ಬಾಗಲಕೋಟೆ: ವೈದ್ಯಕೀಯ ಕ್ಷೇತ್ರದಲ್ಲಿ ಪರಿಣತ ವೈದ್ಯನಾಗಲು ವಿದ್ಯಾರ್ಥಿಗಳಿಗೆ ಶರೀರ ರಚನೆಯ ಜ್ಞಾನ ಅವಶ್ಯಕವಾಗಿದೆ. ಅದಕ್ಕೆ ಅವಶ್ಯಕವಾದ ಪ್ರಯೋಗಾಲಯ ಸ್ಥಾಪಿಸಲಾಗಿದೆ ಎಂದು ಬಿವಿವಿ ಸಂಘದ ಕಾರ್ಯಾಧ್ಯಕ್ಷ ವೀರಣ್ಣ ಚರಂತಿಮಠ ಹೇಳಿದರು.
ಎಸ್.ನಿಜಲಿಂಗಪ್ಪ ವೈದ್ಯಕೀಯ ಕಾಲೇಜಿನ ಅನಾಟಮಿ ವಿಭಾಗದಲ್ಲಿ ₹25 ಲಕ್ಷ ವೆಚ್ಚದಲ್ಲಿ ಸ್ಥಾಪಿಸಲಾದ ಮೃತಶರೀರ ಆಧಾರಿತ ಶಸ್ತ್ರಚಿಕಿತ್ಸಾ ಕೌಶಲ ಪ್ರಯೋಗಾಲಯ ಉದ್ಘಾಟಿಸಿ ಮಾತನಾಡಿದ ಅವರು ‘ಅತ್ಯಂತ ಸುಸಜ್ಜಿತ ಪ್ರಯೋಗಾಲಯ ಇದಾಗಿದೆ. ಶಸ್ತ್ರಚಿಕಿತ್ಸೆ ತರಬೇತಿ ನೀಡಲು ಅಗತ್ಯವಾದ ಎಲ್ಲ ಪ್ರಕಾರದ ಸೌಲಭ್ಯಗಳನ್ನು ಒಳಗೊಂಡಿದೆ. ರಾಜ್ಯ ಮಾತ್ರವಲ್ಲದೇ ಬೇರೆ ರಾಜ್ಯಗಳ ವೈದ್ಯಕೀಯ ವಿದ್ಯಾರ್ಥಿಗಳು, ವೈದ್ಯರಿಗೆ ಪ್ರಯೋಜನವಾಗಲಿದೆ ಎಂದರು.
ಅನಾಟಮಿ ವಿಭಾಗದ ಮುಖ್ಯಸ್ಥ ಡಾ.ಸಂಜೀವ ಕೊಳಗಿ, ಇ.ಎನ್.ಟಿ ವಿಭಾಗದ ಮುಖ್ಯಸ್ಥ ಡಾ.ಸಿ.ಎಸ್.ಹಿರೇಮಠ ಮಾತನಾಡಿ, ಮೃತಶರೀರ ಆಧಾರಿತ ಶಸ್ತ್ರಚಿಕಿತ್ಸಾ ಕೌಶಲ ಪ್ರಯೋಗಾಲಯ ಉತ್ತರ ಕರ್ನಾಟಕದಲ್ಲಿಯೇ ಮೊದಲನೇಯದ್ದಾಗಿದೆ. ನರಶಸ್ತ್ರಚಿಕಿತ್ಸೆ, ಆರ್ಥೋಸ್ಕೊಪಿ, ಲ್ಯಾಪ್ರೊಸ್ಕೊಪಿ, ಎಂಡೋಸ್ಕೊಪಿಯಂತಹ ಕ್ಲಿಷ್ಟಕರ ಶಸ್ತ್ರಚಿಕಿತ್ಸೆಯಲ್ಲಿ ಪರಿಣತಿ ಹೊಂದಲು ತರಬೇತಿ ನೀಡಲಾಗುವುದು ಎಂದರು.
ಸಂಘದ ಗೌರವ ಕಾರ್ಯದರ್ಶಿ ಮಹೇಶ ಅಥಣಿ, ವೈದ್ಯಕೀಯ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಅಶೋಕ ಸಜ್ಜನ, ಕಾಲೇಜಿನ ಪ್ರಾಚಾರ್ಯರಾದ ಡಾ.ಭುವನೇಶ್ವರಿ ಯಳಮಲಿ, ವೈದ್ಯಕೀಯ ಅಧೀಕ್ಷಕ ಡಾ.ಶ್ರೀರಾಮ ಕೋರಾ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.