ADVERTISEMENT

‘ಕಾಂಗ್ರೆಸ್ ಗೆ ಜನಬಲ ಬಿಜೆಪಿಗೆ ಹಣ ಬಲ’

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2018, 6:20 IST
Last Updated 23 ಏಪ್ರಿಲ್ 2018, 6:20 IST

ಕುರುಗೋಡು: ಟಿ.ಎಚ್.ಸುರೇಶ್ ಬಾಬು ಕಳೆದ ಎರಡು ಅವಧಿಯಲ್ಲಿಶಾಸಕರಾಗಿ ಆಯ್ಕೆಯಾಗಿದ್ದರೂ ಕಂಪ್ಲಿ ಕ್ಷೇತ್ರದಲ್ಲಿ ಯಾವುದೇ ಶಾಶ್ವತ ಅಭಿವೃದ್ಧಿ ಕಾರ್ಯಗಳು ಕೈಗೊಂಡಿಲ್ಲ ಎಂದು ಮಾಜಿ ಶಾಸಕ ಸೂರ್ಯನಾರಾಯಣ ರೆಡ್ಡಿ ಆರೋಪಿಸಿದರು.

ತಾಲ್ಲೂಕಿನ ಎಮ್ಮಿಗನೂರು ಗ್ರಾಮದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

ಕ್ಷೇತ್ರದ ಬಹುತೇಕ ಗ್ರಾಮಗಳಲ್ಲಿ ರಸ್ತೆ, ಬೀದಿ ದೀಪ, ಚರಂಡಿ, ಕುಡಿಯುವ ನೀರು, ಆಶ್ರಯ ಮನೆ ಸೇರಿ ಮೂಲ ಸೌಲಭ್ಯ ಕಲ್ಪಿಸುವಲ್ಲಿ ಶಾಸಕರು ಸಂಪೂರ್ಣ ವಿಫಲರಾಗಿದ್ದಾರೆ. ರೈತರ ಎರಡನೇ ಬೆಳೆಗೆ ನೀರಿನ ಕೊರತೆ ಉಂಟಾಗಿದೆ. ಶಾಸಕರು ಅದರ ಬಗ್ಗೆ ಗಮನ ಹರಿಸಿಲ್ಲ. ಹಣ ಬಲ ಹಾಗೂ ತೋಳ್ಬಲದಿಂದ ಮತದಾರರಿಗೆ ಮಂಕುಬೂದಿ ಎರಚಲು ಹೊರಟಿದ್ದಾರೆ. ಹಣ ಕೊಟ್ಟು ಮತ ಪಡೆಯುವ ಕಾಲ ಮುಗಿದು ಹೋಗಿದೆ. ಕ್ಷೇತ್ರದ ಮತದಾರರು ಬದಲಾವಣೆ ಬಯಸಿದ್ದಾರೆ. ಕ್ಷೇತ್ರದಲ್ಲಿ ಈ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ADVERTISEMENT

ರಾಜ್ಯದಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್ 5 ವರ್ಷದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದೆ. ಜನಸಾಮಾನ್ಯರನ್ನು ಗುರಿಯಾಗಿಟ್ಟುಕೊಂಡು ಅನೇಕ ಜನಪರ ಯೋಜನೆ ಜಾರಿಗೆ ತಂದಿದೆ. ಈ ಯೋಜನೆಗಳನ್ನು ಪಡೆದ ಫಲಾನುಭವಿಗಳು ಕಾಂಗ್ರೆಸ್ ಅಭ್ಯರ್ಥಿ ಜೆ.ಎನ್.ಗಣೇಶ್ ಅವರನ್ನು ಬೆಂಬಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜಿಲ್ಲಾ ಪಂಚಾಯಿತಿ ಸದಸ್ಯೆ ಎ.ಬನಶಂಕರಿ ವಿರೇಂದ್ರರೆಡ್ಡಿ, ತಾಲ್ಲೂಕು ಪಂಚಾಯಿತಿ ಸದಸ್ಯ ವೆಂಕಟರಾಮರಾಜು ಮತ್ತು ನೆಲ್ಲೂಡಿ ಓಬಳೇಶ್, ಮುಖಂಡರಾದ ಟಿ.ಪಾರ್ಥವಿಜಯ, ಸಾದಾಪುರ ತಿಮ್ಮಪ್ಪ, ಮಲ್ಲಿಕಾರ್ಜುನ, ನಾಗಿರೆಡ್ಡಿ, ಪ್ರತಾಪ್ ರೆಡ್ಡಿ, ಕರಿಬಸವನಗೌಡ, ಇಮಾಮ್, ರಾಮನಾಯ್ಡು, ಕೇಶವರೆಡ್ಡಿ, ರಾಮಾಂಜಿನಿ, ಪ್ರಕಾಶಶೆಟ್ಟಿ, ಬೆಟಿಗೇರಿ ಮಲ್ಲಿಕಾರ್ಜುನ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.