ADVERTISEMENT

ಸಾಲದಲ್ಲಿ ರಾಜ್ಯ ಸರ್ಕಾರ, ಅಭಿವೃದ್ಧಿ ಕಾರ್ಯಗಳು ಸ್ಥಗಿತ: ಶಾಸಕ ಸಿದ್ದು ಸವದಿ

ರಬಕವಿ ಬನಹ‍ಟ್ಟಿಯಲ್ಲಿ ಶಾಸಕ ಸಿದ್ದು ಸವದಿ ಅಭಿಪ್ರಾಯ

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2025, 14:37 IST
Last Updated 6 ಏಪ್ರಿಲ್ 2025, 14:37 IST
ರಬಕವಿ ಬನಹಟ್ಟಿಯ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ನೂತನ ಪದಾಧಿಕಾರಿಗಳಿಗೆ ಪ್ರಮಾಣ ಪತ್ರ ವಿತರಣೆ ಮತ್ತು ಸನ್ಮಾನ ಕಾರ್ಯಕ್ರಮವನ್ನು ಶಾಸಕ ಸಿದ್ದು ಸವದಿ ನೆರವೇರಿಸಿದರು
ರಬಕವಿ ಬನಹಟ್ಟಿಯ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ನೂತನ ಪದಾಧಿಕಾರಿಗಳಿಗೆ ಪ್ರಮಾಣ ಪತ್ರ ವಿತರಣೆ ಮತ್ತು ಸನ್ಮಾನ ಕಾರ್ಯಕ್ರಮವನ್ನು ಶಾಸಕ ಸಿದ್ದು ಸವದಿ ನೆರವೇರಿಸಿದರು   

ರಬಕವಿ ಬನಹ‍ಟ್ಟಿ: ಕಾಂಗ್ರೆಸ್ ಪಕ್ಷ ಅಧಿಕಾರದ ದುರಾಸೆಯಿಂದ ರಾಜ್ಯವನ್ನು ಸಂಪೂರ್ಣವಾಗಿ ಸಾಲದಲ್ಲಿ ಮುಳುಗಿಸಿದ್ದು, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದರೂ ಅವರು ಕೇವಲ ಸಾಲಕ್ಕೆ ಬಡ್ಡಿಯನ್ನು ತುಂಬುವುದನ್ನು ಮಾಡಬೇಕು. ಕಾಂಗ್ರೆಸ್ ರಾಜ್ಯವನ್ನು ಸಾಲದಲ್ಲಿ ಮುಳುಗಿಸಿದ್ದರಿಂದ ಅಭಿವೃದ್ಧಿ ಕಾರ್ಯಕ್ರಮಗಳು ಸಂಪೂರ್ಣವಾಗಿ ಸ್ಥಗಿತಗೊಂಡಿವೆ ಎಂದು ಶಾಸಕ ಸಿದ್ದು ಸವದಿ ತಿಳಿಸಿದರು.

ಅವರು ಶನಿವಾರ ಇಲ್ಲಿನ ಬಿಜೆಪಿ ಕಾರ್ಯಾಲಯದಲ್ಲಿ ಹಮ್ಮಿಕೊಂಡ ನೂತನ ಪದಾಧಿಕಾರಿಗಳಿಗೆ ಪದಗ್ರಹಣ, ಪ್ರಮಾಣ ಪತ್ರ ವಿತರಣೆ ಮತ್ತು ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಚುನಾವಣೆಯ ಸಂದರ್ಭದಲ್ಲಿ ಪಕ್ಷದ ಬಲವರ್ಧನೆಗಾಗಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕು. ಚುನಾವಣೆಯಲ್ಲಿ ಸೇವೆ ಸಲ್ಲಿಸುವುದು ಅದೊಂದು ಧರ್ಮ ಯುದ್ಧವಾಗಿದೆ. ಪಕ್ಷ ವಹಿಸಿಕೊಟ್ಟ ಕಾರ್ಯಗಳನ್ನು ಪ್ರಾಮಾಣಿಕವಾಗಿ, ಜವಾಬ್ದಾರಿಯುತವಾಗಿ ಮತ್ತು ವೈಯಕ್ತಿಕ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ನಿರ್ವಹಿಸಬೇಕು ಎಂದರು.

ADVERTISEMENT

ಎಲ್ಲರಿಗೂ ಅಧಿಕಾರ ನೀಡಲು ಸಾಧ್ಯವಿಲ್ಲ. ಇಂದು ಅಧಿಕಾರ ವಂಚಿತರು ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಿನ ಹುದ್ದೆಯನ್ನು ಪಡೆದುಕೊಳ್ಳಬಹುದಾಗಿದೆ ಎಂದು ಶಾಸಕ ಸಿದ್ದು ಸವದಿ ತಿಳಿಸಿದರು.

ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಸಿ.ಟಿ. ಉಪಾಧ್ಯೆ, ಒಬಿಸಿ ಜಿಲ್ಲಾ ಘಟಕದ ಅಧ್ಯಕ್ಷ ಸಂಗಮೇಶ ದಳವಾಯಿ, ನಗರಸಭೆಯ ಅಧ್ಯಕ್ಷೆ ವಿದ್ಯಾ ಧಬಾಡಿ, ಮಹಾಂತೇಶ ಹಿಟ್ಟಿಮನಮಠ, ಶ‍್ರೀಶೈಲ ಬೀಳಗಿ, ಧರೆಪ್ಪ ಉಳ್ಳಾಗಡ್ಡಿ, ಸುರೇಶ ಅಕ್ಕಿವಾಟ, ಬಾಬಾಗೌಡ ಪಾಟೀಲ, ಚಿದಾನಂದ ಹೊರ‍ಟ್ಟಿ, ಶಿವಾನಂದ ಗಾಯಕವಾಡ, ಪುಂಡಲೀಕ ಪಾಲಭಾವಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.