
ಬಾಗಲಕೋಟೆ: ರಾಜ್ಯ ಬಜೆಟ್ ಮಂಡನೆಗೆ ಪೂರ್ವಭಾವಿ ಸಭೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡುತ್ತಿದ್ದಾರೆ. ಆ ಪಟ್ಟಿಯಲ್ಲಿ ಉತ್ತರ ಕರ್ನಾಟಕದ ಆರ್ಥಿಕ ಚಹರೆ ಬದಲಾವಣೆ ಮಾಡಲಿರುವ ಕೃಷ್ಣಾ ಮೇಲ್ದಂಡೆ ಯೋಜನೆ (ಯುಕೆಪಿ) ಮೂರನೇ ಹಂತ ಪೂರ್ಣಗೊಳಿಸುವ ನಿರೀಕ್ಷೆಗಳು ಹೆಚ್ಚಿವೆ.
ಆಲಮಟ್ಟಿ ಜಲಾಶಯದ ಈಗಿರುವ 519.6 ಮೀಟರ್ನಿಂದ 524.256 ಮೀಟರ್ಗೆ ಎತ್ತರಿಸಿ 130 ಟಿಎಂಸಿ ಅಡಿ ನೀರು ಸಂಗ್ರಹಿಸಬೇಕಿದೆ. ಇದಕ್ಕೆ 1.33 ಲಕ್ಷ ಎಕರೆ ಭೂಸ್ವಾಧೀನ ಪಡಿಸಿಕೊಳ್ಳಬೇಕಿದೆ. ಮುಳುಗಡೆಯಾಗುವ 20 ಗ್ರಾಮಗಳನ್ನು ಸ್ಥಳಾಂತರಿಸಬೇಕಿದೆ. ಈ ಕಾರ್ಯಕ್ಕೆ ₹1 ಲಕ್ಷ ಕೋಟಿಗೂ ಹೆಚ್ಚು ಹಣ ಬೇಕಿದೆ.
ವಿಧಾನಸಭಾ ಚುನಾವಣೆಗೆ ಮುನ್ನ ನಡೆದ ಪ್ರಚಾರ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಐದು ವರ್ಷಗಳ ಅವಧಿಯಲ್ಲಿ ₹2 ಲಕ್ಷ ಕೋಟಿ ವೆಚ್ಚದಲ್ಲಿ ರಾಜ್ಯದ ಎಲ್ಲ ನೀರಾವರಿ ಯೋಜನೆಗಳ ಕಾಮಗಾರಿಗಳನ್ನು ಪೂರ್ಣಗೊಳಿಸುವ ಭರವಸೆ ನೀಡಿದ್ದರು. ಆದರೆ, ನಂತರ ಮಂಡಿಸಿದ ಬಜೆಟ್ನಲ್ಲಿ ಯುಕೆಪಿಗೆ ಸಿಗಬೇಕಾದ ಆದ್ಯತೆ ಸಿಕ್ಕಿಲ್ಲ.
ಯುಕೆಪಿ ಯೋಜನೆ ಜಾರಿಗಾಗಿ ಯುಕೆಪಿ ಸಂತ್ರಸ್ತರ ಹೋರಾಟ ಸಮಿತಿ 15 ದಿನಕ್ಕೂ ಹೆಚ್ಚು ಕಾಲ ಪ್ರತಿಭಟನೆಗೆ ಮುಂದಾಯಿತು. ಬೆಳಗಾವಿಯ ವಿಧಾನಮಂಡಲ ಅಧಿವೇಶನದಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖಂಡರನ್ನು ಕರೆದು ಒಂದೇ ಹಂತದಲ್ಲಿ ಭೂಸ್ವಾಧೀನ ಪಡಿಸಿಕೊಳ್ಳುವ ಹಾಗೂ ಮೂರುವರೆ ವರ್ಷಗಳಲ್ಲಿ ಯೋಜನೆ ಪೂರ್ಣಗೊಳಿಸುವ ಭರವಸೆ ನೀಡಿದ್ದಾರೆ.
ಅದಾದ ನಂತರದಲ್ಲಿ ಪ್ರತಿ ವರ್ಷ ₹18 ಸಾವಿರ ಕೋಟಿ ಮೊತ್ತವನ್ನು ಭೂಸ್ವಾಧೀನಕ್ಕೆ ನೀಡಲಾಗುವುದು ಎಂದು ಘೋಷಿಸಲಾಗಿದೆ. ಮುಳುಗಡೆಯಾಗುವ ನೀರಾವರಿ ಭೂಮಿಯ ಪ್ರತಿ ಎಕರೆಗೆ ₹40 ಲಕ್ಷ, ಒಣ ಭೂಮಿಯ ಪ್ರತಿ ಎಕರೆಗೆ ₹30 ಲಕ್ಷ ಘೋಷಣೆ ಮಾಡಲಾಗಿದೆ. ಆದರೆ, ಇಲ್ಲಿಯವರೆಗೂ ಒಂದು ಎಕರೆ ಭೂಮಿಯೂ ವಶಪಡಿಸಿಕೊಂಡಿಲ್ಲ.
