
ಬಾಗಲಕೋಟೆ: ‘ವಿಶ್ವವಿದ್ಯಾಲಯ ಧನ ಸಹಾಯ ಆಯೋಗ ವಿದ್ಯಾರ್ಥಿಗಳಲ್ಲಿ ಸಮಾನತೆ ಪ್ರೋತ್ಸಾಹಿಸಲು ರೂಪಿಸಿರುವ ನಿಯಮಾವಳಿಗಳನ್ನು ಕೂಡಲೇ ಜಾರಿಗೊಳಿಸಬೇಕು’ ಎಂದು ಆಗ್ರಹಿಸಿ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಮೂಲಕ ಕೇಂದ್ರ ಮಾನವ ಸಂಪನ್ಮೂಲ ಸಚಿವರಿಗೆ ರಾಜ್ಯ ದಲಿತ ಸಂಘರ್ಷ ಸಮಿತಿ ಮುಖಂಡರು ಮನವಿ ಸಲ್ಲಿಸಿದರು.
‘ಎಸ್ಸಿ, ಎಸ್ಟಿ ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಸಮಾನತೆ ಪ್ರೋತ್ಸಾಹಿಸಲು ತಂದಿರುವ ನಿಯಮಾವಳಿಗಳಿಗೆ ಸುಪ್ರೀಂ ಕೋರ್ಟ್ ನೀಡಿರುವ ತಡೆ ಆಜ್ಞೆ ತೆರವುಗೊಳಿಸಬೇಕು. ಜಾತಿ, ಧರ್ಮ, ಇನ್ನಿತರ ತಾರತಮ್ಯ ಆಗುತ್ತಿರುವುದನ್ನು ತಡೆಗಟ್ಟಲು ಮಾಡಿರುವ ಯುಜಿಸಿ ನಿಯಮಾವಳಿಗಳನ್ನು ಜಾರಿ ತರಬೇಕು’ ಎಂದು ಒತ್ತಾಯಿಸಿದರು.
‘ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಪ್ರತ್ಯೇಕ ನಿಯಮಾವಳಿಗಳು ಯುಜಿಸಿ ಹೊರಡಿಸಬೇಕು. ರಾಜ್ಯ ಸರ್ಕಾರ ರಾಜ್ಯದಲ್ಲಿ ದಲಿತ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ತರುತ್ತಿರುವ ಕಾನೂನುಗಳನ್ನು ವಿಂಳಬ ಮಾಡದೇ ಜಾರಿಗೆ ತರಬೇಕು’ ಎಂದು ಆಗ್ರಹಿಸಿದರು.
‘ರೋಹಿತ್ ವೇಮುಲ ಕಾಯಿದೆಯನ್ನು ರಾಜ್ಯ ಸರ್ಕಾರ ಕೂಡಲೇ ಜಾರಿಗೊಳಿಸಬೇಕು. ಕೇಂದ್ರ, ರಾಜ್ಯ ಸರ್ಕಾರಗಳು ವಿಳಂಬ ನೀತಿ ಅನುಸರಿಸದೇ ದಲಿತ ವಿದ್ಯಾರ್ಥಿಗಳ ಸಮಾನತೆ ಉತ್ತೇಜನೆಗಾಗಿ ಕ್ರಮ ತೆಗೆದುಕೊಳ್ಳಲು ಮುಂದಾಗಬೇಕು’ ಎಂದು ಕೋರಿದರು.
‘ಕೋಮುವಾದಿಗಳು ಶೋಷಿತ ಸಮುದಾಯದ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಕಿರುಕುಳ ನೀಡಿ ಆತ್ಮಹತ್ಯೆಗೆ ಪ್ರೇರಣೆ ನೀಡಲಾಗುತ್ತಿದ್ದಾರೆ. ಜಾತಿ ದೌರ್ಜನ್ಯ ಕಾರಣಕ್ಕೆ 20ಕ್ಕೂ ಹೆಚ್ಚು ದಲಿತ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂವಿಧಾನ ವಿರೋಧಿ, ದಲಿತ, ಹಿಂದುಳಿದವರು ಹಕ್ಕು ಪಡೆಯುವುದನ್ನು ಸಹಿಸದೇ ಷಡ್ಯಂತ್ರ ರೂಪಿಸಲಾಗುತ್ತಿದೆ’ ಎಂದು ದೂರಿದರು.
ಪ್ರಜ್ಞಾಬೋಧಿಬಂತೇಜಿ, ಪರಶುರಾಮ ಕಾಂಬಳೆ, ಬಸವರಾಜದೊಡಮನಿ, ಹುಲ್ಲಪ್ಪ ಅಂಟರಠಾಣಾ, ದೀಪಕ ಕಂಕಣವಾಡಿ, ಸದಾಶಿವ ಐನಾಪುರ, ದಯಾನಂದ ಕಾಳೆ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.