ಬಾಗಲಕೋಟೆ: ಜಿಲ್ಲೆಯ ನೇಕಾರರು ಹಾಗೂ ನೇಕಾರರ ಸಂಘಗಳ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಬುಧವಾರ ಜರುಗಿದ ನೇಕಾರರ ಕುಂದುಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನೇಕಾರರ ಸಮಸ್ಯೆಗಳು ನಿನ್ನೆ, ಮೊನ್ನೆಯವಲ್ಲ. ಬಹಳ ವರ್ಷಗಳಿಂದ ಇದ್ದು, ಮೂಲ ವೃತ್ತಿಯನ್ನು ಬಿಟ್ಟು ಬೇರೆ ಬೇರೆ ವೃತ್ತಿ ಕೈಗೊಳ್ಳುವ ಪರಿಸ್ಥಿತಿ ಉಂಟಾಗುತ್ತಿದೆ. ಅಲ್ಲದೇ ಈಗಿನ ಪರಿಸ್ಥಿತಿಗೆ ಅನುಗುಣವಾಗಿ ಕೆಲಸ ಮಾಡಬೇಕಾಗುತ್ತದೆ. ಈ ಬಗ್ಗೆ ಜವಳಿ ಸಚಿವರ ಜೊತೆ ಚರ್ಚಿಸಿ ನೇಕಾರರ ವೃತ್ತಿ ಉಳಿವಿಗೆ ಮತ್ತು ಉತ್ಪನ್ನಗಳ ಮಾರಾಟಕ್ಕೆ ಸರ್ಕಾರದಿಂದ ಸೂಕ್ತ ನೆರವು ಒದಗಿಸುವುದಾಗಿ ಭರವಸೆ ನೀಡಿದರು.
ವೃತ್ತಿಪರ ನೇಕಾರರಿಗೆ ಕಟ್ಟಡ ಕಾರ್ಮಿಕ ಮಾದರಿಯ ಸೌಲಭ್ಯಗಳನ್ನು ಜಾರಿ ಮಾಡಿ ಗುರುತಿನ ಚೀಟಿ ನೀಡುವ ಬೇಡಿಕೆಗೆ ಉತ್ತರಿಸಿದ ಕಾರ್ಮಿಕ ಇಲಾಖೆ ಅಧಿಕಾರಿ, ಕಟ್ಟಡ ಕಾರ್ಮಿಕರಿಗೆ ದೊರೆಯುವ ಸೌಲಭ್ಯ ನೇಕಾರರಿಗೆ ಕೊಡಲು ಅವಕಾಶವಿರುವುದಿಲ್ಲ ಎಂದರು. ಈಗಾಗಲೇ ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ 13,183 ಕೈಮಗ್ಗ ಮತ್ತು 23,735 ವಿದ್ಯುತ್ ಮಗ್ಗ ನೇಕಾರರಿಗೆ ಗುರುತಿನ ಚೀಟಿ ನೀಡಲಾಗಿದೆ. ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ 9 ನೇಕಾರರ ಪೈಕಿ ಮೂವರ ಕುಟುಂಬಕ್ಕೆ ತಲಾ ₹ 5 ಲಕ್ಷ ಪರಿಹಾರ ಧನ ವಿತರಿಸಲಾಗಿದೆ ಎಂದು ಉಪನಿರ್ದೇಶಕ ಪೀರಜಾದೆ ತಿಳಿಸಿದರು.
ರಾಜ್ಯದ ನೇಕಾರರಿಗೆ ಒಂದು ಬಾರಿ ಸಂಪೂರ್ಣ ಸಾಲ ಮನ್ನಾ, 55 ವರ್ಷ ಮೇಲ್ಪಟ್ಟ ನೇಕಾರರಿಗೆ 5 ಸಾವಿರ ಮಾಶಾಸನ ಜಾರಿ, ನಿವೇಶನ ಇಲ್ಲದ ನೇಕಾರರಿಗೆ ಕೆ.ಎಚ್.ಡಿಸಿ ನಿಗಮದಿಂದ ನಿವೇಶನ ಹಂಚಿಕೆ, ಕೇಂದ್ರ ಸರಕಾರ ಕಿಸಾನ್ ಸಮ್ಮಾನ ಯೋಜನೆಯಂತೆ ನೇಕಾರರಿಗೂ ಬುನಕರ ಸಮ್ಮಾನ ಯೋಜನೆ ಜಾರಿಗೊಳಿಸಬೇಕು. ಕೈಮಗ್ಗ ಮತ್ತು ಜವಳಿ ಇಲಾಖೆಗೆ ಹೆಚ್ಚಿನ ಅನುದಾನ ನಿಗದಿ ಮಾಡಬೇಕು ಎಂದು ನೇಕಾರರು ಮನವಿ ಸಲ್ಲಿಸಿದರು.
ರೈಲು ಮತ್ತು ವಿಮಾನ ನಿಲ್ದಾಣದಲ್ಲಿ ನೇಕಾರರು ಉತ್ಪಾದಿಸಿದ ಉತ್ಪನ್ನಗಳನ್ನು ನೇರ ಮಾರಾಟ ಮಾಡಲು ಮಳಿಗೆಗಳನ್ನು ಹಾಕಲು ಅವಕಾಶ ದೊರಕಿಸುವ ಕಾರ್ಯವಾಗಬೇಕು ಎಂದಾಗ ಈ ಬಗ್ಗೆ ಸರ್ಕಾರ ಮಟ್ಟದಲ್ಲಿ ತಿರ್ಮಾನ ಕೈಗೊಳ್ಳಬೇಕಾಗಿರುವುದರಿಂದ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು ಸಚಿವರು ಭರವಸೆ ನೀಡಿದರು.
ವಿಧಾನ ಪರಿಷತ್ ಶಾಸಕ ಪಿ.ಎಚ್. ಪೂಜಾರ, ಜಿಲ್ಲಾಧಿಕಾರಿ ಜಾನಕಿ ಕೆ.ಎಂ, ಜಿಲ್ಲಾ ಪಂಚಾಯಿತಿ ಸಿಇಒ ಶಶಿಧರ ಕುರೇರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.