ಬಳ್ಳಾರಿ: `ನೂರಾರು ಕೋಟಿ ಅನುದಾನ ನೀಡಿದರೂ ಬಳ್ಳಾರಿ ಗ್ರಾಮೀಣ ವಿಧಾನಸಭೆ ಕ್ಷೇತ್ರದಲ್ಲಿ ಕುಡಿಯುವ ನೀರು, ರಸ್ತೆ, ಆಶ್ರಯ ಮನೆ ಸೇರಿದಂತೆ ಮೂಲ ಸೌಕರ್ಯಗಳಿಂದ ವಂಚಿತವಾಗಿ ರುವ ಬಗ್ಗೆ ತೀವ್ರ ನೋವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಷಾದ ವ್ಯಕ್ತಪಡಿಸಿದರು.
ತಾಲ್ಲೂಕಿನ ಪರಮದೇವಹಳ್ಳಿ ಗ್ರಾಮದಲ್ಲಿ ಬುಧವಾರ ಉಪ ಚುನಾವಣೆ ಅಂಗವಾಗಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಡಿಸೆಂಬರ್ 19ರಂದು ತಾಲ್ಲೂಕಿನ ಚೆಳ್ಳಗುರ್ಕಿ ಗ್ರಾಮದಲ್ಲಿ ಈ ಕ್ಷೇತ್ರದ ಪ್ರತಿ ಹಳ್ಳಿಗಳಿಂದ ಹತ್ತು ಜನ ಮುಖಂಡರನ್ನು ಕರೆಸಿ, ಕುಂದುಕೊರತೆ ಸಭೆ ನಡೆಸಲಾಗುವುದು. ಸ್ಥಳದಲ್ಲಿಯೇ ಜನರ ಸಮಸ್ಯೆಗಳಿಗೆ ಪರಿಹಾರ ನೀಡಲು ಶ್ರಮಿಸಲಾಗುವುದು ಎಂದರು.
ಸರ್ಕಾರ ಜಾರಿಗೆ ತಂದಿರುವ ಸಂಧ್ಯಾಸುರಕ್ಷ, ವೃದ್ಧಾಪ್ಯ, ವಿಧವಾ ಮತ್ತು ಭಾಗ್ಯಲಕ್ಷ್ಮಿ ಯೋಜನೆಗಳು ಈ ಕ್ಷೇತ್ರದ ಜನರಿಗೆ ತಲುಪದಿರುವುದು ಬೇಸರದ ಸಂಗತಿ ಎಂದ ಅವರು, ಜನಪ್ರತಿಧಿನಿಗಳನ್ನು ನಂಬಿ ಅನುದಾನ ನೀಡಿದ್ದರಿಂದ ಪಶ್ಚಾತ್ತಾಪ ಪಡುವಂ ತಾಗಿದೆ. ಜನರ ಸಮಸ್ಯೆಗಳಿಗೆ ಪರಿಹಾರ ದೊರಕಿಸಲು, ಕ್ಷೇತ್ರದಲ್ಲಿ ಶಾಂತಿ ನೆಲೆಸಲು ಬಿಜೆಪಿ ಅಭ್ಯರ್ಥಿಗೆ ಮತ ನೀಡಬೇಕು ಎಂದು ಅವರು ಕೋರಿದರು.
ಎರಡು ದಿನಗಳಿಂದ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಸಂದರ್ಭ, ಪಕ್ಷದ ಪತ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದೆ. ಜನರ ಈ ಉತ್ಸಾಹ ನೋಡಿದರೆ ಈ ಉಪ ಚುನಾವಣೆಯಲ್ಲಿ ಮತದಾರರು ವ್ಯಕ್ತಿಗಿಂತ ಪಕ್ಷ ಮುಖ್ಯ ಎಂದು ಸಾಬೀತುಪಡಿಸಲಿದ್ದಾರೆ ಎಂದು ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ವಿಶ್ವಾಸ ವ್ಯಕ್ತಪಡಿಸಿದರು.
ಇಲ್ಲಿನ ಮೂವರಿಗೆ ಸಚಿವ ಸ್ಥಾನ ನೀಡಿದರೂ, ಜಿಲ್ಲೆಯಲ್ಲಿ ಕುಡಿಯುವ ನೀರು, ರಸ್ತೆ ಸೇರಿದಂತೆ ಮೂಲ ಸಮಸ್ಯೆಗಳ ಪರಿಹಾರ ಮತ್ತು ಜಿಲ್ಲೆಯ ಅಭಿವೃದ್ಧಿ ಬಗ್ಗೆ ಗಮನ ಹರಿಸಲಾಗಿಲ್ಲ ಎಂದು ಟೀಕಿಸಿದ ಅವರು, ಮುಂದಿನ ದಿನಗಳಲ್ಲಿ ಈ ಭಾಗದ ಅಭಿವೃದ್ಧಿಗೆ ವಿಶೇಷ ಗಮನ ಹರಿಸುವುದಾಗಿ ಹೇಳಿದರು.
ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ಮಾತನಾಡಿದರು. ಸಚಿವರಾದ ಬಸವರಾಜ ಬೊಮ್ಮಾಯಿ, ಸಿ.ಸಿ. ಪಾಟೀಲ, ಮುಖ್ಯಮಂತ್ರಿ ಚಂದ್ರು, ಆಯನೂರ್ ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.