ADVERTISEMENT

ಗೋಹತ್ಯೆ ಖಂಡಿಸಿ ಪ್ರತಿಭಟನೆ

ಬಾದಾಮಿಯಲ್ಲಿ ಬಿಗುವಿನ ವಾತಾವರಣ

​ಪ್ರಜಾವಾಣಿ ವಾರ್ತೆ
Published 29 ಜೂನ್ 2023, 16:34 IST
Last Updated 29 ಜೂನ್ 2023, 16:34 IST
ಗೋಹತ್ಯೆ ಮಾಡಿದವರನ್ನು ಬಂಧಿಸುವಂತೆ ಆಗ್ರಹಿಸಿ ಗುರುವಾರ ಬಾದಾಮಿಯ ವೀರಪುಲಿಕೇಶಿ ವೃತ್ತದಲ್ಲಿ ಶ್ರೀರಾಮ ಸೇನೆ, ಬಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು
ಗೋಹತ್ಯೆ ಮಾಡಿದವರನ್ನು ಬಂಧಿಸುವಂತೆ ಆಗ್ರಹಿಸಿ ಗುರುವಾರ ಬಾದಾಮಿಯ ವೀರಪುಲಿಕೇಶಿ ವೃತ್ತದಲ್ಲಿ ಶ್ರೀರಾಮ ಸೇನೆ, ಬಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು    

ಬಾದಾಮಿ (ಬಾಗಲಕೋಟೆ ಜಿಲ್ಲೆ): ಗೋಹತ್ಯೆ ಮಾಡಿದವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ಶ್ರೀರಾಮ ಸೇನೆ, ಬಜರಂಗ ದಳ ಮತ್ತು ಹಿಂದೂ ಜಾಗರಣ ವೇದಿಕೆ ಸದಸ್ಯರು ಗುರುವಾರ ಅಂಗಡಿಗಳನ್ನು ಬಂದ್ ಮಾಡಿಸಿ, ರಸ್ತೆ ತಡೆ ನಡೆಸಿದರು. ವೀರಪುಲಿಕೇಶಿ ವೃತ್ತದಲ್ಲಿ ಟೈರಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

‘ಗೋಹತ್ಯೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದನ್ನು ಉಲ್ಲಂಘಿಸಿ ಪಟ್ಟಣದ ಹೊರವಲಯದ ತೋಟದಲ್ಲಿ 15ಕ್ಕೂ ಅಧಿಕ ಗೋವುಗಳನ್ನು ಹತ್ಯೆ ಮಾಡಲಾಗಿದೆ’ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಗೋವುಗಳನ್ನು ಹತ್ಯೆ ಮಾಡಿದ ಮತ್ತು ಚೀಲಗಳಲ್ಲಿ ತುಂಬಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಪಟ್ಟಣದಲ್ಲಿ ಪರಿಸ್ಥಿತಿ ಸೂಕ್ಷ್ಮವಾಗಿದ್ದು, ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ADVERTISEMENT

ಗೋಹತ್ಯೆ ಮಾಡಿದವರನ್ನು ಬಂಧಿಸಬೇಕು ಹಾಗೂ ಅವುಗಳ ಹತ್ಯೆ ತಡೆಯುವಲ್ಲಿ ವಿಫಲರಾದ ಪೊಲೀಸರನ್ನು ಅಮಾನತು ಮಾಡಬೇಕು ಎಂದು ಹಿಂದೂ ಜಾಗರಣ ವೇದಿಕೆ ಪ್ರಾಂತ ಪ್ರಮುಖ ಕುಮಾರಸ್ವಮಿ ಹಿರೇಮಠ ಆಗ್ರಹಿಸಿದ್ದಾರೆ.

‘ಗೋಹತ್ಯೆಗೆ ಸಂಬಂಧಿಸಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದೇವೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠ ಜಯಪ್ರಕಾಶ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.