ಬಾಗಲಕೋಟೆ: ಇಲ್ಲಿನ ನವನಗರದ ಸೆಕ್ಟರ್ ನಂ 27ರ ನಿವಾಸಿ ಯಲ್ಲಪ್ಪ ಬೆಂಡಿಗೇರಿ ಅವರಿಗೆ ರಾಜ್ಯ ಸಹಕಾರ ಕುಕ್ಕಟ ಮಹಾಮಂಡಳದ ಅಧ್ಯಕ್ಷ ಸ್ಥಾನ ಒಲಿದುಬಂದಿದೆ.
ರಾಷ್ಟ್ರೀಯ ಸ್ವಯಂ ಸೇವಕ ಸಂಘದಲ್ಲಿ ಸಕ್ರಿಯರಾಗಿರುವ ಯಲ್ಲಪ್ಪ ಬೆಂಡಿಗೇರಿ ಬಾಗಲಕೋಟೆ ನಗರಸಭೆಗೆ ಎರಡು ಬಾರಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಬಿಜೆಪಿ ಪರಿಶಿಷ್ಟ ಮೋರ್ಚಾದ ಉಪಾಧ್ಯಕ್ಷ, ಕಾರ್ಯದರ್ಶಿ, ಜಿಲ್ಲಾ ಘಟಕದ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ.
ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರ ಸದಸ್ಯರಾಗಿಯೂ ಒಂದು ಅವಧಿಗೆ ನೇಮಕಗೊಂಡಿದ್ದ ಅವರು, ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಖಜಾಂಚಿಯಾಗಿ ಕೆಲಸ ಮಾಡಿದ್ದಾರೆ.
ಡಾ.ಬಾಬು ಜಗಜೀವನರಾಮ್ ಚರ್ಮಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನದ ನಿರೀಕ್ಷೆಯಲ್ಲಿದ್ದೆನು. ಆದರೆ ಅನಿರೀಕ್ಷಿತವಾಗಿ ಮಹಾಮಂಡಳದ ಅಧ್ಯಕ್ಷ ಸ್ಥಾನ ಕೊಟ್ಟಿದ್ದಾರೆ. ಪಕ್ಷ ವಹಿಸಿದ ಜವಾಬ್ದಾರಿ ಇದು. ಸಂತೋಷದಿಂದ ಒಪ್ಪಿಕೊಳ್ಳುತ್ತೇನೆ. ಯಾವುದೇ ಫಲಾಪೇಕ್ಷೆ ಇಲ್ಲದೇ ನಿಷ್ಠೆಯಿಂದ ಕೆಲಸ ಮಾಡಿದರೆ ಪಕ್ಷ ಗುರುತಿಸುತ್ತದೆ ಎಂಬುದಕ್ಕೆ ನಾನೇ ಉದಾಹರಣೆ. ನಾಯಕರ ಮಾರ್ಗದರ್ಶನದಲ್ಲಿ ಕೆಲಸ ಮಾಡಿ ಒಳ್ಳೆಯ ಹೆಸರು ತರಲಿದ್ದೇನೆ ಎಂದು ಯಲ್ಲಪ್ಪ ಬೆಂಡಿಗೇರಿ ’ಪ್ರಜಾವಾಣಿ‘ಗೆ ಪ್ರತಿಕ್ರಿಯಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.