ಬಾಗಲಕೋಟೆ: ಮಹಾರಾಷ್ಟ್ರ ಹಾಗೂ ಬೆಳಗಾವಿ ಭಾಗದಲ್ಲಿ ನಿರಂತರ ಮಳೆಯಿಂದಾಗಿ ಜಿಲ್ಲೆಯಲ್ಲಿ ಕೃಷ್ಣಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ.
ರಬಕವಿ-ಬನಹಟ್ಟಿ ತಾಲ್ಲೂಕಿನ ಹಿಪ್ಪರಗಿ ಜಲಾಶಯಕ್ಕೆ ಶನಿವಾರ ಬೆಳಿಗ್ಗೆಯವರೆಗೆ 2.17 ಲಕ್ಷ ಕ್ಯೂಸೆಕ್ ನೀರು ಹರಿದು ಬಂದಿದೆ. ಅಷ್ಟೇ ಪ್ರಮಾಣದ ನೀರನ್ನು ಕೃಷ್ಣಾ ನದಿಗೆ ಹರಿಯ ಬಿಡಲಾಗಿದೆ.
ಬೆಳಗಾವಿ ಜಿಲ್ಲೆಯಲ್ಲಿ ಮಳೆ ಕಡಿಮೆ ಆಗಿದ್ದರೂ ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆಯ ಅಬ್ಬರ ಕಡಿಮೆ ಆಗಿಲ್ಲ. ಹೀಗಾಗಿ ಕೃಷ್ಣೆಗೆ ಹರಿದುಬರುತ್ತಿರುವ ನೀರಿನ ಪ್ರಮಾಣ ಇನ್ನೂ ಹೆಚ್ಚಾಗಬಹುದು ಎಂದು ಅಂದಾಜಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ನದಿ ತೀರದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಜನರು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ 'ಪ್ರಜಾವಾಣಿ'ಗೆ ತಿಳಿಸಿದರು.
ಕೃಷ್ಣೆಯಲ್ಲಿ ಒಳಹರಿವಿನ ಪ್ರಮಾಣ 3 ಲಕ್ಷ ಕ್ಯೂಸೆಕ್ ದಾಟಿದರೆ ಜಮಖಂಡಿ ತಾಲ್ಲೂಕಿನಲ್ಲಿ ನದಿ ದಡದ 18 ಹಳ್ಳಿಗಳು ಬಾಧಿತವಾಗಲಿವೆ. ಹೀಗಾಗಿ ಜಮಖಂಡಿಗೆ ರಕ್ಷಣಾ ತಂಡವೊಂದನ್ನು ಜಿಲ್ಲಾಡಳಿತ ನಿಯೋಜಿಸಿದೆ. 15 ಕಡೆ ಕಾಳಜಿ ಕೇಂದ್ರಗಳನ್ಬು ತೆರೆಯಲಾಗಿದೆ. ಹಳ್ಳಿಗಳಲ್ಲಿ ಡಂಗುರ ಹೊಡೆಸಿ ಪ್ರವಾಹ ಮುನ್ನೆಚ್ಚರಿಜೆ ನೀಡಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.