ಬಾಗಲಕೋಟೆ:'ನನ್ನ ಹೆಸರು ಹೇಳಿಕೊಂಡು ಯಾರಾದರೂ ನಿಮಗೆ ಹಣ ಕೇಳಿದರೆ ತಕ್ಷಣ ನನ್ನ ಗಮನಕ್ಕೆ ತನ್ನಿ‘ ಎಂದು ಶಾಸಕ ವೀರಣ್ಣ ಚರಂತಿಮಠ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಘವೇಂದ್ರ ನಾಗೂರ ಎಂಬುವವರು ನನ್ನ ಹೆಸರು ಹೇಳಿಕೊಂಡು ಡಿಸಿಸಿ ಬ್ಯಾಂಕ್ನಲ್ಲಿ ನೌಕರಿ ಕೊಡಿಸುವುದಾಗಿ ಹೇಳಿ ಹಣ ಪಡೆದು ಕೆಲವರಿಗೆ ವಂಚಿಸಿದ್ದಾರೆ ಎಂಬ ಆರೋಪ ಮಾಧ್ಯಮಗಳಿಂದ ತಿಳಿದುಬಂದಿದೆ. ರಾಘವೇಂದ್ರನಿಗೂ ನನಗೂ ಸಂಬಂಧವಿಲ್ಲ. ಬಿಜೆಪಿಯಲ್ಲಿ ಅವರಿಗೆ ಯಾವುದೇ ಸ್ಥಾನಮಾನ ನೀಡಿಲ್ಲ. ವಂಚನೆ ವಿಚಾರ ತಿಳಿಯುತ್ತಿದ್ದಂತೆಯೇ ಬಿಜೆಪಿ ಸಕ್ರಿಯ ಕಾರ್ಯಕರ್ತ ಸ್ಥಾನದಿಂದಲೂ ಅವರನ್ನು ಕಿತ್ತು ಹಾಕಲಾಗಿದೆ ಎಂದು ಸ್ಪಷ್ಟಪಡಿಸಿದರು.
ಸರ್ಕಾರಿ ಕೆಲಸಗಳಲ್ಲಿ ನಾನು ಪಾರದರ್ಶಕ ಕೆಲಸ ಹಾಗೂ ಶಿಸ್ತು ಬಯಸುತ್ತೇನೆ. ಯಾರಿಂದಲೂ ಹಣ ಬಯಸುವುದಿಲ್ಲ. ನನ್ನ ಹೆಸರು ಹೇಳಿಕೊಂಡು ಯಾರೇ ಹಣ ಕೇಳಿದರೂ ತಕ್ಷಣ ನನ್ನ ಗಮನಕ್ಕೆ ತನ್ನಿ ಎಂದು ಹೇಳಿದರು.
’ಗ್ರಾಮೀಣ ಭಾಗದಲ್ಲಿ ಶಾಸಕರಿಂದ ಕೆಲಸ ಮಾಡಿಸಿಕೊಡುವುದಾಗಿ ಹೇಳಿ ಯಾರಾದರೂ ಹಣ ಕೇಳಿದರೆ ಯಾವುದೇ ಕಾರಣಕ್ಕೂ ಕೊಡಬೇಡಿ ಎಂದು ಮನವಿ ಮಾಡಿದ ವೀರಣ್ಣ ಚರಂತಿಮಠ,ಯಾರಿಗಾದರೂ ನನ್ನ ಹೆಸರಲ್ಲಿ ಹಣ ಕೊಟ್ಟರೆ ನಾನು ಜವಾಬ್ದಾರನಲ್ಲ. ಆ ವಿಚಾರದಲ್ಲಿ ನನಗೆ ಏನೂ ಗೊತ್ತಿಲ್ಲ‘ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.