ಬೀಳಗಿ: ತಾಲ್ಲೂಕಿನ ಬಾಡಗಂಡಿ ಎಸ್.ಆರ್. ಪಾಟೀಲ ಆಸ್ಪತ್ರೆಯಲ್ಲಿ ಗದಗ ಜಿಲ್ಲೆಯ ಸುಮಿತ್ರಾ ಪಟ್ಟಣದ(68) ಅವರ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಯು ಡಾ.ರಾಘವೇಂದ್ರ ಬಡಿಗೇರ ನೇತೃತ್ವದ ತಂಡದಿಂದ ಯಶಸ್ವಿಯಾಗಿ ನೆರವೇರಿದೆ ಎಂದು ಎಸ್.ಆರ್.ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಸಂಸ್ಥಾಪಕ ಅಧ್ಯಕ್ಷ ಎಸ್. ಆರ್. ಪಾಟೀಲ ಹೇಳಿದರು.
ಬಾಡಗಂಡಿ ಎಸ್.ಆರ್. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಸಭಾ ಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಮಿತ್ರಾ ಅವರ ಶಸ್ತ್ರಚಿಕಿತ್ಸೆಯನ್ನು ಯಶಸ್ವಿನಿ ಯೋಜನೆಯಡಿ ಉಚಿತವಾಗಿ ಮಾಡಲಾಗಿದ್ದು, ಇನ್ನು ಮುಂದೆ ಯಶಸ್ವಿನಿ ಕಾರ್ಡ್ ಹೊಂದಿದ ಪ್ರತಿಯೊಬ್ಬರೂ ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಯಶಸ್ವಿನಿ ಕಾರ್ಡ್ ಹೊಂದಿರದವರು ಬಡ ರೋಗಿಗಳು ಕೇವಲ ₹1.30 ಲಕ್ಷ ವೆಚ್ಚದಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಬಹುದು ಎಂದು ತಿಳಿಸಿದರು.
ಎಸ್. ಆರ್. ಪಾಟೀಲ ಶಿಕ್ಷಣ ಪ್ರತಿಷ್ಠಾನದ ಕಾರ್ಯದರ್ಶಿ ಎಂ.ಎನ್. ಪಾಟೀಲ ಮಾತನಾಡಿ, ‘ಈಗಾಗಲೇ ಆಸ್ಪತ್ರೆಯಲ್ಲಿ ಸಿಟಿ ಸ್ಕ್ಯಾನ್ ಸೌಲಭ್ಯವಿದ್ದು, ವಾರದೊಳಗಾಗಿ ಎಂಆರ್ಐ ಸ್ಕ್ಯಾನ್ ಪ್ರಾರಂಭವಾಗಲಿದೆ’ ಎಂದು ಹೇಳಿದರು.
ಮಹಾವಿದ್ಯಾಲಯದ ಡೀನ್ ಧರ್ಮರಾಯ ಇಂಗಳೆ ಮಾತನಾಡಿ, ‘ಸೆ.21ರಂದು ತಾಲ್ಲೂಕಿನ ಸುನಗ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಂಡಿದ್ದು ಶಿಬಿರದಲ್ಲಿ ಬಿಪಿ, ಶುಗರ್, ಕಿವಿ, ಮೂಗು, ಗಂಟಲು ಹಾಗೂ ಚಿಕ್ಕಮಕ್ಕಳ ತಜ್ಞ ವೈದ್ಯರು ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು.
ಆಸ್ಪತ್ರೆಯ ವೈದ್ಯಕೀಯ ಅಧಿಕ್ಷಕ ವಿಜಯಾನಂದ ಹಳ್ಳಿ, ಆಡಳಿತಾಧಿಕಾರಿ ರಾಘವೇಂದ್ರ ಪಾಟೀಲ,ರಾಘವೇಂದ್ರ ಬಡಿಗೇರ, ಅಶೋಕ ದಾದಮಿ, ಗೌರ್ನಿಂಗ್ ಕೌನ್ಸಿಲ್ನ ಸದಸ್ಯೆ ಅನುಷಾ ನಾಡಗೌಡ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.