ADVERTISEMENT

ಕೃಷ್ಣಾ ಕಣಿವೆಯಲ್ಲಿ ಪ್ರವಾಹ ನಿಯಂತ್ರಣ: ಗೋವಿಂದ ಕಾರಜೋಳ

​ಪ್ರಜಾವಾಣಿ ವಾರ್ತೆ
Published 24 ಜೂನ್ 2021, 13:59 IST
Last Updated 24 ಜೂನ್ 2021, 13:59 IST
ಡಿಸಿಎಂ ಗೋವಿಂದ ಕಾರಜೋಳ ಅವರ ಸಾಂದರ್ಭಿಕ ಚಿತ್ರ
ಡಿಸಿಎಂ ಗೋವಿಂದ ಕಾರಜೋಳ ಅವರ ಸಾಂದರ್ಭಿಕ ಚಿತ್ರ   

ಬಾಗಲಕೋಟೆ: 'ಈ ಬಾರಿಯ ಮಳೆಗಾಲದಲ್ಲಿ ಕೃಷ್ಣಾ ಕಣಿವೆಯಲ್ಲಿ ಪ್ರವಾಹದ ಪರಿಸ್ಥಿತಿ ನಿಭಾಯಿಸಲು ಕರ್ನಾಟಕ ಮತ್ತು ಮಹಾರಾಷ್ಟ್ರದ ನಡುವೆ ಸಮನ್ವಯತೆಗಾಗಿ ಬೆಳಗಾವಿ ಹಾಗೂ ಸೊಲ್ಲಾಪುರದ ಜಿಲ್ಲಾಧಿಕಾರಿಗಳನ್ನು ನೋಡಲ್ ಅಧಿಕಾರಿಗಳಾಗಿ ನೇಮಕ ಮಾಡಲಾಗಿದೆ' ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಮಳೆಯ ಪ್ರಮಾಣ ಹಾಗೂ ಜಲಾಶಯಗಳ ಸ್ಥಿತಿಗತಿಯ ಬಗ್ಗೆ ನಿರಂತರವಾಗಿ ನಿಗಾ ಇಡಲು ರಾಜ್ಯದ ಜಲಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರನ್ನು ರತ್ನಗಿರಿ ಜಿಲ್ಲೆಗೆ ನಿಯೋಜನೆ ಮಾಡಲಾಗಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ನಿಭಾಯಿಸಲು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಇತ್ತೀಚೆಗೆ ಪೂರ್ವಸಿದ್ಧತಾ ಸಭೆ ನಡೆಸಲಾಗಿದೆ. ಅದರಲ್ಲಿ ಮಹಾರಾಷ್ಟ್ರದ ಜಲಸಂಪನ್ಮೂಲ ಸಚಿವರೂ ಪಾಲ್ಗೊಂಡಿದ್ದರು. ಕೊಯ್ನಾ ಜಲಾಶಯ ತುಂಬುವವರೆಗೂ ಕಾದು ಕುಳಿತು ಒಮ್ಮೆಗೆ ನೀರು ಹೊರಗೆ ಬಿಡುವುದರ ಬದಲು ಹಂತ ಹಂತವಾಗಿ ಜಲಾಶಯದಿಂದ ನೀರು ಹೊರಗೆ ಹರಿಸುವಂತೆ ಅವರಿಗೆ ತಿಳಿಸಲಾಗಿದೆ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.