹೊಣೆಗಾರನ್ನಾಗಿ ಮಾಡಲಾಗುವುದು ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.