
ಮಹಾಲಿಂಗಪುರ: ‘ಮುಂದಿನ ಮಾರ್ಚ್ ತಿಂಗಳಲ್ಲಿ ನಡೆಯಲಿರುವ ಬಂದಲಕ್ಷ್ಮೀ ದೇವಿ ಜಾತ್ರೆಗೆ ಅಗತ್ಯ ಸಿದ್ಧತೆ ಕೈಗೊಂಡು ಭಕ್ತರಿಗೆ ಅಗತ್ಯ ಮೂಲಸೌಲಭ್ಯ ಕಲ್ಪಿಸಬೇಕು. ಯಾವುದೇ ಕುಂದುಕೊರತೆ ಆಗದಂತೆ ನೋಡಿಕೊಳ್ಳಬೇಕು’ ಎಂದು ರನ್ನಬೆಳಗಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ರೂಪಾ ಹೊಸಟ್ಟಿ ಅಧಿಕಾರಿಗಳಿಗೆ ಸೂಚಿಸಿದರು.
ರನ್ನಬೆಳಗಲಿ ಪಟ್ಟಣ ಪಂಚಾಯಿತಿ ಸಭಾಭವನದಲ್ಲಿ ಶುಕ್ರವಾರ ನಡೆದ ವಿಶೇಷ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸ್ಥಾಯಿ ಸಮಿತಿ ಚೇರಮನ್ ಪ್ರವೀಣ ಭರಮನಿ ಮಾತನಾಡಿ, ‘ಸಾರ್ವಜನಿಕರಿಗೆ ಹೊರೆಯಾಗದಂತೆ ತೆರಿಗೆ ಪರಿಕ್ಷರಣೆ ನಿಗದಿ ಮಾಡಬೇಕು. ಹೆಚ್ಚಿನ ಪ್ರಮಾಣದಲ್ಲಿ ತೆರಿಗೆ ಸಂಗ್ರಹವಾಗುವಂತೆ ತೆರಿಗೆ ವಸೂಲಿ ಅಧಿಕಾರಿಗಳು ಕ್ರಮ ವಹಿಸಬೇಕು. ಸಾರ್ವಜನಿಕರ ಕೆಲಸ ಕಾರ್ಯಗಳು ಸಕಾಲದಲ್ಲಿ ಮುಗಿಯುವಂತೆ ನೋಡಿಕೊಳ್ಳಬೇಕು’ ಎಂದು ಸಿಬ್ಬಂದಿಗೆ ತಿಳಿಸಿದರು.
ಸರ್ಕಾರದ ಆದೇಶದಂತೆ 2026-27ನೇ ಸಾಲಿನ ಆಸ್ತಿ ತೆರಿಗೆ ದರ ಶೇ 3 ರಿಂದ 5ರವರೆಗೆ ಪರಿಷ್ಕರಣೆ ಮಾಡುವುದಕ್ಕೆ, ವಿವಿಧ ಯೋಜನೆಯ ದರ ಮಂಜೂರಾತಿಗೆ ಸಭೆ ಅನುಮೋದನೆ ನೀಡಿತು. ಕಂದಾಯ ವಿಭಾಗಕ್ಕೆ ಸಂಬಂಧಪಟ್ಟಂತೆ ಉತಾರ, ಖಾತಾ ಬದಲಾವಣೆ, ಬೋಜಾ ದಾಖಲಿಸುವ, ನೀರಿನ ಕರ, ಆಸ್ತಿ ದಾಖಲಿಸುವ ಸೇರಿದಂತೆ ವಿವಿಧ ಶುಲ್ಕವನ್ನು ಪರಿಷ್ಕರಣೆ ಮಾಡುವ ಕುರಿತು ಚರ್ಚಿಸಿ ಸಭೆ ಒಪ್ಪಿಗೆ ನೀಡಿತು.
ಮುಖ್ಯಾಧಿಕಾರಿ ಈರಣ್ಣ ದಡ್ಡಿ, ಸದಸ್ಯರು, ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.