
ಹುನಗುಂದ: ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಿ ಎಂದು ಅಧಿಕಾರಿಗಳಿಗೆ ತಾಲ್ಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿ ಅಧ್ಯಕ್ಷ ಮುತ್ತಣ್ಣ ಕಲಗೋಡಿ ಹೇಳಿದರು.
ಮಂಗಳವಾರ ತಾಲ್ಲೂಕು ಪಂಚಾಯಿತಿ ಮತ್ತು ತಾಲ್ಲೂಕು ಮಟ್ಟದ ಪಂಚಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿಯಿಂದ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಪಂಚಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದಂತೆ ಬಿಂಜವಾಡಗಿ ಮತ್ತು ಅಮರಾವತಿ ಗ್ರಾಮಗಳಲ್ಲಿ ನಡೆದ ಕುಂದುಕೊರತೆ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗ್ರಾಮೀಣ ಪ್ರದೇಶದಲ್ಲಿ ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಬಸ್ ತೊಂದರೆಯಾಗದಂತೆ ನೋಡಿಕೊಳ್ಳಿ ಎಂದರು.
ಮುಖಂಡ ಅಮೀನಪ್ಪ ಸಂದಿಗೌಡ ಮಾತನಾಡಿ, ಸರ್ಕಾರದ ಯೋಜನೆ ಅನುಷ್ಠಾನಕ್ಕೆ ಬರಬೇಕಾದರೆ ಅಧಿಕಾರಿಗಳ ಪಾತ್ರ ಹಿರಿದು. ಅಮರವಾತಿ ಗ್ರಾಮದಿಂದ ಗಟ್ಟಿಗನೂರು ಗ್ರಾಮಕ್ಕೆ ಹೋಗುವ ರಸ್ತೆ ಬದಿಯಲ್ಲಿ ಅಳವಡಿಸಿರುವ ವಿದ್ಯುತ್ ಕಂಬಗಳ ಸುತ್ತಲೂ ಗಿಡಗಂಟಿಗಳು ಬೆಳದಿವೆ. ಮಳೆ, ಮತ್ತು ಗಾಳಿ ಬಂದರೆ ಸಾಕು ವಿದ್ಯುತ್ ಕಡಿತಗೊಳ್ಳುತ್ತಿದ್ದು, ಹೆಸ್ಕಾಂ ಅಧಿಕಾರಿಗಳು ಗಿಡಗಂಟಿಗಳನ್ನು ತೆರವುಗೊಳಿಸಿ ಎಂದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮುತ್ತಣ್ಣ ಸಿ.ಎ ಹುನಗುಂದ ಮತ್ತು ಇಳಕಲ್ ತಾಲ್ಲೂಕಿನ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ವಿವರ ಹಾಗೂ ಇಲಾಖೆಯ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.
ಪಡಿತರ ವಿತರಣೆ ಸಂದರ್ಭದಲ್ಲಿ ನೆಟ್ವರ್ಕ್ ಸಮಸ್ಯೆ, ಶಕ್ತಿ ಯೋಜನೆ ಹಾಗೂ ವಿದ್ಯುತ್ ಸಮಸ್ಯೆ ಬಗ್ಗೆ ಸಾರ್ವಜನಿಕರು ದೂರಿದರು.
ಸುಲೋಚನಾ ಬಿರಾದಾರ, ಮುಖಂಡರಾದ ನಿಂಗಪ್ಪ ಗುರಿಕಾರ, ಸಂಗನಬಸು ಹುಲ್ಯಾಳ, ಶಂಕರಗೌಡ ಅಗಸಿಮುಂದಿನ, ರಮೇಶ ಗೌಡರ, ಬಿಂಜವಾಡಗಿ ಪಿಡಿಒ ಪ್ರವೀಣ ಕಂಚಿ, ಅಮರಾವತಿ ಪಿಡಿಒ ಶಿಲ್ಪಾ ರ್ಯಾಕಿ, ಶಿವಕುಮಾರ ತೋಪಲಕಟ್ಟಿ, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.