ADVERTISEMENT

ಬಾಗಲಕೋಟೆ: ಮಲ್ಲಾಪುರದಲ್ಲಿ ಜಿಲ್ಲಾಧಿಕಾರಿ ಗ್ರಾಮ ಭೇಟಿ ಆರಂಭ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2021, 7:11 IST
Last Updated 16 ಅಕ್ಟೋಬರ್ 2021, 7:11 IST
ಜಿಲ್ಲಾಧಿಕಾರಿ‌ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಅವರ ಗ್ರಾಮ ಭೇಟಿ.
ಜಿಲ್ಲಾಧಿಕಾರಿ‌ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಅವರ ಗ್ರಾಮ ಭೇಟಿ.   

ಮಲ್ಲಾಪುರ:ಜಿಲ್ಲಾಧಿಕಾರಿ‌ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಅವರ ಗ್ರಾಮ ಭೇಟಿ (ಜಿಲ್ಲಾಧಿಕಾರಿ ನಡೆ, ಹಳ್ಳಿಯ ಕಡೆ) ಶನಿವಾರ ಇಲ್ಲಿ ಆರಂಭಗೊಂಡಿತು.

ಬೆಳಿಗ್ಗೆ 11 ಗಂಟೆಗೆ ಗ್ರಾಮಕ್ಕೆ ಬಂದ ಜಿಲ್ಲಾಧಿಕಾರಿಯನ್ನು ಗ್ರಾಮ ಪಂಚಾಯ್ತಿ ಪ್ರತಿನಿಧಿಗಳು ಊರಿಗೆ ಸ್ವಾಗತಿಸಿದರು.

ಬಳಿಕ ಅವರು ಗ್ರಾಮದ ಅಂಗನವಾಡಿಗೆ ಭೇಟಿ ನೀಡಿ ಪರಿಶೀಲಿಸಿದರು.

ADVERTISEMENT

ನಂತರ ಮಲ್ಲಾಪುರದ ಓಣಿಗಳಲ್ಲಿ ಸಂಚರಿಸಿದ ಜಿಲ್ಲಾಧಿಕಾರಿ ಊರಿನಲ್ಲಿ ಕುಡಿಯುವ ನೀರು, ರಸ್ತೆ, ವಿದ್ಯುತ್ ಪೂರೈಕೆ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳ ಲಭ್ಯತೆಯ ಬಗ್ಗೆ ಗ್ರಾಮಸ್ಥರಿಂದ ಮಾಹಿತಿ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಮಹಾದೇವ ಮುರಗಿ, ತಹಶಿಲ್ದಾರ್ ಗುರುಸಿದ್ದಯ್ಯ ಹಿರೇಮಠ ಜಿಲ್ಲಾಧಿಕಾರಿಗೆ ಈ ವೇಳೆ ಸಾಥ್ ನೀಡಿದರು.

ಜಿಲ್ಲಾಧಿಕಾರಿ ಭೇಟಿ ಹಿನ್ನೆಲೆಯಲ್ಲಿ ಗ್ರಾಮವನ್ನು ಸ್ವಚ್ಛಗೊಳಿಸಲಾಗಿದೆ. ಎಲ್ಲೆಡೆ ಬ್ಲೀಚಿಂಗ್ ಪೌಡರ್ ಸಿಂಪಡಿಸಲಾಗಿದೆ.

ಸಿಗದ ಸ್ಪಂದನೆ: ಸರ್ಕಾರಿ ಶಾಲೆಯಲ್ಲಿ ವಿವಿಧ ಇಲಾಖೆಗಳ ಸಿಬ್ಬಂದಿ ಟೇಬಲ್ ಹಾಕಿಕೊಂಡು ಗ್ರಾಮಸ್ಥರ ಅಹವಾಲು ಆಲಿಸಲು ಕುಳಿತಿದ್ದಾರೆ. ಪಿಂಚಣಿದಾರರು, ಆಧಾರ್ ಮತ್ತು ಬ್ಯಾಂಕ್ ಖಾತೆ ಜೋಡಣೆಗೆ ಸಂಬಂಧಿಸಿದ ಅಹವಾಲಹ ಬಿಟ್ಟರೆ ಬೇರೆ ಟೇಬಲ್ ಗಳ ಬಳಿ ಜನರು ಕಂಡು ಬರಲಿಲ್ಲ.

ಸರ್ಕಾರಿ ಶಾಲೆಯ ಆವರಣದಲ್ಲಿ ಕಾರ್ಯಕ್ರಮ ಆರಂಭಗೊಂಡಿದ್ದು, ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಮಾಜಿ ಸೈನಿಕರಿಗೆ ಅಭಿನಂದನೆ ಸಲ್ಲಿಕೆ ನಂತರ ಗ್ರಾಮಸ್ಥರ ಸಮಸ್ಯೆ ಜಿಲ್ಲಾಧಿಕಾರಿ ಆಲಿಸಲಿದ್ದಾರೆ. ಶಾಸಕ ವೀರಣ್ಣ ಚರಂತಿಮಠ ಸಮಾರಂಭ ಉದ್ಘಾಟಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.