ADVERTISEMENT

ಕಾಲಮಿತಿಯಲ್ಲಿ ಅನುದಾನ ಖರ್ಚು ಮಾಡಿ: ಕುರೇರ 

ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2024, 16:13 IST
Last Updated 26 ಸೆಪ್ಟೆಂಬರ್ 2024, 16:13 IST
ಬಾಗಲಕೋಟೆಯಲ್ಲಿ ಗುರುವಾರ ಜಿಲ್ಲಾ ಪಂಚಾಯಿತಿ ಸಿಇಒ ಶಶಿಧರ ಕುರೇರ ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನೆ ನಡೆಸಿದರು
ಬಾಗಲಕೋಟೆಯಲ್ಲಿ ಗುರುವಾರ ಜಿಲ್ಲಾ ಪಂಚಾಯಿತಿ ಸಿಇಒ ಶಶಿಧರ ಕುರೇರ ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನೆ ನಡೆಸಿದರು   

ಬಾಗಲಕೋಟೆ: ಅಲ್ಪಸಂಖ್ಯಾತರಿಗೆ ವಿವಿಧ ಯೋಜನೆಯಡಿ ಬಿಡುಗಡೆಯಾದ ಅನುದಾನವನ್ನು ಕಾಲಮಿತಿಯಲ್ಲಿ ಖರ್ಚು ಮಾಡಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ ಅನುಷ್ಠಾನಗೊಳಿಸುವ ಜಿಲ್ಲಾ ಮಟ್ಟದ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರದ ಯೋಜನೆಗಳಿಂದ ಅರ್ಹ ಫಲಾನುಭವಿಗಳು ವಂಚಿತರಾಗಬಾರದು. ಅನುದಾನ ದುರ್ಬಳಕೆಯಾಗದಂತೆ ನೋಡಿಕೊಳ್ಳಬೇಕು ಎಂದರು.

ಯೋಜನೆಗಳ ಬಗ್ಗೆ ಸಮುದಾಯದಲ್ಲಿ ಜಾಗೃತಿ ಮೂಡಿಸಬೇಕು. ಐಇಸಿ ಚಟುವಟಿಕೆಗಳನ್ನು ಹಮ್ಮಿಕೊಂಡು ಯೋಜನೆಗಳಿಗೆ ಹೆಚ್ಚೆಚ್ಚು ಬೇಡಿಕೆ ಬರುವಂತೆ ಮಾಡಿ. ಯೋಜನೆ ಅನುಷ್ಠಾನದಲ್ಲಿ ನಿರ್ಲಕ್ಷ ಬೇಡ ಎಂದು ಎಚ್ಚರಿಸಿದರು.

ADVERTISEMENT

ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಪ್ರಸಕ್ತ ಸಾಲಿಗೆ 8,675 ಗುರಿಯಲ್ಲಿ 1,301 ಅಲ್ಪಸಂಖ್ಯಾತರಿಗೆ ಮೀಸಲಿರಿಸಲಾಗಿದ್ದು, ಆಯ್ಕೆ ಪ್ರಕ್ರಿಯೆ ಪ್ರಗತಿಯಲ್ಲಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಡಿ ಐಸಿಡಿಎಸ್ ಯೋಜನೆಯಡಿ ಶೇ94 ರಷ್ಟು, ಭಾಗ್ಯಲಕ್ಷ್ಮೀ ಯೋಜನೆಯಡಿ ಶೇ51 ರಷ್ಟು, ಮಾತೃವಂದನಾ ಯೋಜನೆಯಡಿ ಶೇ48 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದರು.

ಪ್ರಧಾನಮಂತ್ರಿಗಳ ಉದ್ಯೋಗ ಸೃಜನೆ ಯೋಜನೆಯಡಿ ಆರ್ಥಿಕ ಶೇ72 ರಷ್ಟು, ಭೌತಿಕ ಶೇ62ರಷ್ಟು ಪ್ರಗತಿ ಸಾಧಿಸಿದರೆ, ಜಿಲ್ಲಾ ವಿಕಲಚೇತನ ಇಲಾಖೆಯಿಂದ ನೀಡಲಾಗುವ ವಿವಿಧ ಯೋಜನೆಗಳಲ್ಲಿ 1,906 ಗುರಿಗೆ 286 ಅಲ್ಪಸಂಖ್ಯಾತರಿಗೆ ಮೀಸಲಿರಿಸಲಾಗಿದೆ. ಸ್ವಯಂ ಉದ್ಯೋಗ ಕಾರ್ಯಕ್ರಮ ವೈಯಕ್ತಿಕ ಸಾಲ ಸೌಲಭ್ಯದಡಿ ಆರ್ಥಿಕ ಶೇ80ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಪುನಿತ್, ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಶಿವಾನಂದ ಪಟ್ಟಣಶೆಟ್ಟಿ, ಜಂಟಿ ಕೃಷಿ ನಿರ್ದೇಶಕ ಲಕ್ಷ್ಮಣ ಕಳ್ಳೆನ್ನವರ, ಪಶು ಇಲಾಖೆಯ ಉಪನಿರ್ದೇಶಕ ಎಸ್.ಎಚ್.ಕರಡಿಗುಡ್ಡ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ವಿವೇಕಾನಂದ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.