
ಹುನಗುಂದ: ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಂಪತಿ ಪರಸ್ಪರ ಅರ್ಥಮಾಡಿಕೊಂಡು ಸುಖ ಸಂಸಾರ ನಡೆಸಬೇಕು ಎಂದು ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಹೇಳಿದರು.
ಸಮೀಪದ ಇಲಾಳ ಗ್ರಾಮದಲ್ಲಿ ಸೋಮವಾರ ನಡೆದ ಬೊಮ್ಮಲಿಂಗೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಗ್ರಾಮದಲ್ಲಿ ಜಾತಿ, ಮತ, ಪಂಥಗಳ ಭೇದವಿಲ್ಲದೆ ಎಲ್ಲರೂ ಒಂದೇ ಎಂಬ ಸದ್ಭಾವನೆಯಿಂದ ಈ ಕಾರ್ಯಕ್ರಮ ನಡೆಸುತ್ತಿರುವುದು ಶ್ಲಾಘನೀಯ ಎಂದರು.
ಚಳಗೇರಿ ಹಿರೇಮಠದ ವೀರಸಂಗಮೇಶ್ವರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಸೊಸೆಯು ಅತ್ತೆ- ಮಾವಂದಿರನ್ನು ಹೆತ್ತ ತಂದೆ- ತಾಯಿಯಂತೆ ನೋಡಿಕೊಳ್ಳಬೇಕು. ಅತ್ತೆ-ಮಾವಂದಿರು ಸೊಸೆಯನ್ನು ಮಗಳಂತೆ ಕಾಣಬೇಕು. ಈ ಮೂಲಕ ಎರಡೂ ಮನೆತನದ ಕೀರ್ತಿ ಹೆಚ್ಚಿಸಬೇಕು ಎಂದರು.
ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ 15 ಜೋಡಿಗಳು ನವ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಗ್ರಾಮದ ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು.
ಹುನಗುಂದದ ಅಮರೇಶ್ವರ ದೇವರು, ಸರೂರಿನ ರೇವಣಸಿದ್ದಯ್ಯ ಗುರುವಿನ, ಬಾದಿಮನಾಳದ ಶಿವಸಿದ್ದೇಶ್ವರ ಸ್ವಾಮೀಜಿ. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಬಾಯಕ್ಕ ಮೇಟಿ, ಬೊಮ್ಮಲಿಂಗಯ್ಯ ಕಟಾಪಪೂರಮಠ, ಶರಣಪ್ಪ ಗೋಡಿ, ಮಲ್ಲಯ್ಯ ಮುಗನೂರಮಠ, ಪ್ರಕಾಶ್ ಗೋಡಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.