ಬೀಳಗಿ: ‘ಮನೆಯೇ ಮೊದಲ ಪಾಠ ಶಾಲೆ, ತಾಯಿಯೇ ಮೊದಲ ಗುರು. ತಾಯಂದಿರು ಮನಸ್ಸು ಮಾಡಿದರೆ ಮಕ್ಕಳು ದುಶ್ಚಟಗಳಿಗೆ ಬಲಿಯಾಗುವುದನ್ನು ತಡೆಗಟ್ಟಲು ಸಾಧ್ಯ’ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಜಿಲ್ಲಾ ನಿರ್ದೇಶಕ ಚೆನ್ನಕೇಶವ ಹೇಳಿದರು.
ಪಟ್ಟಣದ ನೀಲಕಂಠೇಶ್ವರ ದೇವಸ್ಥಾನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ವತಿಯಿಂದ ಬುಧವಾರ ಏರ್ಪಡಿಸಿದ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ತಾಲ್ಲೂಕಾ ಯೋಜನಾಧಿಕಾರಿ ಸುಬ್ರಾಯ ಕೆ. ಪ್ರಾಸ್ತಾವಿಕವಾಗಿ ಮಾತನಾಡಿ, ತಂಬಾಕು ಮತ್ತು ಇತರ ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮ ಮತ್ತು ಅವುಗಳನ್ನು ತಡೆಗಟ್ಟುವ ಕ್ರಮಗಳ ಬಗ್ಗೆ ವಿವರಿಸಿದರು.
ಆರೋಗ್ಯ ಇಲಾಖೆಯ ಸಂಪನ್ಮೂಲ ವ್ಯಕ್ತಿ ಪ್ರಕಾಶ ಮಾತನಾಡಿ, ‘ಆರೋಗ್ಯ ಇಲಾಖೆಯಿಂದ ಸಾಕಷ್ಟು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಮೇಲಿಂದ ಮೇಲೆ ಆಯೋಜನೆ ಮಾಡಲಾಗುತ್ತಿದ್ದು ಅವುಗಳ ಸದುಪಯೋಗ ಪಡೆಯಬೇಕು’ ಎಂದು ತಿಳಿಸಿದರು.
ವಲಯ ಮೇಲ್ವಿಚಾರಕಿ ನಿರ್ಮಲಾ ಗೊರ್ಜನಾಳ, ಗಿರಿಜಾ ಕಟಗೇರಿ, ಬೀಳಗಿ ವಲಯದ ಎಲ್ಲ ಸೇವಾ ಪ್ರತಿನಿಧಿಗಳು ಒಕ್ಕೂಟದ ಪದಾಧಿಕಾರಿಗಳು ಮತ್ತು ಸಂಘದ ಸದಸ್ಯರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.