ಹುನಗುಂದ: ಮತಕ್ಷೇತ್ರದ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ₹50 ಕೋಟಿ ಮಂಜೂರು ಮಾಡಿದ್ದಾರೆ. ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಕೆಲವರು ವಿನಾಕಾರಣ ಆರೋಪ ಮಾಡುತ್ತಿದ್ದಾರೆ ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.
ತಾಲ್ಲೂಕಿನ ನಾಗೂರು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಲಾಕರ್ ಉದ್ಘಾಟನೆ ಹಾಗೂ ನೂತನ ಮಳಿಗೆಗಳ ಅಡಿಗಲ್ಲು ಸಮಾರಂಭದ ಅಧ್ಯಕ್ಷ ತೆವಹಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿಯೇ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಪ್ರಗತಿಯತ್ತ ಸಾಗುತ್ತಿದೆ ಜೊತಗೆ ರೈತರಿಗೆ ಬೆನ್ನೆಲುಬಾಗಿ ಕಾರ್ಯನಿರ್ವಹಿಸುತ್ತಿದೆ. ಹೆಚ್ಚಿನ ಪ್ರಮಾಣದ ಬೆಳೆ ಸಾಲ ನೀಡಲು ಆರ್ಬಿಐ ನಿಯಮಗಳು ಅಡ್ಡಿಯಾಗಿವೆ. ಮುಂಬರುವ ದಿನಗಳಲ್ಲಿ ರೈತರಿಗೆ ನೀಡುವ ಬೆಳೆ ಸಾಲವನ್ನು ₹50 ಸಾವಿರದಿಂದ ₹1 ಲಕ್ಷಕ್ಕೆ ಹೆಚ್ಚಿಸಲಾಗುವುದು. ಮಳಿಗೆಗಳ ನಿರ್ಮಾಣಕ್ಕೆ ₹20 ಲಕ್ಷ ಅನುದಾನ ನೀಡಲಾಗುವುದು ಎಂದರು.
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕರಿಸಂಗಪ್ಪ ನರಸಾಪೂರ ಮಾತನಾಡಿ, ಸಂಘದಿಂದ ಬೆಳೆ ಸಾಲ, ಬಂಗಾರ, ಜಾಮೀನು ಸಾಲ ನೀಡಲಾಗುತ್ತಿದೆ. ಉಳಿತಾಯ ಹಣವನ್ನು ಹೆಚ್ಚಿಸಿದ್ದೇವೆ. ಮಳಿಗೆಗಳ ನಿರ್ಮಾಣಕ್ಕೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಹಾಗೂ ಶಾಸಕರು ಅನುದಾನ ನೀಡಬೇಕು ಎಂದು ಹೇಳಿದರು.
ಗ್ರಾಮದ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಕೊಠಡಿಗಳ ನಿರ್ಮಾಣ, ದನದ ದವಾಖಾನೆ, ಬಸ್ ನಿಲ್ದಾಣ ನಿರ್ಮಾಣ, ರಸ್ತೆ ದುರಸ್ತಿ ಹಾಗೂ ಸಾರ್ವಜನಿಕ ಆಸ್ಪತ್ರೆಯಲ್ಲಿ ರಾತ್ರಿ ವೇಳೆ ವೈದ್ಯರ ವ್ಯವಸ್ಥೆ ಮಾಡಬೇಕೆಂದು ಮನವಿ ಮಾಡಿಕೊಂಡರು.
ಗ್ರಾಮಸ್ಥರ ಬೇಡಿಕೆಗಳನ್ನು ಒಂದು ವರ್ಷದೊಳಗಾಗಿ ಈಡೇರಿಸುವುದಾಗಿ ಭರವಸೆ ನೀಡಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹುಲಗವ್ವ ಮಾದರ, ಸಂಘದ ಉಪಾಧ್ಯಕ್ಷ ಬಸವರಾಜ ನರಗುಂದ, ಮಹಾಂತೇಶ ನಾಡಗೌಡ, ಹುನಗುಂದ ಬಿಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ಬಿ.ಎಸ್. ಪಾಟೀಲ, ಮಹಾಂತೇಶ ಮುರುಡಿ, ಬಸವರಾಜ ಹೊಸಮನಿ, ಸಂಗಪ್ಪ ಹೂಲಗೇರಿ, ಮುಖ್ಯ ಕಾರ್ಯನಿರ್ವಾಹಕ ಮಲ್ಲಪ್ಪ ಹುಬ್ಬಳ್ಳಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.