ADVERTISEMENT

ಬಿಜೆಪಿ ವಿರುದ್ಧ ಕಾಂಗ್ರೆಸ್‌ ನಾಯಕರ ವಾಗ್ದಾಳಿ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2024, 15:44 IST
Last Updated 24 ಸೆಪ್ಟೆಂಬರ್ 2024, 15:44 IST
ಬಾಗಲಕೋಟೆಯ ಬಸವೇಶ್ವರ ವೃತ್ತದಲ್ಲಿ ಬಿಜೆಪಿ ನಾಯಕರ ನಡೆ ಖಂಡಿಸಿ ಕಾಂಗ್ರೆಸ್‌ ಮುಖಂಡರು ಮಂಗಳವಾರ ಪ್ರತಿಭಟನೆ ನಡೆಸಿದರು
ಬಾಗಲಕೋಟೆಯ ಬಸವೇಶ್ವರ ವೃತ್ತದಲ್ಲಿ ಬಿಜೆಪಿ ನಾಯಕರ ನಡೆ ಖಂಡಿಸಿ ಕಾಂಗ್ರೆಸ್‌ ಮುಖಂಡರು ಮಂಗಳವಾರ ಪ್ರತಿಭಟನೆ ನಡೆಸಿದರು   

ಬಾಗಲಕೋಟೆ: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡುತ್ತಿರುವ ಬಿಜೆಪಿ ನಾಯಕರ ನಡೆ ಖಂಡಿಸಿ ಮಂಗಳವಾರ ಬಸವೇಶ್ವರ ವೃತ್ತದಲ್ಲಿ ಕಾಂಗ್ರೆಸ್‌ ನಾಯಕರು ಬೃಹತ್ ಪ್ರತಿಭಟನೆ ನಡೆಸಿದರು.

‘ಸುಳ್ಳನ್ನೇ ನೂರು ಬಾರಿ ಹೇಳಿ ಸತ್ಯವಾಗಿಸುವ ಯತ್ನವನ್ನು ಬಿಜೆಪಿ ನಾಯಕರು ಮಾಡುತ್ತಾರೆ. ಅಪಪ್ರಚಾರ ಮಾಡುವುದಲ್ಲದೇ, ವೈಯಕ್ತಿಕವಾಗಿ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ’ ಎಂದು ಆರೋಪಿಸಿದರು.

ಶಾಸಕ ಬಸನಗೌಡ ಪಾಟೀಲ ಯತ್ನಾಳ, ಕಾಂಗ್ರೆಸ್‌ ನಾಯಕರ ವಿರುದ್ಧ ಕೆಟ್ಟ ಶಬ್ದ ಬಳಕೆ ಮಾಡುತ್ತಿದ್ದಾರೆ. ಇದು ಬಿಜೆಪಿ ‘ಸಂಸ್ಕೃತಿಯನ್ನು ತೋರಿಸುತ್ತದೆ. ನೈತಿಕ ಅಧಃಪತನ ಹೊಂದಿದ್ದು, ಅಧಿಕಾರಕ್ಕಾಗಿ ಯಾವ ಮಟ್ಟಕ್ಕಾದರೂ ಇಳಿಯುತ್ತಿದ್ದಾರೆ’ ಎಂದು ದೂರಿದರು.

ADVERTISEMENT

ಸಚಿವ ಆರ್.ಬಿ. ತಿಮ್ಮಾಪುರ ಮಾತನಾಡಿ, ‘ರಾಹುಲ್‌ ಗಾಂಧಿ ಅವರ ಕುಟುಂಬ ದೇಶಕ್ಕಾಗಿ ತ್ಯಾಗ ಮಾಡಿದೆ. ಅಂತಹವರಿಗೆ ಭಯೋತ್ಪಾದಕ ಎನ್ನುತ್ತಾರೆ. ದೇಶಭಕ್ತಿಯ ಹೆಸರಿನಲ್ಲಿ ಹಸಿ ಸುಳ್ಳು ಹೇಳುತ್ತಾರೆ’ ಎಂದು ಟೀಕಿಸಿದರು.

ಶಾಸಕ ಜೆ.ಟಿ. ಪಾಟೀಲ ಮಾತನಾಡಿ, ‘ಟೀಕೆಗೆ ಬಳಸುವ ಪದಗಳು ಅಸಂವಿಧಾನಿಕವಾಗಿರಬಾರದು. ಇತಿ–ಮಿತಿಯೊಳಗೆ ಟೀಕೆ ಮಾಡಬೇಕು. ಹಗುರವಾಗಿ ಮಾತನಾಡುವುದರಿಂದ ಮಾತನಾಡುವವರ ಗೌರವವೇ ಕಡಿಮೆಯಾಗುತ್ತದೆ’ ಎಂದರು.

ಶಾಸಕರಾದ ಎಚ್‌.ವೈ.ಮೇಟಿ, ಬಿ.ಬಿ. ಚಿಮ್ಮನಕಟ್ಟಿ, ಜಿಲ್ಲಾ ಘಟಕದ ಅಧ್ಯಕ್ಷ ಎಸ್‌.ಜಿ. ನಂಜಯ್ಯನಮಠ, ಎಂ.ಬಿ. ಸೌದಾಗರ, ರಕ್ಷಿತಾ ಈಟಿ, ಆನಂದ ಜಿಗಜಿನ್ನಿ, ನಾಗರಾಜ ಹದ್ಲಿ, ಚಂದ್ರಶೇಖರ ರಾಠೋಡ, ರಾಜು ಮನ್ನಿಕೇರಿ, ಎಂ.ಎನ್‌. ರಾಂಪೂರ, ಜಾಫರ ಬೇಪಾರಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.