ADVERTISEMENT

ಪ್ರವಾಹ ನಿಯಂತ್ರಣ: ಕ್ರಮಕ್ಕೆ ಸೂಚನೆ

ಮುಂಜಾಗ್ರತಾ ಕ್ರಮಗಳ ಕುರಿತು ಅಧಿಕಾರಿಗಳ ಸಭೆ ನಡೆಸಿದ ಉಸ್ತುವಾರಿ ಸಚಿವ ಉಮೇಶ ಕತ್ತಿ

​ಪ್ರಜಾವಾಣಿ ವಾರ್ತೆ
Published 28 ಜೂನ್ 2021, 14:48 IST
Last Updated 28 ಜೂನ್ 2021, 14:48 IST
ಬಾಗಲಕೋಟೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ಪ್ರವಾಹ ನಿಯಂತ್ರಣದ ಮುಂಜಾಗರೂಕತಾ ಕ್ರಮಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿದರು
ಬಾಗಲಕೋಟೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ಪ್ರವಾಹ ನಿಯಂತ್ರಣದ ಮುಂಜಾಗರೂಕತಾ ಕ್ರಮಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿದರು   

ಬಾಗಲಕೋಟೆ: ಜಿಲ್ಲೆಯಲ್ಲಿ ಕೃಷ್ಣಾ, ಮಲಪ್ರಭಾ ಹಾಗೂ ಘಟಪ್ರಭಾ ನದಿಗಳಿಂದ ಉಂಟಾಗಬಹುದಾದ ಪ್ರವಾಹ ನಿಯಂತ್ರಣಕ್ಕೆ ಅಗತ್ಯ ಮುಂಜಾಗ್ರತಾ ಕ್ರಮಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ಅಧಿಕಾರಿಗಳಿಗೆ ಸೂಚಿಸಿದರು.

ನಗರದಲ್ಲಿ ಪ್ರವಾಹ ಮುಂಜಾಗ್ರತಾ ಕ್ರಮ ಹಾಗೂ ಕೋವಿಡ್ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಕುರಿತು ಸೋಮವಾರ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಜಿಲ್ಲೆಯಲ್ಲಿ ಪ್ರವಾಹದಿಂದ 188 ಗ್ರಾಮಗಳು ಬಾಧಿತಗೊಳ್ಳುತ್ತಿದ್ದು, ಅವುಗಳ ಮೇಲೆ ನಿಗಾವಹಿಸಬೇಕು. ಪ್ರವಾಹ ಉಂಟಾದಲ್ಲಿ ಜನರ ಸ್ಥಳಾಂತರಕ್ಕೆ ಎಲ್ಲ ರೀತಿಯ ವ್ಯವಸ್ಥೆ ಮಾಡಿಕೊಳ್ಳಲು, 259 ಕಾಳಜಿ ಕೇಂದ್ರಗಳನ್ನು ಸುಸ್ಥಿತಿಯಲ್ಲಿ ಇಟ್ಟುಕೊಳ್ಳಬೇಕು’ ಎಂದು ತಿಳಿಸಿದರು.

ADVERTISEMENT

ರೈತರಿಗೆ, ಗ್ರಾಹಕರಿಗೆ ತೊಂದರೆ
ಯಾಗದಂತೆ ಕ್ರಮಕೈಗೊಳ್ಳುವಂತೆ ಹೆಸ್ಕಾಂ ಜಿಲ್ಲಾ ಅಧೀಕ್ಷಕ ಎಂಜಿನಿಯರ್ ಕಾಶಿನಾಥ ಹಿರೇಮಠ ಅವರಿಗೆ ಸೂಚಿಸಿದರು. ನಗರ ಪ್ರದೇಶದಲ್ಲಿ 24 ಗಂಟೆಯಲ್ಲಿ, ಗ್ರಾಮೀಣ ಪ್ರದೇಶದಲ್ಲಿ ಮೂರು ದಿನಗಳೊಳಗಾಗಿ ಟ್ರಾನ್ಸ್‌ಫಾರ್ಮರ್ ಸೇರಿದಂತೆ ವಿದ್ಯುತ್ ಪ್ರಸರಣಕ್ಕೆ ಸಂಬಂಧಿಸಿದಂತೆ ಎಲ್ಲ ಸಮಸ್ಯೆಗಳನ್ನು ಸರಿಪಡಿಸುವಂತೆ ಸಚಿವರು ಸೂಚಿಸಿದರು.