ಈ ಬಜೆಟ್ನಲ್ಲಿ ₹18 ಸಾವಿರ ಅನುದಾನ ನೀಡಬೇಕಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗಳಾಗುತ್ತಿರುತ್ತವೆಯೇ ಹೊರತು, ಗಟ್ಟಿಯಾದ ಧ್ವನಿಯಲ್ಲಿ ಹೋರಾಟಗಾರರಾಗಲಿ, ಜನಪ್ರತಿನಿಧಿಗಳಾಗಲಿ ಇದುವರೆಗೆ ಹೇಳಿಲ್ಲ. ಸರ್ಕಾರ ಅನುದಾನ ತೆಗೆದಿರಿಸಲಿದೆ ಎಂದು ಹೇಳಿಕೊಂಡೇ ಬರುತ್ತಿದ್ದಾರೆ. ಬಜೆಟ್ನಲ್ಲಿ ₹18 ಸಾವಿರ ತೆಗೆದಿರಿಸಿದರೂ, ಈ ಸರ್ಕಾರದ ಆಡಳಿತಾವಧಿಯಲ್ಲಿ ಯೋಜನೆ ಪೂರ್ಣಗೊಳ್ಳುವುದಿಲ್ಲ.
ಯೋಜನೆ ಪೂರ್ಣಗೊಂಡರೆ ಕಲಬುರಗಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಯಾದಗಿರಿ, ರಾಯಚೂರು, ಕೊಪ್ಪಳ ಹಾಗೂ ಗದಗ ಜಿಲ್ಲೆಗಳ 5.30 ಲಕ್ಷ ಹೆಕ್ಟೇರ್ ಕ್ಷೇತ್ರಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲು ಸಾಧ್ಯವಾಗುತ್ತದೆ.
ಕೃಷ್ಣಾ ನ್ಯಾಯಾಧೀಕರಣದ ತೀರ್ಪು ಪ್ರಕಟವಾಗಿ ದಶಕಕ್ಕೂ ಹೆಚ್ಚು ಸಮಯ ಕಳೆದಿದ್ದರೂ ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಶನ್ ಹೊರಡಿಸಿಲ್ಲ. ಸಂಬಂಧಿಸಿದ ರಾಜ್ಯಗಳು ನ್ಯಾಯಾಲಯಕ್ಕೆ ಹೋಗಿರುವುದು ವಿಳಂಬಕ್ಕೆ ಕಾರಣ ಎನ್ನಲಾಗುತ್ತಿದೆ. ರಾಜ್ಯ ಸರ್ಕಾರ ಗೆಜೆಟ್ ನೋಟಿಫಿಕೇಶನ್ ಹೊರಡಿಸಲು ಕೇಂದ್ರದ ಮೇಲೆ ಒತ್ತಡ ಹಾಕುವ ಕೆಲಸ ಮಾಡಬೇಕಿದೆ.
ಸ್ಥಳಾಂತರವಾಗದ ಕೆಬಿಜೆಎನ್ಎಲ್ ಕಚೇರಿ
ಕೃಷ್ಣಾ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಕಚೇರಿಯನ್ನು ಸಂಪೂರ್ಣವಾಗಿ ಆಲಮಟ್ಟಿಗೆ ಸ್ಥಳಾಂತರಿಸಬೇಕು ಎಂಬುದು ಹಲವು ವರ್ಷಗಳ ಹಿಂದೆಯೇ ನಿರ್ಧಾರವಾಗಿದೆ. ಆದರೆ ಇಲ್ಲಿಯವರೆಗೆ ಸ್ಥಳಾಂತರ ಕಾರ್ಯ ಮಾತ್ರವಾಗಿಲ್ಲ. ಯುಕೆಪಿ ಪುನರ್ವಸತಿ ಮತ್ತು ಪುನರ್ ನಿರ್ಮಾಣ ವಿಭಾಗದಲ್ಲಿ ಸಿಬ್ಬಂದಿ ಕೊರತೆ ದೊಡ್ಡ ಪ್ರಮಾಣದಲ್ಲಿದೆ. ಖಾಲಿ ಹುದ್ದೆಗಳ ಭರ್ತಿ ಮಾಡಲಾಗುವುದು ಎಂದು ಹೇಳಲಾಗಿತ್ತು. ಆದರೆ ಇಲ್ಲಿಯವರೆಗೆ ಆ ನಿಟ್ಟಿನಲ್ಲಿ ಯಾವುದೇ ಪ್ರಯತ್ನಗಳಾಗಿಲ್ಲ. ಇದ್ದ ಸಿಬ್ಬಂದಿಯೇ ಎಲ್ಲವನ್ನೂ ಸರಿದೂಗಿಸಿಕೊಂಡು ಹೋಗಬೇಕಿದೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.