ADVERTISEMENT

ಮೋದಿ ಸಾಧನೆ ಮನವರಿಕೆ: ಬಿಜೆಪಿ ಜಿಲ್ಲಾ ಘಟಕದಿಂದ ಮನೆ ಮನೆ ಸಂಪರ್ಕ ಅಭಿಯಾನ

​ಪ್ರಜಾವಾಣಿ ವಾರ್ತೆ
Published 8 ಜೂನ್ 2020, 10:52 IST
Last Updated 8 ಜೂನ್ 2020, 10:52 IST
   

ಬಾಗಲಕೋಟೆ: ಪ್ರಧಾನಿ ನರೇಂದ್ರ ಮೋದಿ ಅವರ ಎರಡನೇ ಅವಧಿಯ ಮೊದಲ ವರ್ಷದ ಸಾಧನೆಯನ್ನು ಜನರಿಗೆ ತಲುಪಿಸಲು ಮನೆ ಮನೆ ಸಂಪರ್ಕ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಾಂತಗೌಡ ಪಾಟೀಲ ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಈ ವೇಳೆ ಪ್ರಧಾನಿ ಅವರ ಆತ್ಮನಿರ್ಭರ್ ಭಾರತದ ಸಂಕಲ್ಪ ವಿಚಾರವನ್ನು ಜನರಿಗೆ ಮನದಟ್ಟು ಮಾಡಲಾಗುವುದು. ಪಕ್ಷದ ವಿವಿಧ ಮೋರ್ಚಾಗಳಿಂದ ಡಿಜಿಟಲ್ ರ್ಯಾಲಿಗಳ ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದರು.

370ನೇ ವಿಧಿ ರದ್ದುಗೊಳಿಸುವ ಮೂಲಕ ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ವಾಪಸ್ ಪಡೆದು ಅಲ್ಲಿ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ರಾಮ ಮಂದಿರ ಜಾಗದ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸಲಾಗಿದೆ. ತ್ರಿವಳಿ ತಲಾಖ್ ರದ್ದುಗೊಳಿಸಿ ಮುಸ್ಲಿಂ ಸಮುದಾಯದ ಮಹಿಳೆಯರನ್ನು ಶೋಷಣೆಯಿಂದ ತಪ್ಪಿಸಲಾಗಿದೆ. ರಕ್ಷಣಾ ಕ್ಷೇತ್ರದಲ್ಲಿ ಆಮೂಲಾಗ್ರ ಬದಲಾವಣೆ ತಂದು ಉನ್ನತೀಕರಿಸಲಾಗಿದೆ ಎಂದು ಹೇಳಿದರು.

ADVERTISEMENT

ಕೋವಿಡ್-19 ಸಂಕಷ್ಟ ನಿರ್ವಹಣೆಯಲ್ಲಿ ಪರಿಣಾಮಕಾರಿ ಕ್ರಮಗಳ ಕೈಗೊಂಡು ಜನರ ಸಂಕಷ್ಟ ನಿರ್ವಹಣೆಗೆ ಒತ್ತು ನೀಡಲಾಗಿದೆ. ಆತ್ಮನಿರ್ಭರ ಭಾರತ ಪ್ಯಾಕೇಜ್ ಮೂಲಕ ದೇಶದ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಪ್ರಧಾನಿ ಮುಂದಾಗಿದ್ದಾರೆ ಎಂದು ತಿಳಿಸಿದರು.

ಈ ಎಲ್ಲ ಕಾರ್ಯಕ್ರಮಗಳನ್ನು ಜನರಿಗೆ ಮುಟ್ಟಿಸಲು ಪಕ್ಷದ ಕಾರ್ಯಕರ್ತರ ಪಡೆ ಸಿದ್ಧಗೊಳಿಸಲಾಗಿದೆ. ಜಿಲ್ಲೆಯಲ್ಲಿರುವ 1719 ಬೂತ್ ಗಳ ಪೈಕಿ ಪ್ರತಿ ಬೂತ್ ವ್ಯಾಪ್ತಿಯಲ್ಲಿ ಕನಿಷ್ಠ 100 ಮನೆಗಳನ್ನು ಸಂಪರ್ಕಿಸುವ ಯೋಜನೆ ಹೊಂದಲಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಪಕ್ಷದ ಮುಖಂಡರಾದ ಬಸವರಾಜ ಯಂಕಂಚಿ, ರಾಜು ರೇವಣಕರ, ರಾಜು ನಾಯ್ಕರ, ಬಸವರಾಜ ಅವರಾದಿ, ಸಂಗಮೇಶ ಹಿತ್ತಲಮನಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.