ಬಾಗಲಕೋಟೆ: ಕೋವಿಡ್-19 ಸೋಂಕಿಗೆ ತುತ್ತಾಗಿ ಜಿಲ್ಲೆಯಲ್ಲಿ ಭಾನುವಾರ ಮತ್ತಿಬ್ಬರು ಸಾವಿಗೀಡಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.
ಬಾಗಲಕೋಟೆಯ ನವನಗರದ 56ನೇ ಸೆಕ್ಡರ್ ನಿವಾಸಿ 74 ವರ್ಷದ ವೃದ್ಧ ಉಸಿರಾಟದ ತೊಂದರೆಯ (ಎಸ್ಎಆರ್ಐ) ಕಾರಣಕ್ಕೆ ಮೂರು ದಿನಗಳ ಹಿಂದೆ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ನಸುಕಿನಲ್ಲಿ ಮೃತಪಟ್ಟಿದ್ದಾರೆ.
ಬಾಗಲಕೋಟೆ ತಾಲ್ಲೂಕಿನ ಕಲಾದಗಿಯ 44 ವರ್ಷದ ಯುವಕ ಅನಾರೋಗ್ಯದ ಕಾರಣ ಐದು ದಿನಗಳ ಹಿಂದೆ ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆರೋಗ್ಯ ಸ್ಥಿತಿ ಗಂಭೀರವಾದ ಕಾರಣ ಅವರನ್ನು ಶನಿವಾರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಅವರಿಗೆ ಕೋವಿಡ್-19 ದೃಢಪಟ್ಟಿತ್ತು. ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದಾರೆ.
ಇಬ್ಬರ ಮೃತದೇಹಗಳನ್ನು ಕೋವಿಡ್ ನಿಯಮಾವಳಿ ಅನ್ವಯ ಅಂತ್ಯಕ್ರಿಯೆ ನೆರವೇರಿಸಲಾಗಿದೆ ಎಂದು ಜಿಲ್ಲಾ ಆಸ್ಪತ್ರೆ ಸರ್ಜನ್ ಡಾ.ಪ್ರಕಾಶ ಬಿರಾದಾರ 'ಪ್ರಜಾವಾಣಿ' ಗೆ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.