
ಬಿ.ವೈ. ವಿಜಯೇಂದ್ರ
ರಬಕವಿ ಬನಹಟ್ಟಿ: ‘ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಜೊತೆ ಕೈಜೋಡಿಸುವ ದುಸ್ಥಿತಿ ಬಿಜೆಪಿಗೆ ಬಂದಿಲ್ಲ. ಅವರ ಜೊತೆ ಸೇರುವ ಅವಶ್ಯಕತೆ ನಮಗಿಲ್ಲ. ಮುಖಂಡರು ಮತ್ತು ಕಾರ್ಯಕರ್ತರ ಶಕ್ತಿಯ ಮೇಲೆಯೇ ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುತ್ತೇವೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಮುಖ್ಯಮಂತ್ರಿಗಳು ಯಾರು ಆಗುತ್ತಾರೆ ಎಂಬುದು ಮುಖ್ಯವಲ್ಲ. ಸಿ.ಎಂ ಬದಲಾವಣೆ ಆಗುವುದು ನೂರಕ್ಕೆ ನೂರು ಸತ್ಯ. ಯಾರೇ ಮುಖ್ಯಮಂತ್ರಿಯಾದರೂ ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ. ಮುಂದಿನ ಎರಡು ವರ್ಷಗಳ ಕಾಲ ಕಾಂಗ್ರೆಸ್ ಪಕ್ಷವೇ ರಾಜ್ಯದಲ್ಲಿ ಅಧಿಕಾರದಲ್ಲಿರಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ರಾಜ್ಯದ ಜನತೆ ಕಾಂಗ್ರೆಸ್ಗೆ ಶಾಪ ಹಾಕುತ್ತಿದ್ದಾರೆ’ ಎಂದರು.
‘ಸಿದ್ಧರಾಮಯ್ಯ ರಾಜ್ಯದ ಶಾಸಕರ ಕ್ಷೇತ್ರಗಳ ಅಭಿವೃದ್ಧಿಗೆ ಅನುದಾನ ನೀಡುತ್ತಿಲ್ಲ ಎಂದು ಕಾಂಗ್ರೆಸ್ ಶಾಸಕರೇ ಅಸಮಾಧನ ವ್ಯಕ್ತಪಡಿಸುತ್ತಿದ್ದಾರೆ’ ಎಂದು ಟೀಕಿಸಿದರು.
‘ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಕಿತ್ತೂರು ಮತ್ತು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಾಡುವಲ್ಲಿ ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿದೆ. ಅಹಿಂದ ನಾಯಕರು ಎಂದು ಹೇಳಿಕೊಂಡು ಅಲ್ಪಸಂಖ್ಯಾತರ ಜಪ ಮಾಡುತ್ತಿದ್ಧಾರೆ. ರಾಜ್ಯದ ಶೋಷಿತ ಜನರನ್ನು ನಿರ್ಲಕ್ಷಿಸಲಾಗಿದೆ’ ಎಂದು ವಾಗ್ದಾಳಿ ನಡೆಸಿದರು.
‘ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ. ಭ್ರಷ್ಟಾಚಾರ ತಾಂಡವವಾಡುತ್ತಿದೆ. ಗೃಹಲಕ್ಷ್ಮಿ ಯೋಜನೆಯ ₹5 ಸಾವಿರ ಕೋಟಿ ಹಣದ ದುರಪಯೋಗದ ಬಗ್ಗೆ ಮೂರು ತಿಂಗಳಿಂದ ಮುಖ್ಯಮಂತ್ರಿ ಯಾವುದೇ ಉತ್ತರ ನೀಡದೆ ಮೌನವಾಗಿದ್ದಾರೆ’ ಎಂದು ಆರೋಪಿಸಿದರು.
ಶಾಸಕರಾದ ಸಿದ್ದು ಸವದಿ, ಜಗದೀಶ ಗುಡಗುಂಟಿಮಠ, ಜಿಲ್ಲಾ ಘಟಕದ ಅಧ್ಯಕ್ಷ ಶಾಂತಗೌಡ ಪಾಟೀಲ, ಶರಣು ತಳಕೇರಿ, ಶ್ರೀಶೈಲ ಬೀಳಗಿ, ಧರೆಪ್ಪ ಉಳ್ಳಾಗಡ್ಡಿ, ವಿದ್ಯಾಧರ ಸವದಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.