ADVERTISEMENT

ರಬಕವಿ ಬನಹಟ್ಟಿ: ಸುರಕ್ಷಿತ ಸ್ಥಳಕ್ಕೆ ತೆರಳಲು ಸೂಚನೆ

​ಪ್ರಜಾವಾಣಿ ವಾರ್ತೆ
Published 17 ಜೂನ್ 2021, 17:11 IST
Last Updated 17 ಜೂನ್ 2021, 17:11 IST
ರಬಕವಿ ಬನಹಟ್ಟಿ ತಾಲ್ಲೂಕಿನ ಹಿಪ್ಪರಗಿ ಜಲಾಶಯದಿಂದ ನೀರನ್ನು ನದಿಗೆ ಬಿಡಲಾಗುತ್ತಿದೆ
ರಬಕವಿ ಬನಹಟ್ಟಿ ತಾಲ್ಲೂಕಿನ ಹಿಪ್ಪರಗಿ ಜಲಾಶಯದಿಂದ ನೀರನ್ನು ನದಿಗೆ ಬಿಡಲಾಗುತ್ತಿದೆ   

ರಬಕವಿ ಬನಹಟ್ಟಿ: ಕೃಷ್ಣಾ ಜಲಾನಯನ ಪ್ರದೇಶ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಭಾರಿ ಮಳೆ ಸುರಿಯುತ್ತಿರುವುದರಿಂದ ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ.

ಈ ಕುರಿತು ಹಿಪ್ಪರಗಿ ಜಲಾಶಯದ ಕಾರ್ಯ ನಿರ್ವಾಹಕ ಎಂಜಿನಿಯರ್ ಕೆ.ಕೆ. ಜಾಲಿಬೇರಿ ಮಾತನಾಡಿ, ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಇದರಿಂದಾಗಿ ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗುತ್ತಿದೆ. ಆದರೆ ಇದುವರೆಗೆ ಕೊಯ್ನಾ ಜಲಾಶಯದಿಂದ ನೀರನ್ನು ಬಿಟ್ಟಿಲ್ಲ. ಆದ್ದರಿಂದ ನದಿ ತೀರದ ಜನರು ತಮ್ಮ ಜಾನುವಾರುಗಳು ಜೊತೆಗೆ ಸುರಕ್ಷಿತ ಸ್ಥಳಕ್ಕೆ ತೆರಳಬೇಕು ಎಂದು ಮನವಿ ಮಾಡಿದ್ದಾರೆ.

ಗುರುವಾರ ಐವತ್ತು ಸಾವಿರ ಕ್ಯೂಸೆಕ್‍ ನೀರು ಹರಿದು ಬಂದಿದ್ದು, ಬಂದಷ್ಟೇ ನೀರನ್ನು ನದಿಗೆ ಬಿಡಲಾಗುತ್ತಿದೆ. ಹಿಪ್ಪರಗಿ ಜಲಾಶಯದ ನೀರಿನ ಮಟ್ಟ 520 ಅಡಿ ಇದ್ದು, ಜಲಾಶಯದಲ್ಲಿ 2.20 ಟಿಎಂಸಿ ಅಡಿ ನೀರಿನ ಸಂಗ್ರಹವಿದೆ ಎಂದು ಸಹಾಯಕ ಎಂಜಿನಿಯರ್ ವಿಠ್ಠಲ ನಾಯಕ ತಿಳಿಸಿದರು.

ADVERTISEMENT

ಇನ್ನೂ ಪ್ರವಾಹದ ಬಗ್ಗೆ ಯಾವುದೆ ಮುನ್ಸೂಚನೆಗಳು ಇಲ್ಲ. ಆದರೆ ಪ್ರವಾಹ ಎದುರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಹಶೀಲ್ದಾರ್‌ ಸಂಜಯ ಇಂಗಳೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.