ADVERTISEMENT

ಬಾಗಲಕೋಟೆ | ಮೌಲ್ಯಮಾಪನ ಕಾರ್ಯದಲ್ಲಿ ಭಾಗಿ: ಶಿಕ್ಷಕನಿಗೆ ಸೋಂಕು ದೃಢ

​ಪ್ರಜಾವಾಣಿ ವಾರ್ತೆ
Published 19 ಜುಲೈ 2020, 16:15 IST
Last Updated 19 ಜುಲೈ 2020, 16:15 IST

ಬಾಗಲಕೋಟೆ: ಎಸ್‌ಎಸ್‌ಎಲ್‌ಸಿ ಮೌಲ್ಯಮಾಪನ ಕಾರ್ಯದಲ್ಲಿ ಭಾಗಿಯಾಗಿದ್ದ ಬಾದಾಮಿ ತಾಲ್ಲೂಕು ಕಟಗೇರಿ ಗ್ರಾಮದ 50 ವರ್ಷದ ವಿಜ್ಞಾನ ಶಿಕ್ಷಕನಿಗೆ ಭಾನುವಾರ ಕೋವಿಡ್ ದೃಢಪಟ್ಟಿದೆ. ಅವರನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.

ಬಾಗಲಕೋಟೆ ವಿದ್ಯಾಗಿರಿಯಲ್ಲಿ ನೆಲೆಸಿದ್ದ ಅವರು, ಅಲ್ಲಿನ ಖಾಸಗಿ ಶಾಲೆಯೊಂದರಲ್ಲಿ ಜುಲೈ 13ರಿಂದ 17ರವರೆಗೆ ನಡೆದಿದ್ದ ಮೌಲ್ಯಮಾಪನ ಕಾರ್ಯದಲ್ಲಿ ಭಾಗಿಯಾಗಿದ್ದರು. ಆರು ಮಂದಿ ಮೌಲ್ಯಮಾಪಕ ಶಿಕ್ಷಕರ ಮೇಲೆ ಡೆಪ್ಯೂಟಿ ಚೀಫ್ ಆಗಿ ಕರ್ತವ್ಯ ನಿರ್ವಹಿಸಿದ್ದರು. ಅವರೊಂದಿಗೆ ಒಂದೇ ಕೊಠಡಿಯಲ್ಲಿ 20 ಮಂದಿ ಕಾರ್ಯನಿರ್ವಹಿಸಿದ್ದರು ಎಂದು ತಿಳಿದುಬಂದಿದೆ.

’ಮೌಲ್ಯಮಾಪನದ ವೇಳೆ ಸೋಂಕಿತ ಶಿಕ್ಷಕನ ಸಂ‍ಪರ್ಕಕ್ಕೆ ಬಂದಿದ್ದ ಎಲ್ಲರನ್ನೂ ಕ್ವಾರೆಂಟೈನ್‌ಗೆ ಒಳಪಡಿಸಲು ಹಾಗೂ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೊಳ‍ಡಿಸಲು ನಿರ್ಧರಿಸಲಾಗಿದೆ‘ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಶ್ರೀಶೈಲ ಬಿರಾದಾರ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.