
ಬಾಗಲಕೋಟೆ: ವಿದ್ಯಾಗಿರಿ, ನವನಗರ ಸೇರಿದಂತೆ ಜಿಲ್ಲೆಯ 33 ಪರೀಕ್ಷಾ ಕೇಂದ್ರಗಳಲ್ಲಿ ಡಿ.7ರಂದು ನಡೆಯುವ ಟಿಇಟಿ ಪರೀಕ್ಷೆಯನ್ನು ಪಾರದರ್ಶನ ಹಾಗೂ ಕಟ್ಟುನಿಟ್ಟಾಗಿ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಸಂಗಪ್ಪ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಟಿಇಟಿ ಪರೀಕ್ಷೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಟಿಇಟಿ ಪರೀಕ್ಷೆಯ ಪತ್ರಿಕೆ-1 ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 12ರವರೆಗೆ, ಪತ್ರಿಕೆ-2 ಮಧ್ಯಾಹ್ನ 2 ರಿಂದ ಸಂಜೆ 4.30ರವರೆಗೆ ನಡೆಯಲಿದೆ. 9,075 ಪರೀಕ್ಷಾರ್ಥಿಗಳು ಹಾಜರಾಗಲಿದ್ದಾರೆ ಎಂದರು.
ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬ ಎ ಅಥವಾ ಬಿ ವೃಂದದ ಅಧಿಕಾರಿಯನ್ನು ಸ್ಥಾನಿಕ ಜಾಗೃತ ಅಧಿಕಾರಿಯಾಗಿ, ತಲಾ 5-6 ಕೇಂದ್ರಕ್ಕೆ ಒಬ್ಬ ಎ ವೃಂದದ ಜಿಲ್ಲಾ ಮಟ್ಟದ ಅಧಿಕಾರಿಯನ್ನು ವೀಕ್ಷಕರನ್ನಾಗಿ ನೇಮಕ ಮಾಡಲಾಗುತ್ತಿದೆ. ದೋಷ ಉಂಟಾಗದಂತೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮೇಲ್ವಿಚಾರಣೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.
ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರದ ಆವರಣದೊಳಗೆ ಪ್ರವೇಶಿಸುವ ಮೊದಲು ಪ್ರವೇಶ ಪತ್ರದಲ್ಲಿನ ಭಾವಚಿತ್ರದೊಂದಿಗೆ ಮುಖಚಹರೆಯನ್ನು ತಾಳೆ ನೋಡುವುದು ಹಾಗೂ ಫ್ರಿಸ್ಕಿಂಗ್ ಕಾರ್ಯದ ನಂತರವೇ ಪರೀಕ್ಷಾ ಕೇಂದ್ರ, ಕೊಠಡಿಯೊಳಗೆ ಪ್ರವೇಶ ನೀಡಲಾಗುವುದು. ವಿಶೇಷ ಅಗತ್ಯಯುಳ್ಳ ಅಭ್ಯರ್ಥಿಗಳಿಗೆ ಸೂಕ್ತ ಆಸನ ವ್ಯವಸ್ಥೆ ಹಾಗೂ ಅಂಗವಿಕಲತೆಯ ಪ್ರಮಾಣವನ್ನಾಧರಿಸಿ ಪರೀಕ್ಷೆ ಬರೆಯಲು ನಿಯಮಾನುಸಾರ ಹೆಚ್ಚಿನ ಕಾಲಾವಕಾಶ ಕ್ರಮಕೈಗೊಳ್ಳಬೇಕು ಎಂದು ತಿಳಿಸಿದರು.
ಸಿಸಿಟಿವಿ ಕ್ಯಾಮೆರಾ, ಪ್ರಿಸ್ಕಿಂಗ್ ಹಾಗೂ ಬಾಡಿ ಕ್ಯಾಮೆರಾ ವ್ಯವಸ್ಥೆಯನ್ನು ಪರೀಕ್ಷಾ ಪ್ರಾಧಿಕಾರ ಮಾಡುತ್ತಿದ್ದು, ಸಿಸಿಟಿವಿ ಕ್ಯಾಮೆರಾಗಳಿಗೆ ವೆಬ್ಕಾಸ್ಟಿಂಗ್ ಜಿಲ್ಲಾ ಹಾಗೂ ರಾಜ್ಯ ಹಂತದಲ್ಲಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ನಿರ್ವಹಿಸಬೇಕು ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ, ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ತೇಲಿ, ಡಿಡಿಪಿಐ ಅಜಿತ್ ಮನ್ನಿಕೇರಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.