
ಬಾಗಲಕೋಟೆಯಲ್ಲಿ ಸೋಮವಾರ ನಡೆದ ಮಕ್ಕಳ ಮಾನಸಿಕ ಆರೋಗ್ಯ ಸುಧಾರಿಸುವ ಮತ್ತು ಆತ್ಮಹತ್ಯೆ ತಡೆಗಟ್ಟುವ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಸಂಗಪ್ಪ ಮಾತನಾಡಿದರು
ಬಾಗಲಕೋಟೆ: ‘ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಜಿಲ್ಲಾ ಮಾನಸಿಕ ಆರೋಗ್ಯ ತಜ್ಞರಿಂದ ಶಿಕ್ಷಕರಿಗೆ ಒಂದು ದಿನದ ಕಾರ್ಯಾಗಾರ ಏರ್ಪಡಿಸಿ, ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಸುಧಾರಿಸುವ ಕಾರ್ಯ ಆಗಬೇಕು’ ಎಂದು ಜಿಲ್ಲಾಧಿಕಾರಿ ಸಂಗಪ್ಪ, ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಮಕ್ಕಳ ಮಾನಸಿಕ ಆರೋಗ್ಯ ಸುಧಾರಿಸುವ ಮತ್ತು ಆತ್ಮಹತ್ಯೆ ತಡೆಗಟ್ಟುವ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ತರಬೇತಿಗೆ ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳನ್ನು ಕರೆದು ಅವರಿಗೂ ಅರಿವು ಮೂಡಿಸುವ ಕೆಲಸ ಆಗಬೇಕು’ ಎಂದರು.
‘ಪ್ರತಿಯೊಂದು ಶೈಕ್ಷಣಿಕ ಸಂಸ್ಥೆಗಳಲ್ಲಿ ಸಮಲೋಚಕರನ್ನು ನಿಯೋಜಿಸಿಕೊಂಡು ಕಾಲ, ಕಾಲಕ್ಕೆ ವಿದ್ಯಾರ್ಥಿಗಳೊಡನೆ ಸಮಾಲೋಚನೆ ಮಾಡಿ ವಿದ್ಯಾರ್ಥಿಗಳ ಆತಂಕ ದೂರು ಮಾಡಬೇಕು. ಶಾಲೆಗಳಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆಗಳಾದ 1098, 112 ಮತ್ತು ಟೆಲಿ ಮಾನಸ ಸಂಖ್ಯೆಯಾದ 11416 ಶಾಲೆಗಳಲ್ಲಿ ಎದ್ದು ಕಾಣುವಂತೆ ಗೋಡೆ ಮೇಲೆ ಬರೆಯಿಸಬೇಕು’ ಎಂದು ಸೂಚಿಸಿದರು.
‘ಪೌರಾಡಳಿತದ ನೆರವು ಪಡೆದು ಮಾನಸಿಕ ಆರೋಗ್ಯ ಸುಧಾರಿಸುವ ಮತ್ತು ಆತ್ಮಹತ್ಯೆ ತಡೆಗಟ್ಟುವ ಕುರಿತು ಪ್ರಚಾರ ಮಾಡಬೇಕು. ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ತಪಾಸಣೆ ಕಡ್ಡಾಯವಾಗಿ ಮಾಡಿಸಲು ಸೂಚಿಸಿದ ಅವರು, ವಿದ್ಯಾರ್ಥಿಗಳಲ್ಲಿ ಯಾವುದೇ ರೀತಿಯ ಭೇದ ಮಾಡಬಾರದು. ಪಡೆದ ಅಂಕದ ಮೇಲೆ ವಿದ್ಯಾರ್ಥಿಗಳನ್ನು ತಾರತಮ್ಯದಿಂದ ಕಾಣಬಾರದು’ ಎಂದರು.
‘ವಿದ್ಯಾರ್ಥಿಗಳ ಜೊತೆ ಶಿಕ್ಷಕರು ಸಮಾಲೋಚನೆಯ ಮೂಲಕ ಅವರ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸಬೇಕು. ಮಕ್ಕಳ ರಕ್ಷಣಾ ನೀತಿಯನ್ನು ಎಲ್ಲ ಶಾಲೆಗಳಲ್ಲಿ ಅನುಷ್ಠಾನಗೊಳಿಸಬೇಕು. ಜಿಲ್ಲಾಮಟ್ಟದ ಅಧಿಕಾರಿಗಳು ವಸತಿ ನಿಲಯಗಳಿಗೆ, ಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು’ ಎಂದು ಸೂಚಿಸಿದರು.
ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎ.ಸಿ.ಮನ್ನಿಕೇರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮಂಜುನಾಥ ಡಿ, ಜಿಲ್ಲಾ ಶಸ್ತ್ರಚಿಕಿತ್ಸಕ ಮಹೇಶ ಕೋಣಿ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪುಂಡಲೀಕ ಕಾಂಬಳೆ, ಮಹಿಳಾ ಮತ್ತು ಮಕ್ಕಳ ಅಬಿವೃದ್ದಿ ಇಲಾಖೆ ಉಪನಿರ್ದೇಶಕ ಪ್ರಭಾಕರ ಕೆ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ರಮೇಶ ಚವ್ಹಾಣ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪಂಕಜಾ, ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಶಿವಾನಂದ ಪಟ್ಟಣಶೆಟ್ಟಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.