ಬಾಗಲಕೋಟೆ: ಜಿಲ್ಲೆ ಕೂಡಲಸಂಗಮದಲ್ಲಿ ಭಾನುವಾರ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಟ್ರಸ್ಟ್ನ ಕಾರ್ಯಕಾರಿಣಿ ಸಭೆಯಲ್ಲಿ ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಉಚ್ಚಾಟಿಸಲು ನಿರ್ಧರಿಸಲಾಗಿದೆ.
ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ನೀಲಕಂಠ ಅಸೂಟಿ, ಟ್ರಸ್ಟ್ನಲ್ಲಿ ಉಚ್ಚಾಟನೆ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇನ್ನು ಮುಂದೆ ಪೀಠಕ್ಕೂ, ಅವರಿಗೆ ಸಂಬಂಧವಿಲ್ಲ ಎಂದು ಅವರು ಹೇಳಿದರು.
ಹುಬ್ಬಳ್ಳಿಯಲ್ಲಿ ನಡೆದ ಜನಪ್ರತಿನಿಧಿಗಳ ಸಭೆಯಲ್ಲಿ ಧರ್ಮ ಕಾಲಂನಲ್ಲಿ ಹಿಂದೂ ಬರೆಯಿಸಲು, ಜಾತಿ ಕಾಲಂನಲ್ಲಿ ಲಿಂಗಾಯತ ಎಂದು ಬರೆಸಲು ಹೇಳಿದ್ದಾರೆ. ಟ್ರಸ್ಟ್ ಬಸವ ತತ್ವದಲ್ಲಿ ನಡೆಯುತ್ತಿರುವುದರಿಂದ ಇದು ಟ್ರಸ್ಟ್ ನಿರ್ಧಾರಕ್ಕೆ ವಿರೋಧವಾಗಿದೆ ಎಂದರು.
ಟ್ರಸ್ಟ್ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಮಾತನಾಡಿ, ಸ್ವಾಮೀಜಿ ಅವರು ವೈಯಕ್ತಿಕವಾಗಿ ಯಾವುದೇ ಆಸ್ತಿ ಮಾಡಿಕೊಳ್ಳಬಾರದು ಎಂದಿದೆ. ಆದರೆ, ಅವರು ಬೆಳಗಾವಿ, ಹುಬ್ಬಳ್ಳಿ, ಬೆಂಗಳೂರಿನಲ್ಲಿ ಮನೆ ಮಾಡಿಕೊಂಡಿದ್ದಾರೆ. ಅವರ ಹೆಸರಿನಲ್ಲಿ ಆಸ್ತಿ ಮಾಡಿಕೊಂಡಿದ್ದಾರೆ. ಸಮಯ ಬಂದಾಗ ವಿವರ ಬಹಿರಂಗ ಪಡಿಸುತ್ತೇನೆ ಎಂದು ಹೇಳಿದರು.
ಸ್ವಾಭಿಮಾನವಿದ್ದರೆ ಸ್ವಾಮೀಜಿ ಪೀಠಕ್ಕೆ ಬರಬಾರದು. ಹಿಂದೂ ಎಂದು ಬರೆಯಿಸಲು ಹೇಳಿರುವುದು ಮೀಸಲಾತಿ ಹೋರಾಟ ಹತ್ತಿಕ್ಕುವ ತಂತ್ರವಾಗಿದೆ. ಇದಕ್ಕೆ ಸ್ವಾಮೀಜಿಯನ್ನು ಕೆಲವರು ಬಳಸಿಕೊಂಡಿದ್ದಾರೆ ಎಂದು ಆರೋಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.