ತೊಗರಿ
ಬಾಗಲಕೋಟೆ: ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಂಗಪ್ಪ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರತಿ ಕ್ವಿಂಟಲ್ಗೆ ₹8 ಸಾವಿರದಂತೆ ಪ್ರತಿ ಎಕರೆಗೆ 4 ಕ್ವಿಂಟಲ್ನಂತೆ ಫ್ರೂಟ್ಸ್ ತಂತ್ರಾಂಶದಲ್ಲಿ ಲಭ್ಯವಾಗುವ ರೈತರು ತೊಗರಿ ಬೆಳೆದ ವಿಸ್ತೀರ್ಣಕ್ಕೆ ಅನುಗುಣವಾಗಿ ತೊಗರಿ ಖರೀದಿಸಲಾಗುತ್ತದೆ ಎಂದರು.
ನೋಂದಣಿ ಕಾರ್ಯ 80 ದಿನಗಳ ವರೆಗೆ ನಡೆಯಲಿದ್ದು, ಖರೀದಿ ಪ್ರಕ್ರಿಯೆ 90 ದಿನಗಳವರೆಗೆ ನಡೆಯಲಿದೆ. ಖರೀದಿ ಪ್ರಕ್ರಿಯೆಗೆ ಎಲ್ಲ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಶೇ2 ರಷ್ಟು ಅನ್ಯ ವಸ್ತುಗಳು (ದೂಳು, ಹರಳು, ಹೊಟ್ಟು), ಶೇ3ರಷ್ಟು ಬೆರಕೆ ಮಿಶ್ರಣ, ಹಾಳಾದ ಕಾಳುಗಳು, ಅಪೂರ್ಣ ಮತ್ತು ಕುಗ್ಗಿದ ಕಾಳುಗಳು, ಶೇ4 ರಷ್ಟು ಒಡೆದ ಕಾಳುಗಳು, ಹುಳುಕಾದ ಕಾಳುಗಳು ಹಾಗೂ ಶೇ12 ರಷ್ಟು ತೇವಾಂಶ ಪರೀಕ್ಷೆ ಮಾಡಲಾಗುತ್ತದೆ. ಜಿಲ್ಲೆಯ ಎಲ್ಲ ರೈತರು ಖರೀದಿ ಕೇಂದ್ರಗಳಲ್ಲಿ ನೋಂದಣಿ ಮಾಡಿಸುವಾಗ ಆಧಾರ್ ಕಾರ್ಡ್, ಪಹಣಿ ಪತ್ರಿಕೆ, ಆಧಾರ್ ಲಿಂಕ್ ಆಗಿರುವ ರಾಷ್ಟ್ರೀಕೃತ ಬ್ಯಾಂಕಿನ ಪಾಸ್ಬುಕ್ ಜೆರಾಕ್ಸ್ ಪ್ರತಿ ಸಲ್ಲಿಸಬೇಕು ಎಂದು ತಿಳಿಸಿದರು.
ಮಾಹಿತಿಗೆ ಶಾಖಾ ವ್ಯವಸ್ಥಾಪಕರು, ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳಿ (94498 64458, 89043 15339 ) ಹಾಗೂ ಆಯಾ ತಾಲ್ಲೂಕಿನ ಎಪಿಎಂಸಿ ಕಾರ್ಯದರ್ಶಿ ಅವರನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.
ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ರುದ್ರೇಶಪ್ಪ, ಸಹಕಾರ ಇಲಾಖೆಯ ಉಪನಿಬಂಧಕ ದಾನಯ್ಯ ಹಿರೇಮಠ, ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕ ವಿ.ಡಿ.ಪಾಟೀಲ, ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳಿ ಜಿಲ್ಲಾ ವ್ಯವಸ್ಥಾಪಕಿ ಸುಪ್ರಿಯಾ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.