ಬಾಗಲಕೋಟೆ: ಜಿಲ್ಲೆಯ ಬೀಳಗಿ ಹಾಗೂ ಮುಧೋಳ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಲಜೀವನ ಮಿಷನ್ ಯೋಜನೆಯಡಿ ನಡೆದ ಕುಡಿಯುವ ನೀರಿನ ಕಾಮಗಾರಿಗಳನ್ನು ಗುರುವಾರ ಪರಿಶೀಲನೆ ಮಾಡಿದರು.
ಬೀಳಗಿ ತಾಲ್ಲೂಕಿನ ಸುನಗ ಮತ್ತು ಸುನಗ ತಾಂಡಾ ಗ್ರಾಮಗಳಿಗೆ ಭೇಟಿ ನೀಡಿ ಕಾಮಗಾರಿಗಳ ಸ್ಥಳ ವೀಕ್ಷಣೆ ಮಾಡಿದ ಅವರು, ಮನೆ, ಮನೆಗೆ ಅಳವಡಿಸಲಾಗಿರುವ ನಲ್ಲಿಗಳ ಸಂಪರ್ಕದ ಬಗ್ಗೆ ಫಲಾನುಭವಿಗಳೊಂದಿಗೆ ಚರ್ಚೆ ಮಾಡಿದರು.
ಸಮರ್ಪಕವಾಗಿ ನೀರು ಪೂರೈಕೆಯಾಗುತ್ತಿರುವ ಕುರಿತು ಮಾಹಿತಿ ಪಡೆದುಕೊಂಡ ಅವರು, ದಿನದ 24 ಗಂಟೆ ನೀರಿನ ವ್ಯವಸ್ಥೆ ಕಲ್ಪಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹೆಗ್ಗೂರ ಆರ್.ಸಿ ಮತ್ತು ಗೋವಿನದಿನ್ನಿ ಆರ್.ಸಿ. ಗಳ ಜಲಮೂಲಗಳು ಉತ್ತಮವಾಗಿದ್ದು, ಜನರ ಆರೋಗ್ಯದ ಮೇಲೆ ನೀರು ನಿರ್ವಹಣೆ ಮುಖ್ಯ ಪಾತ್ರ ವಹಿಸುತ್ತಿರುವ ಕಾರಣ ನೀರಿನ ಸಂಪರ್ಕಗಳನ್ನು ಕಾಲಕಾಲಕ್ಕೆ ಮೇಲ್ವಿಚಾರಣೆ ಮಾಡುವಂತೆ ಸೂಚಿಸಿದರು.
ನಾಗರಾಳ ತಾಂಡಾ ಮತ್ತು ತೆಗ್ಗಿ ಗ್ರಾಮಕ್ಕೆ ಭೇಟಿ ನೀಡಿ, ಯೋಜನೆಯಲ್ಲಿ ಜನರ ಸಹಭಾಗಿತ್ವ ಹೆಚ್ಚಿಸುವ ಮೂಲಕ ಗ್ರಾಮದಲ್ಲಿ ದುರಸ್ತಿಗಳನ್ನು ಕೈಗೊಳ್ಳಲು ಸೂಚಿಸಿದರು.
ಅಮಲಝರಿ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮದಲ್ಲಿರುವ ಉತ್ತಮ ನೀರಿನ ವ್ಯವಸ್ಥೆ ಮತ್ತು ಸಾರ್ವಜನಿಕರ ಸಹಭಾಗಿತ್ವದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ಅವರು, ನಿರಂತರ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಒದಗಿಸುವುದು ಸರ್ಕಾರದ ಮೂಲ ಕಾರ್ಯಗಳಲ್ಲಿ ಒಂದಾಗಿದ್ದು, ಕಾಲಕಾಲಕ್ಕೆ ಜಲಮೂಲ, ಜಲಸಂಗ್ರಹ ಸ್ವಚ್ಛವಾಗಿರುವಂತೆ ನೋಡಿಕೊಳ್ಳಬೇಕು. ಪ್ರತಿ ಗ್ರಾಮ ಪಂಚಾಯಿತಿಗೆ ನೀಡಿರುವ ಫೀಲ್ಡ್ ಟೆಸ್ಟ್ ಕಿಟ್ ಬಳಸಿಕೊಂಡು ನೀರಿನ ಶದ್ಧತೆ ಪರೀಕ್ಷಿಸಬೇಕು ಎಂದರು.
ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್ ಆಕಾಶ್, ಪ್ರಬಾರಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಆರ್.ಕೆ.ಡಂಬಳ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.