ಬಾಗಲಕೋಟೆ: ಪಿತ್ತ ಜನಕಾಂಗ ಸಮಸ್ಯೆ ಕಾರಣ ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಮಾಜಿ ಸಚಿವ ಎಚ್.ವೈ.ಮೇಟಿ ಅವರನ್ನು ಹೆಲಿಕಾಪ್ಟರ್ ಮೂಲಕ ಶುಕ್ರವಾರ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಹೊಟ್ಟೆ ನೋವು ಹಾಗೂ ಕಫದ ಸಮಸ್ಯೆಯ ಕಾರಣ ಮೇಟಿ ಅವರು ಕಳೆದ ನಾಲ್ಕು ದಿನಗಳಿಂದ ಬಾಗಲಕೋಟೆಯ ಕೆರೂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೆಚ್ಚಿನ ಚಿಕಿತ್ಸೆಗೆ ಮೇಟಿ ಅವರನ್ನು ಬೆಂಗಳೂರಿಗೆ ಕರೆದೊಯ್ಯಲು ಕುಟುಂಬದವರು ನಿರ್ಧರಿಸಿದ್ದಾರೆ.
ಆತಂಕಪಡುವ ಅಗತ್ಯವಿಲ್ಲ
ಮೇಟಿ ಅವರ ಅನಾರೋಗ್ಯದ ಬಗ್ಗೆ ಬೆಂಬಲಿಗರು ಆತಂಕಪಡುವ ಅಗತ್ಯವಿಲ್ಲ. ಬೆಂಗಳೂರಿಗೆ ರೈಲು, ಬಸ್ ಅಥವಾ ಕಾರಿನಲ್ಲಿ ಕರೆದೊಯ್ಯಲು ತಡವಾಗುವ ಕಾರಣ ಹೆಲಿಕಾಪ್ಟರ್ ವ್ಯವಸ್ಥೆ ಮಾಡಲಾಗಿದೆ ಎಂದು ಪುತ್ರಿ, ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಬಾಯಕ್ಕ ಮೇಟಿ ಸುದ್ದಿಗಾರರಿಗೆ ತಿಳಿಸಿದರು. ಪುತ್ರ ಉಮೇಶ ಮೇಟಿ, ಆಪ್ತ ಸಹಾಯಕ ಹೊಳಬಸು ಶೆಟ್ಟರ್ ಮೇಟಿ ಅವರೊಂದಿಗೆ ಪ್ರಯಾಣ ಬೆಳಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.