ADVERTISEMENT

‘ಸುಭಾಷ್ ಅಡಿ ಸಮಿತಿ ರದ್ದುಗೊಳಿಸಿ’

ಪಂಚಮಸಾಲಿ ಸಮಾಜದ ರಾಜ್ಯ ಕಾರ್ಯಕಾರಿಣಿ: ಮೂರು ನಿರ್ಣಯ

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2021, 2:24 IST
Last Updated 10 ಡಿಸೆಂಬರ್ 2021, 2:24 IST
ಬಾಗಲಕೋಟೆಯಲ್ಲಿ ಗುರುವಾರ ರಾತ್ರಿ ನಡೆದ ಪಂಚಮಸಾಲಿ ಸಮಾಜದ ರಾಜ್ಯ ಕಾರ್ಯಕಾರಿಣಿಯಲ್ಲಿ ಕೂಡಲಸಂಗಮ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಮಾತನಾಡಿದರು
ಬಾಗಲಕೋಟೆಯಲ್ಲಿ ಗುರುವಾರ ರಾತ್ರಿ ನಡೆದ ಪಂಚಮಸಾಲಿ ಸಮಾಜದ ರಾಜ್ಯ ಕಾರ್ಯಕಾರಿಣಿಯಲ್ಲಿ ಕೂಡಲಸಂಗಮ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಮಾತನಾಡಿದರು   

ಬಾಗಲಕೋಟೆ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಸಂಬಂಧಿಸಿದಂತೆ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ನೀಡುವ ವರದಿಯೇ ಅಂತಿಮ ಆಗುವುದರಿಂದ ನಿವೃತ್ತ ನ್ಯಾಯಮೂರ್ತಿ ಸುಭಾಷ್ ಅಡಿ ನೇತೃತ್ವದ ಸಮಿತಿಯನ್ನು ರದ್ದುಗೊಳಿಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಲು ಗುರುವಾರ ಇಲ್ಲಿ ನಡೆದ ಪಂಚಮಸಾಲಿ ಸಮಾಜದ ರಾಜ್ಯ ಕಾರ್ಯಕಾರಿಣಿಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.

ಡಿಸೆಂಬರ್ 15ರಂದು ವಿಧಾನಮಂಡಲದ ಅಧಿವೇಶನ ನಡೆಯುವ ಬೆಳಗಾವಿ ನಗರದಲ್ಲಿ ಸಮಾಜದ ಹಾಲಿ, ಮಾಜಿ ಜನಪ್ರತಿನಿಧಿಗಳನ್ನು ಕರೆದು ಮೀಸಲಾತಿಗೆ ಸಂಬಂಧಿಸಿದಂತೆ ಚರ್ಚಿಸುವ ಸಭೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಆಹ್ವಾನಿಸಲು ನಿರ್ಧರಿಸಲಾಯಿತು.

ಸಮಾಜದ ಮೀಸಲಾತಿ ಬೇಡಿಕೆ ಈಡೇರಿಕೆಗೆ ಜನವರಿ 1ರವರೆಗೆ ಕಾಲಾವಕಾಶ ಕೇಳಿದ್ದು, ಅದನ್ನು ಈಡೇರಿಸುವ ನಿಟ್ಟಿನಲ್ಲಿ ಏನು ಮಾಡಲಾಗಿದೆ ಎಂಬುದರ ಬಗ್ಗೆ ಅವರಿಂದ ಸ್ಪಷ್ಟೀಕರಣ ಪಡೆಯಲು ತೀರ್ಮಾನಿಸಲಾಯಿತು.

ADVERTISEMENT

ಸಮಾಜಕ್ಕೆ 2ಎ ಮೀಸಲಾತಿ ಬೇಡಿಕೆ ಈಡೇರಿಕೆಗಾಗಿ ಬೆಂಗಳೂರಿಗೆ ಆರಂಭಿಸಿದ ಪಾದಯಾತ್ರೆಗೆ ಒಂದು ವರ್ಷ ಆಗುವ ಹಿನ್ನೆಲೆಯಲ್ಲಿ, ’ಮೀಸಲಾತಿ ಹೋರಾಟ ಆರಂಭವಾಗಿ ಒಂದು ವರ್ಷ, ಪಂಚಮಸಾಲಿಗಳ ಆಕ್ರೋಶ‘ ಹೆಸರಿನಲ್ಲಿ ಜನವರಿ 14ರಂದು ಕೂಡಲಸಂಗಮದಲ್ಲಿ ಸಮಾವೇಶ ನಡೆಸುವುದು. ಸರ್ಕಾರ ಅಷ್ಟರೊಳಗೆ ಅಂತಿಮ ತೀರ್ಮಾನ ಕೈಗೊಳ್ಳದಿದ್ದರೆ ಮುಂದಿನ ಹೋರಾಟದ ರೂಪುರೇಷೆಗಳನ್ನು ಅಲ್ಲಿಯೇ ತೀರ್ಮಾನಿಸುವುದು ಎಂಬ ನಿರ್ಣಯಗಳನ್ನು ಸಭೆಯಲ್ಲಿ ಕೈಗೊಳ್ಳಲಾಯಿತು.

ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಪಂಚಮಸಾಲಿ ಸಮಾಜದ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ, ಶಾಸಕರಾದ ಅರವಿಂದ ಬೆಲ್ಲದ, ಬಸನಗೌಡ ಪಾಟೀಲ ಯತ್ನಾಳ, ಎಚ್.ಎಸ್.ಶಿವಶಂಕರ, ವಿವಿಧ ವಿಭಾಗಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.