ಗುಳೇದಗುಡ್ಡ: ತಾಲ್ಲೂಕು ಕೃಷಿ ಕೇಂದ್ರದಲ್ಲಿ ಗೊಬ್ಬರ, ಬಿತ್ತನೆ ಬೀಜ ಹಾಗೂ ರಾಸಾಯನಿಕ ಔಷಧಗಳನ್ನು ಸುರಕ್ಷಿತವಾಗಿ ಸಂಗ್ರಹಿಸಿಡಲು ಉತ್ತಮ ಗೋದಾಮು ವ್ಯವಸ್ಥೆ ಇಲ್ಲ. ಇಲ್ಲಿನ ಸಿಬ್ಬಂದಿಗೆ ಉತ್ತಮ ಕಚೇರಿ ಅವ್ಯವಸ್ಥಿತವಾಗಿದ್ದು, ಸರ್ಕಾರ ಕೂಡಲೇ ಸರಿಯಾದ ವ್ಯವಸ್ಥೆ ಕಲ್ಪಿಸಬೇಕು’ ಎಂದು ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಮಹಾಂತೇಶ ಹಟ್ಟಿ ಆಗ್ರಹಿಸಿದರು.
ಪಟ್ಟಣದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ, ಗೋದಾಮು ವೀಕ್ಷಿಸಿ ಅವರು ಮಾತನಾಡಿದರು.
‘ಇಲ್ಲಿ ಸಿಬ್ಬಂದಿ ಕೊರತೆ ಇದ್ದು, ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು. ಬೇರೆಡೆ ಹೆಚ್ಚುವರಿ ಸಿಬ್ಬಂದಿ ಇದ್ದರೆ ಮನವಿ ಮಾಡಿ ಇಲ್ಲಿಗೆ ಸಿಬ್ಬಂದಿ ಹಾಕಿಸಲಾಗುವುದು. ಸರ್ಕಾರ ಆರೋಗ್ಯ ಮತ್ತು ಶಿಕ್ಷಣಕ್ಕೆ ಒತ್ತು ಕೊಟ್ಟಂತೆ ಕೃಷಿಗೆ ಒತ್ತು ನೀಡಬೇಕು. ಇಲ್ಲದಿದ್ದರೆ ಕೃಷಿಗೆ ಉಳಿಗಾಲವಿಲ್ಲ’ ಎಂದರು.
‘ಇಲ್ಲಿ ಡಿಎಪಿ, ಯೂರಿಯಾ ಕೊರತೆ ಇದೆ. ರೈತರು ಇವೆರಡನ್ನು ಮಾತ್ರ ಬಳಸುತ್ತಿದ್ದು, ಕಾಂಪ್ಲೆಕ್ಸ್ ಗೊಬ್ಬರ ಬಳಸಬೇಕು. ಗುಳೇದಗುಡ್ಡ ಹೊಸ ತಾಲ್ಲೂಕಾಗಿರುವುದರಿಂದ ಅಧಿಕಾರಿಗಳ ಕೊರತೆ ಇದೆ. ಇಲ್ಲಿನ ರೈತಸಂಪರ್ಕ ಕೇಂದ್ರದ ಸಮಸ್ಯೆಗಳನ್ನು ಕೆಡಿಪಿ ಸಭೆಯಲ್ಲಿ ಶಾಸಕರ ಗಮನಕ್ಕೆ ತರುತ್ತೇನೆ. ರೈತರ ತರಬೇತಿಗಾಗಿ ಜಿಲ್ಲೆಗೆ ₹1 ಕೋಟಿ ಹಣ ಮಂಜೂರಾಗಿದೆ’ ಎಂದು ತಿಳಿಸಿದರು.
ಬಾಗಲಕೋಟೆ ಸಂಸದರು, ವಿಧಾನ ಪರಿಷತ್ ಸದಸ್ಯರು ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಸೌಲಭ್ಯಗಳನ್ನು ನೀಡಲು ರೈತರು ಆಗ್ರಹಿಸಿದರು.
ತಾಲ್ಲೂಕು ಕೃಷಿ ಸಮಾಜದ ಅಧ್ಯಕ್ಷ ಬಿ.ಎಸ್.ಮೊಕಾಸಿ, ಜಿಲ್ಲಾ ಕೃಷಿಕ ಸಮಾಜದ ಉಪಾಧ್ಯಕ್ಷ ಸಿ.ಬಿ.ಕೂಡಗಿ ಇದ್ದರು.
‘ಕಟ್ಟಡ ನಿರ್ಮಾಣಕ್ಕೆ ಜಾಗ ಮಂಜೂರು’
‘ರೈತ ಸಂಪರ್ಕ ಕೇಂದ್ರ ನಿರ್ಮಾಣಕ್ಕೆ ಶಾಸಕರು ಈಗಾಗಲೇ ಪುರಸಭೆ ವ್ಯಾಪ್ತಿಯಲ್ಲಿ ಜಾಗ ಮಂಜೂರು ಮಾಡಿದ್ದಾರೆ. ಕಟ್ಟಡ ಕಟ್ಟಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಸರ್ಕಾರವು ಕಟ್ಟಡಕ್ಕೆ ಹಣ ಒದಗಿಸಿದ ಮೇಲೆ ಉತ್ತಮವಾದ ಕಚೇರಿ ಮತ್ತು ರೈತ ಸಂಪರ್ಕ ಕೇಂದ್ರದ ಕಟ್ಟಡ ನಿರ್ಮಾಣ ಮಾಡಲಾಗುವುದು’ ಎಂದು ತಾಲ್ಲೂಕು ಕೃಷಿ ಅಧಿಕಾರಿ ಆನಂದ ಗೌಡರ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.