
ಬಾಗಲಕೋಟೆ: ‘ಯಾರ ಮಧ್ಯಸ್ಥಿಕೆ ಇಲ್ಲದೇ ಅರ್ಹ ಫಲಾನುಭವಿಗಳ ಮನೆ ಬಾಗಿಲಿಗೆ ಗ್ಯಾರಂಟಿ ಯೋಜನೆಗಳ ಲಾಭ ಮುಟ್ಟಿಸುವ ಕಾರ್ಯವನ್ನು ರಾಜ್ಯ ಸರ್ಕಾರ ಮಾಡುತ್ತಿದೆ’ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ ಹೇಳಿದರು.
ನವನಗರದ ಕಲಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಹಯೋಗದಲ್ಲಿ ಶುಕ್ರವಾರ ಹಮ್ಮಿಕೊಂಡ ಗ್ಯಾರಂಟಿ ಉತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಒಟ್ಟು ₹1.19ಲಕ್ಷ ಕೋಟಿಯನ್ನು ಡಿಬಿಟಿ ಮೂಲಕ ನೇರವಾಗಿ ಮನೆಯ ಬಾಗಿಲಿಗೆ ತಲುಪಿಸುವ ಕಾರ್ಯವನ್ನು ಸರ್ಕಾರ ಮಾಡುತ್ತಿದೆ’ ಎಂದರು.
ಗ್ಯಾರಂಟಿ ಯೋಜನೆಯಿಂದ ಬೊಕ್ಕಸ ಬರಿದಾಗದೇ ಅರ್ಥಶಾಸ್ತ್ರಜ್ಞರ ವರದಿಯ ಪ್ರಕಾರ ಆರ್ಥಿಕ ಸಭಲತೆಗೆ ನಾಂದಿಯಾಗಿದೆ. ಅರ್ಹ ಪ್ರತಿ ಮನೆಗಳಿಗೆ ಹಣ ಜಮೆ ಆಗುತ್ತಿದೆ. ಇದು ಹೇಗೆ ಬಂತು?, ಯಾರಿಂದ ಬಂದಿದೆ? ಎಂಬುದನ್ನು ತಿಳಿಸುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲಿ ಕಾರ್ಯಾಗಾರ ಹಾಗೂ ಗ್ಯಾರಂಟಿ ಉತ್ಸವ ಹೆಸರಿನಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ಗ್ಯಾರಂಟಿ ಯೋಜನೆಗಳನ್ನು ಕಟ್ಟಕಡೆಯ ಫಲಾನುಭವಿಗಳಿಗೆ ಮುಟ್ಟಿಸುವ ನಿಟ್ಟಿನಲ್ಲಿ ತಾಲೂಕು ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ’ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಮಾತನಾಡಿ, ‘ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರಿಗೆ, ನಿರುದ್ಯೋಗಿಗಳಿಗೆ ಅನುಕೂಲವಾಗಿದೆ. ಈ ಯೋಜನೆಗಳಿಂದ ಹೆಣ್ಣು ಮಕ್ಕಳು ಸ್ವಾಭಿಮಾನದಿಂದ ಬದುಕು ಸಾಗಿಸಲು ಸಾಧ್ಯವಾಗಿದ್ದು, ಅವರ ಜೀವನದ ಗುಣಮಟ್ಟ ಸುಧಾರಿಸಿದೆ’ ಎಂದು ಹೇಳಿದರು.
ಬೀಳಗಿ ಶಾಸಕ ಜೆ.ಟಿ.ಪಾಟೀಲ ಮಾತನಾಡಿ, ‘ಗ್ಯಾರಂಟಿ ಯೋಜನೆಗಳು ಬಡವರಿಗೆ ಆರ್ಥಿಕ ಚೈತನ್ಯ ನೀಡಿದ್ದು, ಇಡೀ ದೇಶದಲ್ಲಿ ಕರ್ನಾಟಕ ಸರ್ಕಾರದ ಮಾದರಿಯನ್ನು ಅನುಸರಿಸಲಾಗುತ್ತಿದೆ. ಪ್ರತಿ ಕುಟುಂಬಕ್ಕೆ ₹5 ಸಾವಿರ ಜಮೆ ಆಗುತ್ತಿದೆ. 5 ವರ್ಷದಲ್ಲಿ ₹3ಲಕ್ಷ ನೀಡಲಾಗುತ್ತಿದೆ’ ಎಂದರು.
ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷೆ ಪುಷ್ಪಾ ಅಮರನಾಥ ಮಾತನಾಡಿ, ’ಗ್ಯಾರಂಟಿ ಯೋಜನೆಗಳಿಂದ ಜನ ನೆಮ್ಮದಿಯ ಬದುಕು ಸಾಗಿಸುತ್ತಿದ್ದಾರೆ. ಮಹಿಳೆ ಪ್ರಗತಿ ಹೊಂದಿದರೆ ದೇಶ ಅಭಿವೃದ್ದಿ ಹೊಂದಿದಂತೆ. ಅದಕ್ಕಾಗಿಯೇ ಮಹಿಳೆಯರಿಗೆ ಮೀಸಲಾತಿ ಕಲ್ಪಿಸಲಾಗಿದೆ. ಈ ಮೀಸಲಾತಿಯಿಂದ ಮಹಿಳೆಯರಿಗೆ ರಾಜಕೀಯ ಪ್ರವೇಶ ದೊರೆತಿದ್ದು, ಸಮಾಜ ಸೇವೆ ಮಾಡುತ್ತಿದ್ದಾರೆ’ ಎಂದರು.
ಉಪನ್ಯಾಸ ನೀಡಿದ ಸೀತಾಲಕ್ಷ್ಮೀ, ಗ್ಯಾರಂಟಿ ಯೋಜನೆಗಳಿಂದ ಆಗುವ ಲಾಭ, ಆರ್ಥಿಕತೆಯ ಬಗ್ಗೆ ವಿವರವಾಗಿ ತಿಳಿಸಿದರು.
ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಅನೀಲಕುಮಾ ದಡ್ಡಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಲಕ್ಷ್ಮಿ ಮೇಟಿ ಅವರು ಯೋಜನೆಯಿಂದಾದ ಪ್ರಯೋಜನದ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದರು.
ರಾಜ್ಯ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್.ಪಾಟೀಲ, ಬುಡಾ ಅಧ್ಯಕ್ಷ ಅಬ್ದುಲರಜಾಕ ಬೇನೂರ, ಜಿಲ್ಲಾಧಿಕಾರಿ ಸಂಗಪ್ಪ, ಸಿಇಒ ಶಶಿಧರ ಕುರೇರ, ಉಪ ಕಾರ್ಯದರ್ಶಿ ಎನ್.ವೈ.ಬಸರಿಗಿಡದ ಸೇರಿದಂತೆ ತಾಲ್ಲೂಕು ಮಟ್ಟದ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.