ನೆರೆ ಹಾವಳಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಾಪ್ಟನ್ ಡಾ.ಕೆ.ರಾಜೇಂದ್ರ ಮಾತನಾಡಿ, ‘ಪ್ರವಾಹ ನಿಯಂತ್ರಕ್ಕೆ ಜಿಲ್ಲಾಡಳಿತ ಸನ್ನದ್ಧವಾಗಿದ್ದು, ಅದಕ್ಕಾಗಿ ಜಿಲ್ಲೆಯ ಎಲ್ಲ ತಾಲ್ಲೂಕುಗಳು ಒಳಗೊಂಡಂತೆ ಒಟ್ಟು 466 ಸ್ವಯಂ ಸೇವಕರನ್ನು, 66 ಸ್ವಯಂ ಸೇವಕ ಸಂಸ್ಥೆಗಳನ್ನು, 476 ಹಾವು ಹಿಡಿಯುವವರನ್ನು ಸಿದ್ಧಗೊಳಿಸಲಾಗಿದೆ’ ಎಂದರು.

‘ಜಾನುವಾರುಗಳಿಗೆ ಸಾಕಷ್ಟು ಮೇವಿನ ಸಂಗ್ರಹವಿದೆ. ದಿನದ 24 ಗಂಟೆಗಳ ತುರ್ತು ಸಹಾಯವಾಣಿ ಕೇಂದ್ರ ಸ್ಥಾಪಿಸಲಾಗಿದೆ’ ಎಂದು ತಿಳಿಸಿದರು.

ಡಿಎಚ್ಒ ಡಾ.ಎ.ಎನ್.ದೇಸಾಯಿ ಮಾತನಾಡಿ, ‘ಜಿಲ್ಲೆಯಲ್ಲಿ ಮೊದಲ ಅಲೆಯಲ್ಲಿ 1,161 ಜನಕ್ಕೆ ಕೋವಿಡ್ ಸೋಂಕು ದೃಢಪಟ್ಟರೆ, ಎರಡನೇ ಅಲೆಯಲ್ಲಿ 2,381 ಜನಕ್ಕೆ ದೃಢಪಟ್ಟಿದೆ. ಸದ್ಯ 466 ಸಕ್ರಿಯ ಪ್ರಕರಣಗಳಿದ್ದು, ಅದರಲ್ಲಿ 317 ಮಂದಿ ಕೋವಿಡ್ ಕಾಳಜಿ ಕೇಂದ್ರದಲ್ಲಿ, ಉಳಿದವರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ತಿಳಿಸಿದರು.

ಶಾಸಕ ವೀರಣ್ಣ ಚರಂತಿಮಠ, ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಿದ್ದು ಸವದಿ, ವಿಧಾನ ಪರಿಷತ್ ಸದಸ್ಯ ಹನಮಂತ ನಿರಾಣಿ, ಎಸ್ಪಿ ಲೋಕೇಶ ಜಗಲಾಸರ್, ಸಿಇಒ ಟಿ.ಭೂಬಾಲನ್, ಉಪ ಕಾರ್ಯದರ್ಶಿ ಅಮರೇಶ ನಾಯಕ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಉಪವಿಭಾಗಾಧಿಕಾರಿಗಳಾದ ಎಂ.ಗಂಗಪ್ಪ, ಸಿದ್ದು ಹುಲ್ಲೊಳ್ಳಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.