ಬಾಗಲಕೋಟೆ: ವಿವಿಧ ಇಲಾಖೆಯ ಸಹಭಾಗಿತ್ವದಲ್ಲಿ ಮಹಿಳೆ ಮತ್ತು ಮಕ್ಕಳಿಗಾಗಿರುವ ಸರ್ಕಾರದ ಯೋಜನೆಗಳನ್ನು ತಲುಪಿಸುವ ಕಾರ್ಯವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಮಾಡಬೇಕು ಎಂದು ಜಿಲ್ಲಾಧಿಕಾರಿ ಸಂಗಪ್ಪ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಾಂತ್ವನ ಕೇಂದ್ರಗಳ ಬಗ್ಗೆ ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ತಿಳಿವಳಿಕೆ ಮೂಡಿಸಬೇಕು. ಪ್ರಧಾನಮಂತ್ರಿ ಮಾತೃ ವಂದನ ಯೋಜನೆಯಡಿ ಗರ್ಭಿಣಿಯರಿಗೆ ನೀಡಲಾಗುತ್ತಿರುವ ಸಹಾಯ ಧನವು ಸಮರ್ಪಕವಾಗಿ ಬಳಕೆಯಾಗುತ್ತಿರುವ ಬಗ್ಗೆ ಪರಿಶೀಲಿಸಬೇಕು ಎಂದರು.
ಗರ್ಭಿಣಿಯರಿಗೆ ಪೌಷ್ಟಿಕ ಆಹಾರ ಸೇವಿಸಲು ಅಂಗನವಾಡಿ ಕಾರ್ಯಕರ್ತರು ಮನವರಿಕೆ ಮಾಡಬೇಕು. ಜೊತೆಗೆ ಪ್ರತಿ ಗರ್ಭಿಣಿಯರಿಗೂ ಪರೀಕ್ಷೆ ಮಾಡಿಸಿ, ಹತ್ತಕ್ಕಿಂತ ಕಡಿಮೆ ಇರುವ ಹಿಮೋಗ್ಲೋಬಿನ್ ಇರುವ ಮಹಿಳೆಯರಲ್ಲಿ ಆರೋಗ್ಯದ ಅರಿವು ಮೂಡಿಸಬೇಕು ಎಂದು ಹೇಳಿದರು.
ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಪ್ರತಿ ದಿನ ಮೊಟ್ಟೆ ವಿತರಿಸುವ ಬಗ್ಗೆ ಅನುದಾನ ಹಾಗೂ ಅನುಮತಿಗಾಗಿ ಪ್ರಸ್ತಾವ ಸಲ್ಲಿಸುವಂತೆ ಸೂಚಿಸಿದರು. ಅಪೌಷ್ಟಿಕತೆ ಇಲ್ಲದಂತೆ ಮಾಡಬೇಕು. ಸಖಿ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಿ ಅವನ್ನು ಪೊಲೀಸ್ ಠಾಣೆಗೆ ಲಿಂಕ್ ಮಾಡಬೇಕು ಎಂದು ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಮಾತನಾಡಿ, ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳಿಗೆ ಕಟ್ಟಡ ನಿರ್ಮಾಣ ಮಾಡಲು ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ನಿವೇಶನಗಳನ್ನು ಗುರುತಿಸಿ ಇಲಾಖೆಗೆ ಹಸ್ತಾಂತರ ಮಾಡಿಕೊಳ್ಳಲು ಅಗತ್ಯ ಕ್ರಮ ವಹಿಸಬೇಕು ಎಂದರು.
ಎಲ್ಲ ಅಂಗನವಾಡಿ ಕೇಂದ್ರಗಳಿಗೆ ಶೌಚಾಲಯ, ವಿದ್ಯುತ್ ಸಂಪರ್ಕ, ಫ್ಯಾನ್, ನೀರು ಇತ್ಯಾದಿ ಮೂಲಸೌಕರ್ಯಗಳನ್ನು ಕಲ್ಪಿಸಲು ಹಾಗೂ ಕಾಲ, ಕಾಲಕ್ಕೆ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಬೇಕು ಎಂದು ಸೂಚಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪ್ರಭಾಕರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮಂಜುನಾಥ ಡಿ, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ಜಿಲ್ಲಾ ನಿರೂಪಣಾಧಿಕಾರಿ ಮಂಜುನಾಥ ಪರಸನ್ನವರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಅಧಿಕಾರಿ ಸುಮಂಗಲಾ ಹಿರೇಮನಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವೀಣಾ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.