ADVERTISEMENT

ತಹಶೀಲ್ದಾರ್ ಹತ್ಯೆ ಖಂಡಿಸಿ ಪ್ರತಿಭಟನೆ

ಕೆಲಸದ ಸ್ಥಳದಲ್ಲಿ ಸರ್ಕಾರಿ ನೌಕರರಿಗೆ ರಕ್ಷಣೆ ನೀಡಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 10 ಜುಲೈ 2020, 11:32 IST
Last Updated 10 ಜುಲೈ 2020, 11:32 IST
ಬಾಗಲಕೋಟೆಯಲ್ಲಿ ಶುಕ್ರವಾರ ಸರ್ಕಾರಿ ನೌಕರರ ಸಂಘದ ವತಿಯಿಂದ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಅವರಿಗೆ ಮನವಿಪತ್ರ ಸಲ್ಲಿಸಿದರು
ಬಾಗಲಕೋಟೆಯಲ್ಲಿ ಶುಕ್ರವಾರ ಸರ್ಕಾರಿ ನೌಕರರ ಸಂಘದ ವತಿಯಿಂದ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಅವರಿಗೆ ಮನವಿಪತ್ರ ಸಲ್ಲಿಸಿದರು   

ಬಾಗಲಕೋಟೆ: ಬಂಗಾರಪೇಟೆ ತಹಶೀಲ್ದಾರ್ ಬಿ.ಕೆ.ಚಂದ್ರಮೌಳೇಶ್ವರ ಹತ್ಯೆ ಖಂಡಿಸಿ ಹಾಗೂ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಇಲ್ಲಿನ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಸೂಕ್ತ ರಕ್ಷಣೆ ನೀಡುವಂತೆ ಒತ್ತಾಯಿಸಿ ಸಂಘದ ಸದಸ್ಯರು ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ರಾಜ್ಯದಲ್ಲಿ ಸರ್ಕಾರಿ ನೌಕರರು ಕಾರ್ಯನಿರ್ವಹಿಸುವ ವೇಳೆ ಇಂತಹ ಘಟನೆಗಳು ಆಗಿಂದಾಗ್ಗೆ ಮರುಕಳಿಸುತ್ತಿವೆ. ಕ್ಷೇತ್ರ ಇಲಾಖೆಗಳಾದ ಕಂದಾಯ, ಭೂಮಾಪನ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್, ಆರೋಗ್ಯ ಇಲಾಖೆ ಸೇರಿದಂತೆ ಹಲವು ಇಲಾಖೆಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ಮೇಲೆ ಇಂತಹ ಹಲ್ಲೆ ಹಾಗೂ ದೌರ್ಜನ್ಯಗಳು ನಡೆಯುತ್ತಿವೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ADVERTISEMENT

ಸರ್ಕಾರಿ ನೌಕರರ ಮೇಲೆ ಹಲ್ಲೆ ನಡೆಸುವವರನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು. ನೌಕರರು ನಿರ್ಭೀತಿಯಿಂದ ಕೆಲಸ ಮಾಡುವ ವಾತಾವರಣ ಸೃಷ್ಟಿಸಬೇಕು. ಹತ್ಯೆಗೀಡಾದ ತಹಶೀಲ್ದಾರ್ ಕುಟುಂಬಕ್ಕೆ ಗರಿಷ್ಠ ಮೊತ್ತದ ಪರಿಹಾರ ನೀಡಿ ಅವರ ಕುಟುಂಬ ವರ್ಗದವರಿಗೆ ಉದ್ಯೋಗ ನೀಡಬೇಕು. ಜೊತೆಗೆ ಸರ್ಕಾರದಿಂದ ದೊರೆಯಬೇಕಾದ ಎಲ್ಲ ಸೌಲಭ್ಯಗಳನ್ನು ಶೀಘ್ರವಾಗಿ ಬಿಡುಗಡೆ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಬಿ.ಬಳ್ಳಾರಿ, ಖಜಾಂಚಿ ಎಸ್.ಕೆ.ಹಿರೇಮಠ, ಕಾರ್ಯದರ್ಶಿ ವಿಠ್ಠಲ ಎಲ್.ವಾಲೀಕಾರ, ತಾಲ್ಲೂಕು ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಅಧ್ಯಕ್ಷ ಶಶಿಕಾಂತ ಪೂಜಾರಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಕಾರ್ಯದರ್ಶಿ ಬಿ.ಟಿ.ಕವಳಿ, ತಾಲ್ಲೂಕು ಘಟಕದ ಅಧ್ಯಕ್ಷ ಸಿ.ಬಿ.ಕಲ್ಲೂಳ, ಕಾರ್ಯದರ್ಶಿ ಎಸ್.ಎ.ಸಾರಂಗಮಠ ಪ್ರತಿಭಟನೆ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.