ADVERTISEMENT

ಬಾಗಲಕೋಟೆ | ತಾಯಿ ಮರಣ ತಡೆಗೆ ಕ್ರಮವಹಿಸಿ: ಜಿಲ್ಲಾ ಪಂಚಾಯಿತಿ ಸಿಇಒ ಶಶಿಧರ ಕುರೇರ

ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2025, 4:44 IST
Last Updated 20 ಸೆಪ್ಟೆಂಬರ್ 2025, 4:44 IST
<div class="paragraphs"><p>ಬಾಗಲಕೋಟೆಯಲ್ಲಿ ಶುಕ್ರವಾರ ನಡೆದ ಆರೋಗ್ಯ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಶಶಿಧರ ಕುರೇರ ಮಾತನಾಡಿದರು</p></div>

ಬಾಗಲಕೋಟೆಯಲ್ಲಿ ಶುಕ್ರವಾರ ನಡೆದ ಆರೋಗ್ಯ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಶಶಿಧರ ಕುರೇರ ಮಾತನಾಡಿದರು

   

ಬಾಗಲಕೋಟೆ: ಅಪೌಷ್ಟಿಕತೆ, ರಕ್ತಹೀನತೆ ಕೊರತೆ ನೀಗಿಸುವ ನಿಟ್ಟಿನಲ್ಲಿ ಸರ್ಕಾರ ಹಲವು ಯೋಜನೆಗಳನ್ನು ರೂಪಿಸಿದೆ. ಅವುಗಳನ್ನು ಸರಿಯಾಗಿ ಕಾರ್ಯರೂಪಕ್ಕೆ ತರುವ ಮೂಲಕ ತಾಯಿ ಮರಣ ಸಂಭವಿಸದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ, ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಶುಕ್ರವಾರ ಆರೋಗ್ಯ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಂತ್ರಜ್ಞಾನ ಬಹಳ ಮುಂದುವರೆದಿದ್ದು, ಅದನ್ನು ಬಳಸಿಕೊಂಡು ಬದುಕಿಸಲು ಪ್ರಯತ್ನ ಮಾಡಬೇಕು. ಗರ್ಭಿಣಿ ಆರೋಗ್ಯದ ಮೇಲೆ ಅಪೌಷ್ಟಿಕತೆ ಪರಿಣಾಮ ಬೀರದಂತೆ ಆಶಾ ಕಾರ್ಯಕರ್ತೆಯರು ನಿಗಾವಹಿಸಬೇಕು ಎಂದರು.

ADVERTISEMENT

ಶಾಲಾ ದಾಖಲಾತಿ ಆಧಾರದ ಮೇಲೆ ತಾಯಿ ಕಾರ್ಡ್ ನೀಡಿ. ಬಾಲ್ಯ ವಿವಾಹ ನಡೆಯದಂತೆ ನೋಡಿಕೊಳ್ಳಬೇಕು.  ಬಾಲ್ಯವಿವಾಹ ನಡೆಯುತ್ತಿದ್ದಲ್ಲಿ ವಿವಿಧ ಇಲಾಖೆಯ ನೆರವಿನಿಂದ ತಡೆಯುವ ಕಾರ್ಯವಾಗಬೇಕು ಎಂದು ತಿಳಿಸಿದರು.

ಅವಶ್ಯಕತೆಗೆ ಅನುಗುಣವಾಗಿ ಔಷಧ ಇಂಡೆಂಟ್ ನೀಡಬೇಕು. ಹೆಚ್ಚುವರಿಯಾಗಿ ಖರೀದಿಸಿದ ಔಷಧವನ್ನು ಇ-ಔಷಧ ಪೋರ್ಟಲ್‌ನಲ್ಲಿ ದಾಖಲು ಮಾಡಬೇಕು. ತಾಲ್ಲೂಕು ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಸರಿಯಾದ ಸಮಯಕ್ಕೆ ಬರುತ್ತಿರುವ ಬಗ್ಗೆ ಮೇಲಧಿಕಾರಿಗಳು ನಿಗಾ ವಹಿಸಬೇಕು ಎಂದು ಸೂಚಿಸಿದರು.

ರಾಷ್ಟ್ರೀಯ ಟಿಬಿ ನಿರ್ಮೂಲನೆ ಯೋಜನೆಯಡಿ ಜಿಲ್ಲೆಯಲ್ಲಿ ಈಗಾಗಲೇ 27  ಗ್ರಾಮಗಳನ್ನು ಟಿಬಿ ಮುಕ್ತ ಗ್ರಾಮಗಳನ್ನಾಗಿ ಘೋಷಿಸಲಾಗಿದೆ. ಇನ್ನು 64 ಗ್ರಾಮಗಳನ್ನು ಘೋಷಿಸಲು ಶಿಫಾರಸು ಮಾಡಲಾಗುತ್ತಿದೆ. ಗ್ರಾಮಗಳಲ್ಲಿ ಪರೀಕ್ಷೆ ಗುಣಮಟ್ಟದಿಂದ ಕೂಡಿರಬೇಕು. ಟಿಬಿ ಮುಕ್ತ ಗ್ರಾಮ ಎಂದು ಘೋಷಿಸಿದ ಮೇಲೆ ಪ್ರಕರಣಗಳು ಕಂಡು ಬರಬಾರದು ಎಂದರು.

ಗೃಹ ಆರೋಗ್ಯ ಯೋಜನೆಯಡಿ ಗ್ರಾಮೀಣ ಪ್ರದೇಶದ ಮನೆ, ಮನೆಗೆ ತೆರಳಿ 30 ವರ್ಷ ಮೇಲ್ಪಟ್ಟವರಿಗೆ 14 ಅಸಾಂಕ್ರಾಮಿಕ ರೋಗಗಳನ್ನು ಪತ್ತೆ ಹಚ್ಚಿ ಉಚಿತವಾಗಿ ಔಷಧ ವಿತರಣೆ ನೀಡುವ ಕಾರ್ಯ ಸರಿಯಾಗಿ ನಡೆಯಬೇಕಿದೆ ಎಂದರು.

ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆ ಮತ್ತು ಪ್ರಧಾನಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆಗಳ ಅರಿವು ಮೂಡಿಸುವ ಕೆಲಸವಾಗಬೇಕು. ಜಿಲ್ಲಾ ತಂಬಾಕು ನಿಯಂತ್ರಣ ಘಟಕವು ಜಿಲ್ಲೆಯಲ್ಲಿ ತಂಬಾಕು ಮಾರಾಟ ಮಾಡುವ ಅಂಗಡಿಗಳ ಮೇಲೆ ಹೆಚ್ಚಿನ ದಾಳಿ ನಡೆಸಬೇಕು. ಶಾಲೆ ಮತ್ತು ಕಾಲೇಜುಗಳಲ್ಲಿ ಈ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು. ಶಾಲಾ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟವಾಗುವುದನ್ನು ತಡೆಯಬೇಕು ಎಂದು ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮಂಜುನಾಥ ಡಿ.ಎನ್., ಜಿಲ್ಲಾ ಶಸ್ತ್ರ ಚಿಕಿತ್ಸಕ ಮಹೇಶ ಕೋಣೆ, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ರಾಜಕುಮಾರ ಯರಗಲ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ಎಸ್.ಜಿ.ಮಠ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.