ಬಾಗಲಕೋಟೆ: ಜಿಲ್ಲೆಯ ಗ್ರಾಮೀಣ ಮತ್ತು ನಗರ ವ್ಯಾಪ್ತಿಯಲ್ಲಿ ಬರುವ ಕೆರೆಗಳಿಗೆ ಪುನರುಜ್ಜೀವನ ಮಾಡಬೇಕು ಎಂದು ಜಿಲ್ಲಾಧಿಕಾರಿ ಸಂಗಪ್ಪ, ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಗರಾಭಿವೃದ್ಧಿ ಪ್ರಾಧಿಕಾರ, ಯೋಜನಾ ಪ್ರಾಧಿಕಾರ, ಪುರಸಭಾ ಯೋಜನಾ ಪ್ರಾಧಿಕಾರಗಳ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆಯಡಿ ಕೆರೆಗಳ ಪುನರುಜ್ಜೀವನ ಶುಲ್ಕ ವಿನಿಯೋಗ ಕುರಿತು ಜರುಗಿದ ಸಭೆಯಲ್ಲಿ ಮಾತನಾಡಿದ ಅವರು, ಕೆರೆಗಳ ಪುನರುಜ್ಜೀವನ ಕಾಮಗಾರಿಗಳನ್ನು ತ್ವರಿತವಾಗಿ ಕೈಗೆತ್ತಿಕೊಳ್ಳಲು ಜಿಲ್ಲಾ ಮಟ್ಟದಲ್ಲಿ ಏಕ ಗವಾಕ್ಷಿ ಸಮಿತಿ ರಚಿಸಲಾಗಿದೆ ಎಂದರು.
ಜಿಲ್ಲೆಯಲ್ಲಿ 268 ಕೆರೆಗಳು ಇದ್ದು, ಅದರಲ್ಲಿ 148 ಕೆರೆಗಳು ಗ್ರಾಮೀಣ ವ್ಯಾಪ್ತಿಯಲ್ಲಿ, 68 ಕೆರೆಗಳು ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯಲ್ಲಿ ಹಾಗೂ 9 ಕೆರೆಗಳು ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬರುತ್ತವೆ. ಮುಖ್ಯವಾಗಿ ಮುಚಖಂಡಿ ಹಾಗೂ ಮಲ್ಲಾಪುರ ಅಭಿವೃದ್ಧಿ ಪಡಿಸಿದಲ್ಲಿ ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸಲು ಸಾಧ್ಯವಾಗುತ್ತದೆ. ಜುಲೈ 27ರಂದು ಭೇಟಿ ನೀಡಿ, ಪರಿಶೀಲನೆ ಮಾಡುವುದಾಗಿ ತಿಳಿಸಿದರು.
ತಂತಿಬೇಲಿ ನಿರ್ಮಾಣ, ಕೆರೆ ಹೂಳು ತೆಗೆಯುವುದು ಮತ್ತು ಕೆರೆಯ ನೀರಿನ ಸಂಗ್ರಹಣೆ ಹೆಚ್ಚಿಸುವ ನಿಟ್ಟಿನಲ್ಲಿ ಅಂತರ್ಜಲ ಮರು ಪೂರ್ಣಗೊಳಿಸುವುದು, ಕೆರೆ ಒತ್ತುವರಿ ತಡೆಯಲು ಅಗತ್ಯ ಸಸಿಗಳನ್ನು ಕೆರೆಯ ದಂಡೆಯಲ್ಲಿ ಬೆಳೆಸುವುದು, ಕೆರೆ ನೀರಿನ ಶುದ್ದೀಕರಣ, ಕೊಳಚೆ ನೀರು ಕೆರೆಗೆ ಸೇರಿದಂತೆ ತಡೆಯುವ ಕಾಮಗಾರಿ, ವಾಯು ವಿಹಾರಕ್ಕೆ ಅಗತ್ಯವಿರುವ ಪಾದಚಾರಿ ಮಾರ್ಗ ನಿರ್ಮಿಸಬೇಕು ಎಂದರು.
ಬಾದಾಮಿ ಅಗಸ್ತ್ಯ ತೀರ್ಥ ಹೊಂಡಲ್ಲಿರುವ ಭೂತನಾಥ ದೇವಸ್ಥಾನಕ್ಕೆ ತೆರಳಲು ದಾರಿ ಒಂದು ಕಡೆ ಮಾತ್ರ ಇದೆ. ಇನ್ನೊಂದು ಕಡೆಯಲ್ಲಿ ಪ್ರವಾಸಿಗರು ತೆರಳಲು ಅನುಕೂಲವಾಗುವ ನಿಟ್ಟಿನಲ್ಲಿ ರಸ್ತೆ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಭಾರತೀಯ ಪುರಾತತ್ವ ಇಲಾಖೆಯಿಂದ ಅನುಮತಿಗಾಗಿ ಪತ್ರ ಬರೆಯಲಾಗಿದೆ ಎಂದು ಪುರಾತತ್ವ ಇಲಾಖೆ ಅಧಿಕಾರಿ ತಿಳಿಸಿದರು.
ಕೆರೆ ಸಂರಕ್ಷಣೆ ಹಾಗೂ ಪುನರುಜ್ಜೀವನ ಕಾಮಗಾರಿಗಳನ್ನು ಕೆಟಿಪಿಪಿ ಕಾಯ್ದೆ ಹಾಗೂ ಇತರೆ ನಿಯಮಗಳ ಅನುಸಾರ ಎಲ್ಲ ಪ್ರಕ್ರಿಯೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಕೆರೆಯ ಪುನರುಜ್ಜೀವನದ ಶುಲ್ಕದ ಹಣ ಸದುಪಯೋಗವಾಗಬೇಕು. ಯಾವುದೇ ಕಾರಣಕ್ಕೂ ದುರ್ಬಳಕೆಯಾಗಬಾರದು ಎಂದರು.
ಉಪಅರಣ್ಯ ಸಂರಕ್ಷಣಾಧಿಕಾರಿ ಪಿ.ರುಥ್ರೇನ್, ಜಿಲ್ಲಾ ಭೂ ದಾಖಲೆ ಇಲಾಖೆಯ ಉಪನಿರ್ದೇಶಕ ರವಿಕುಮಾರ, ಜಿಲ್ಲಾ ಪ್ರವಾಸೋದ್ಯಮ ಇಲಖೆ ಉಪನಿರ್ದೇಶಕ ಜಿ.ಎಸ್.ಹಿತ್ತಲಮನಿ ಇದ್ದರು.
ಮುಚಖಂಡಿ ಕೆರೆ: ಶೀಘ್ರ ಬೋಟಿಂಗ್
ನಗರಕ್ಕೆ ಹೊಂದಿಕೊಂಡಿರುವ ಪ್ರಸಿದ್ಧ ಮುಚಖಂಡಿ ಕೆರೆಗೆ ನೀರು ತುಂಬಿಸುವ ಕಾರ್ಯ ನಡೆದಿದೆ ಎಂದು ಜಿಲ್ಲಾಧಿಕಾರಿ ಸಂಗಪ್ಪ ಹೇಳಿದರು. ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ವರ್ಷಾಂತ್ಯದಲ್ಲಿ ಬೋಟಿಂಗ್ ವ್ಯವಸ್ಥೆ ಮಾಡಲಾಗುತ್ತಿದೆ. ಅಗಸ್ತ್ಯ ತೀರ್ಥ ಹೊಂಡದಲ್ಲಿಯೂ ಬೋಟಿಂಗ್ ವ್ಯವಸ್ಥೆಗೆ ಕ್ರಮವಹಿಸಲಾಗುತ್ತಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.