ADVERTISEMENT

ಬಾಗಲಕೋಟೆ | ಸಿಇಟಿ: ಸುಸೂತ್ರ ಪರೀಕ್ಷೆಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2024, 16:22 IST
Last Updated 11 ಏಪ್ರಿಲ್ 2024, 16:22 IST

ಬಾಗಲಕೋಟೆ: ಜಿಲ್ಲೆಯ 17 ಪರೀಕ್ಷಾ ಕೇಂದ್ರಗಳಲ್ಲಿ ಏ. 18 ಹಾಗೂ 19ರಂದು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಗಳನ್ನು ಸುವ್ಯವಸ್ಥಿತ ಹಾಗೂ ಸುಸೂತ್ರವಾಗಿ ನಡೆಸಬೇಕು ಎಂದು ಜಿಲ್ಲಾಧಿಕಾರಿ ಕೆ.ಎಂ. ಜಾನಕಿ, ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲಾಡಳಿತ ಭವನದಲ್ಲಿ ಗುರುವಾರ ಸಾಮಾನ್ಯ ಪ್ರವೇಶ ಪರೀಕ್ಷೆಯ ಪೂರ್ವಭಾವಿ ಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಮಾತಾನಾಡಿದ ಅವರು, ಪರೀಕ್ಷೆಗಳು ಅಚ್ಚುಕಟ್ಟಾಗಿ ನಡೆಯುವಂತೆ ನೋಡಿಕೊಳ್ಳಬೇಕು. ಪರೀಕ್ಷೆ ಸಂದರ್ಭದಲ್ಲಿ ಪರೀಕ್ಷೆಗೆ ನಿಯೋಜಿಸಿದ ಅಧಿಕಾರಿ ಹಾಗೂ ನೋಂದಣಿಯಾದ ವಿದ್ಯಾರ್ಥಿಗಳನ್ನು ಹೊರತುಪಡಿಸಿ, ಇತರರಿಗೆ ಪರೀಕ್ಷಾ ಕೊಠಡಿಗಳಿಗೆ ಪ್ರವೇಶ ಇರುವುದಿಲ್ಲ ಎಂದರು.

ಪರೀಕ್ಷೆಯ ಪಾವಿತ್ರ‍್ಯತೆ ಕಾಪಾಡಿಕೊಳ್ಳಬೇಕು. ಪರೀಕ್ಷೆ ಸಂದರ್ಭದಲ್ಲಿ ಯಾವುದೇ ಲೋಪ ಆಗಬಾರದು. ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಮುಂಜಾಗ್ರತೆ ವಹಿಸಬೇಕು ಎಂದು ಹೇಳಿದರು.

ADVERTISEMENT

ಜಿಲ್ಲೆಯ ಬಾಗಲಕೋಟೆ ನಗರದಲ್ಲಿ 8, ಜಮಖಂಡಿಯಲ್ಲಿ ಆರು ಹಾಗೂ ಮುಧೋಳದಲ್ಲಿ ಮೂರು ಪರೀಕ್ಷಾ ಕೇಂದ್ರಗಳಿವೆ. 9,175 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಅಧಿಕಾರಿಗಳು ತಮಗೆ ನಿಗದಿಪಡಿಸಿದ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಿ ಪರೀಕ್ಷಾ ಕಾರ್ಯ ಮುಗಿಯುವವರೆಗೂ ಕೇಂದ್ರದಲ್ಲಿದ್ದು, ಪರೀಕ್ಷೆ ಬಗ್ಗೆ ವರದಿ ನೀಡಬೇಕು ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಜಶೇಖರ ಪಟ್ಟಣಶೆಟ್ಟಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.