ಬಾಗಲಕೋಟೆ: ಕೋವಿಡ್ ಸೋಂಕಿಗೆ ತುತ್ತಾಗಿದ್ದ ಬೆಂಗಳೂರಿನ ಸಶಸ್ತ್ರ ಮೀಸಲು ಪಡೆಯ (ಕೆಎಸ್ಆರ್ಪಿ) ಹೆಡ್ಕಾನ್ಸ್ಟೆಬಲ್ ಮಂಗಳವಾರ ಇಲ್ಲಿನ ಜಿಲ್ಲಾ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ.
ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಸರೂರು ಗ್ರಾಮದವರಾದ ಅವರು ಉದ್ಯೋಗ ನಿಮಿತ್ತ ಬೆಂಗಳೂರಿನಲ್ಲಿ ನೆಲೆಸಿದ್ದರು.
55 ವರ್ಷದ ಹೆಡ್ಕಾನ್ಸ್ಟೆಬಲ್ ಅನಾರೋಗ್ಯದ ಕಾರಣ ಇತ್ತೀಚೆಗೆ ಊರಿಗೆ ಮರಳಿದ್ದರು. ಈ ಮೊದಲು ಪಾರ್ಶ್ವವಾಯುಗೆ ತುತ್ತಾಗಿದ್ದ ಅವರು ಮಧುಮೇಹದಿಂದ ಬಳಲುತ್ತಿದ್ದರು.
ಜ್ವರಪೀಡಿತರಾಗಿದ್ದ ಅವರನ್ನು ಸೋಮವಾರ ರಾತ್ರಿಮನೆಯವರು ಬಾಗಲಕೋಟೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ಧರು. ಅಲ್ಲಿ ಕೋವಿಡ್ ಸೋಂಕು ದೃಢಪಟ್ಟಿತ್ತು.
'ಆಸ್ಪತ್ರೆಯಲ್ಲಿ ಚಿಕಿತ್ಸೆಯಿಂದ ಚೇತರಿಸಿಕೊಳ್ಳುತ್ತಿದ್ದ ಅವರು ಶೌಚಾಲಯಕ್ಕೆ ತೆರಳಿ ಮರಳುವಾಗ ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕೋವಿಡ್ ನಿಯಮಾವಳಿ ಅನ್ವಯ ಬಾಗಲಕೋಟೆಯಲ್ಲಿಯೇ ಅವರ ಅಂತ್ಯಕ್ರಿಯೆ ನೆರವೇರಿಸಲಾಯಿತು' ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಅನಂತ ದೇಸಾಯಿ 'ಪ್ರಜಾವಾಣಿ'ಗೆ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.