
ಬೀಳಗಿ: ಬೆಳಗಾವಿಯಲ್ಲಿ ಡಿ.8ರಿಂದ 19ರವರೆಗೆ ನಡೆಯುವ ವಿಧಾನಮಂಡಲ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳ ಚರ್ಚೆಗೆ ಪ್ರಥಮ ಆದ್ಯತೆ ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಹನಮಂತ ನಿರಾಣಿ ಹೇಳಿದರು.
ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕ ಎಂಬ ಪ್ರಾಂತೀಯ ಅಸಮಾನತೆಯನ್ನು ಹೋಗಲಾಡಿಸಲು ಬೆಳಗಾವಿಯಲ್ಲಿ ವಿಧಾನಸೌಧ ನಿರ್ಮಿಸಲಾಗಿದೆ. ಈ ಮೂಲಕ ಉತ್ತರ ಕರ್ನಾಟಕದ ಪ್ರಮುಖ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಅನುಕೂಲವಾಗುತ್ತದೆ ಎನ್ನುವುದು ನಮ್ಮೆಲ್ಲರ ಅಪೇಕ್ಷೆಯಾಗಿತ್ತು. ಆದರೆ ವರ್ಷಕ್ಕೊಮ್ಮೆ ನಡೆಯುವ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಈ ಭಾಗದ ಸಮಸ್ಯೆಗಳಿಗೆ ಯಾವುದೇ ರೀತಿಯ ಸೂಕ್ತ ಪರಿಹಾರ ಸಿಕ್ಕಿಲ್ಲ, ಪ್ರಾಂತೀಯ ಅಸಮಾನತೆ ಮುಂದುವರೆದಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಉತ್ತರ ಕರ್ನಾಟಕದ ಕೃಷಿ, ನೀರಾವರಿ, ಶಿಕ್ಷಣ, ಕೃಷ್ಣಾ ಮೇಲ್ದಂಡೆ ಯೋಜನೆ, ಕೈಗಾರಿಕೆ, ಪ್ರವಾಸೋದ್ಯಮ, ಸಹಕಾರ ಮುಂತಾದ ಕ್ಷೇತ್ರಗಳ ಸಮಗ್ರ ಚಿಂತನೆಗೆ ಮೇಲ್ಮನೆ ಮತ್ತು ಕೆಳಮನೆ ಸಭಾಧ್ಯಕ್ಷರು ಶಾಸಕರಿಗೆ ಹಾಗೂ ವಿಧಾನ ಪರಿಷತ್ ಸದಸ್ಯರಿಗೆ ಹೆಚ್ಚಿನ ಅವಕಾಶ ಒದಗಿಸುವ ಮೂಲಕ ಈ ಭಾಗದ ಸಮಗ್ರ ಅಭಿವೃದ್ಧಿ ಗೆ ಸರ್ಕಾರ ಸಹಾಯ ಸಹಕಾರ ನೀಡಬೇಕು ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.