ADVERTISEMENT

ಬಾಗಲಕೋಟೆಯಲ್ಲಿ ಫೆ.20 ರಂದು ಗ್ಯಾರಂಟಿ ಯೋಜನೆ ಉತ್ಸವ: ಶಶಿಧರ ಕುರೇರ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2026, 7:12 IST
Last Updated 18 ಫೆಬ್ರುವರಿ 2026, 7:12 IST
ಬಾಗಲಕೋಟೆಯಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆ ಉತ್ಸವದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡಿದ್ದ ಗ್ಯಾರಂಟಿ ಸಮಿತಿ ಸದಸ್ಯರು, ಅಧಿಕಾರಿಗಳು
ಬಾಗಲಕೋಟೆಯಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆ ಉತ್ಸವದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡಿದ್ದ ಗ್ಯಾರಂಟಿ ಸಮಿತಿ ಸದಸ್ಯರು, ಅಧಿಕಾರಿಗಳು   

ಬಾಗಲಕೋಟೆ: ನವನಗರದ ಜಿಲ್ಲಾ ಕಲಾಭವನದಲ್ಲಿ ಫೆ.20 ರಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಯ ಉತ್ಸವ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತ ರೀತಿಯಲ್ಲಿ ನಡೆಸಲು ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಸಂಗಪ್ಪ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿ ನೂತನ ಸಭಾಭವನದಲ್ಲಿ ಮಂಗಳವಾರ ಜರುಗಿದ ಪಂಚ ಗ್ಯಾರಂಟಿ ಯೋಜನೆಯ ಕಾರ್ಯಾಗಾರ ಕಾರ್ಯಕ್ರಮದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ವ್ಯವಸ್ಥಿತ ರೀತಿಯಲ್ಲಿ ಕಾರ್ಯಕ್ರಮ ನಡೆಸಲು ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಸಮಿತಿಗಳಿಗೆ ವಹಿಸಿಕೊಟ್ಟ ಕಾರ್ಯಗಳನ್ನು ಜವಾಬ್ದಾರಿಯಿಂದ ನಿರ್ವಹಿಸುವಂತೆ ಸೂಚನೆ ನೀಡಿದರು.

ADVERTISEMENT

ರಾಜ್ಯ ಸರಕಾರ ಅನುಷ್ಠಾನಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳ ಯಶಸ್ಸನ್ನು ಸಾರಲು ಹಾಗೂ ಅರ್ಹ ಫಲಾನುಭವಿಗಳಿಗೆ ಯೋಜನೆಗಳ ಕುರಿತಾಗಿ ಮಾಹಿತಿ ನೀಡುವ ಉದ್ದೇಶದಿಂದ ಜಿಲ್ಲಾ ಮಟ್ಟದಲ್ಲಿ ಗ್ಯಾರಂಟಿ ಯೋಜನೆ ಉತ್ಸವ ಹಮ್ಮಿಕೊಳ್ಳಲಾಗುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆಂದು ಜಿಲ್ಲಾಧಿಕಾರಿ ತಿಳಿಸಿದರು.

3 ಸಾವಿರಕ್ಕೂ ಹೆಚ್ಚು ಜನ ಯೋಜನಾ ಫಲಾನುಭವಿಗಳು ಭಾಗವಹಿಸುತ್ತಿದ್ದು, ಅವರಿಗೆ ಅನುಕೂಲವಾಗುವ ರೀತಿಯಲ್ಲಿ ಬಸ್‌ ವ್ಯವಸ್ಥೆ ಮಾಡುವಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಜಿಲ್ಲಾ ಸಂಚಾರಿ ಅಧಿಕಾರಿಗಳಿಗೆ ತಿಳಿಸಿದರು. ಕಲಾಭವನದ ಆವರಣದಲ್ಲಿ ಗ್ಯಾರಂಟಿ ಯೋಜನೆಗಳ ಮಾಹಿತಿ ಸೇರಿದಂತೆ ವಿವಿಧ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳನ್ನು ಹಾಕುವ ವ್ಯವಸ್ಥೆ ಮಾಡಬೇಕು ಎಂದು ಸಿಇಒ ಕುರೇರ ಸೂಚಿಸಿದರು.

ಗ್ಯಾರಂಟಿ ಯೋಜನೆಯ ಸದುಪಯೋಗ ಪಡೆದುಕೊಂಡ ಫಲಾನುಭವಿಗಳ ಪಟ್ಟಿ ನೀಡಿದಲ್ಲಿ ಅವರಿಗೆ ಅನಿಸಿಕೆಗಳನ್ನು ವ್ಯಕ್ತಪಡಿಸಲು ಅವಕಾಶ ಕಲ್ಪಿಸಲಾಗುತ್ತಿದೆ ಎಂದು ತಿಳಿಸಿದರು.

ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಅನೀಲಕುಮಾರ ದಡ್ಡಿ ಮಾತನಾಡಿ, ಜಿಲ್ಲೆಯ ಎಲ್ಲ ತಾಲ್ಲೂಕು ಮಟ್ಟದ ಅನುಷ್ಠಾನ ಪ್ರಾಧಿಕಾರದ ಸದಸ್ಯರುಗಳು ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಫಲಾನುಭವಿಗಳ ಕರೆತರುವ ಕೆಲಸ ಮಾಡಬೇಕು. ಉತ್ಸವದಲ್ಲಿ ವಿವಿಧ ಕಲಾತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆಗೆ ಕ್ರಮಕೈಗೊಳ್ಳುವಂತೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಎನ್.ವೈ.ಬಸರಿಗಿಡದ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಜಿಲ್ಲಾ ಉಪಾಧ್ಯಕ್ಷೆ ಜಯಶ್ರೀ ತಿಮ್ಮಾಪೂರ, ರಫೀಕ್ ಬೈರಕದಾರ್, ಶಿವಪ್ಪ ಕೊನೇರಿ, ರವೀಂದ್ರ ಯಡಹಳ್ಳಿ, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಎಸ್.ಎಂ.ಕಾಂಬಳೆ, ಮುಖ್ಯ ಯೋಜನಾಧಿಕಾರಿ ಅಲ್ಲಮಪ್ರಭು ಸೇರಿದಂತೆ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷರು, ಯೋಜನೆ ಅನುಷ್ಠಾನ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.