ADVERTISEMENT

ತಹಶೀಲ್ದಾರ ಕಚೇರಿಗೆ ಕಾಂಗ್ರೆಸ್ ಮುತ್ತಿಗೆ

​ಪ್ರಜಾವಾಣಿ ವಾರ್ತೆ
Published 19 ಜೂನ್ 2012, 9:15 IST
Last Updated 19 ಜೂನ್ 2012, 9:15 IST

ಹಗರಿಬೊಮ್ಮನಹಳ್ಳಿ: ಹೈದರಾಬಾದ್ ಕರ್ನಾಟಕ ಪ್ರದೇಶದ ಜಿಲ್ಲೆಗಳಿಗೆ ವಿಶೇಷ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಕೇಂದ್ರ ಸರಕಾರಕ್ಕೆ ಕಳುಹಿಸುವ ಪ್ರಸ್ತಾವದಲ್ಲಿ ಬಳ್ಳಾರಿ ಜಿಲ್ಲೆಯನ್ನು ಕೈಬಿಟ್ಟಿರುವ ಮುಖ್ಯಮಂತ್ರಿ ಸದಾನಂದಗೌಡರ ನಿಲುವು ವಿರೋಧಿಸಿ ಸೋಮವಾರ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ನಾನಾ ಸಮಿತಿಯ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ತಾಲ್ಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿ ಮನವಿ ಸಲ್ಲಿಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುಟುಗನಹಳ್ಳಿ ಕೊಟ್ರೇಶ್ ಮಾತನಾಡಿ, ಮುಖ್ಯಮಂತ್ರಿ ಸದಾನಂದಗೌಡರು ಬಳ್ಳಾರಿ ಜಿಲ್ಲೆಯನ್ನು ಹೊರತುಪಡಿಸಿ ಸಂವಿಧಾನದ ಕಲಂ 371ನೇ `ಡಿ~ ತಿದ್ದುಪಡಿಯ ಪ್ರಸ್ತಾವನೆಯನ್ನು ಕೇಂದ್ರ ಸರಕಾರಕ್ಕೆ ಕಳುಹಿಸುವ ಮೂಲಕ ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಔದ್ಯೋಗಿಕವಾಗಿ ಜಿಲ್ಲೆಯನ್ನು ಅಸ್ಥಿರಗೊಳಿಸುವ ಷಡ್ಯಂತ್ರ ನಡೆಸಿದ್ದಾರೆ. ಇದರ ವಿರುದ್ಧ ಸಂಘಟಿತ ಹೋರಾಟ ನಡೆಸುವುದು ಅನಿವಾರ್ಯ ಎಂದು ಹೇಳಿದರು.

ಜಿಲ್ಲೆಯ 5 ತಾಲ್ಲೂಕಿನ ಹಿಂದುಳಿದ ಪ್ರದೇಶಗಳೆಂದು ನಂಜುಂಡಪ್ಪ ಸಮಿತಿ ಸರಕಾರಕ್ಕೆ ವರದಿ ಸಲ್ಲಿಸಿದೆ. ಹೆಚ್ಚಿನ ಸೂಕ್ತ ಅನುದಾನ ಒದಗಿಸಿ ಜಿಲ್ಲೆಯನ್ನು ಅಭಿವೃದ್ಧಿಪಡಿಸುವ ಹಿನ್ನೆಲೆಯಲ್ಲಿ ಹೈದರಾಬಾದ್ ಕರ್ನಾಟಕ ಪ್ರದೇಶದ ಜಿಲ್ಲೆಗಳಿಗೆ ನೀಡಬೇಕಾಗಿರುವ ವಿಶೇಷ ಸ್ಥಾನಮಾನದಲ್ಲಿ ಬಳ್ಳಾರಿ ಜಿಲ್ಲೆ ಸೇರ್ಪಡೆಯಾಗುವುದು ಅತಿ ಅವಶ್ಯಕ ಎಂದು ಪ್ರತಿಪಾದಿಸಿದರು.

ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ವಕ್ತಾರ ಅಕ್ಕಿ ತೋಟೇಶ್ ಮಾತನಾಡಿ, ಸಂವಿಧಾನದ ಕಲಂ 371ತಿದ್ದುಪಡಿಯಲ್ಲಿ ಜಿಲ್ಲೆಯನ್ನು ಸೇರಿಸಿದ್ದೆ ಆದರೆ, ಹೈದರಾಬಾದ್ ಕರ್ನಾಟಕ ಪ್ರದೇಶದ ವಿಶೇಷ ಸ್ಥಾನಮಾನ ಪಡೆಯುವ ಮೂಲಕ ಜಿಲ್ಲೆಯ ಶಿಕ್ಷಣ, ವಿದ್ಯುತ್, ಕೃಷಿ, ಪಶುಸಂಗೋಪನೆ, ಕಂದಾಯ ಸೇರಿದಂತೆ ನಾನಾ ರಂಗಗಳ ಭವಿಷ್ಯ ಉಜ್ವಲವಾಗುವ ವಿಶ್ವಾಸ ವ್ಯಕ್ತಪಡಿಸಿದರು.

ಜಿ.ಪಂ. ವಿರೋಧ ಪಕ್ಷದ ನಾಯಕ ಎಸ್. ಭೀಮಾನಾಯ್ಕ ಮಾತನಾಡಿ, ಜಿಲ್ಲೆಯ ಅಭಿವೃದ್ಧಿ ಪ್ರಕ್ರಿಯೆಯಲ್ಲಿ ಸರಕಾರದ ವಂಚನೆ ಬಯಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು, ಬಿಜೆಪಿ ಸಂಸದರು ಮತ್ತು ಶಾಸಕರು ಮೌನಕ್ಕೆ ಶರಣಾಗುವ ಮೂಲಕ ಹೊಣೆಗಾರಿಕೆಯಿಂದ ನುಣುಚಿಕೊಳ್ಳುವ ಪ್ರಯತ್ನ ನಡೆಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಖ್ಯಮಂತ್ರಿಗಳು ಜಿಲ್ಲೆಯನ್ನು ಸಂವಿಧಾನದ ಕಲಂ 371ನೇ `ಡಿ~ಗೆ ತಿದ್ದುಪಡಿಗೆ ಸೇರಿಸದಿದ್ದರೆ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಎಂ.ಪಿ. ರವೀಂದ್ರ ಅವರ ನೇತೃತ್ವದಲ್ಲಿ ಜ್ಲ್ಲಿಲೆಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಪ್ರಧಾನ ಕಾರ್ಯದರ್ಶಿ ಸಿ. ಬಸವರಾಜ್ ಮತ್ತು ಮುಖಂಡ ಬಿ.ವಿ. ಶಿವಯೋಗಿ ಮಾತನಾಡಿದರು. ಕೆಪಿಸಿಸಿ ಸದಸ್ಯ ಎಸ್. ಕೃಷ್ಣಾನಾಯ್ಕ, ಜಿ.ಪಂ. ಸದಸ್ಯ ರೋಗಾಣಿ ಹುಲುಗಪ್ಪ, ತಾ.ಪಂ. ಸದಸ್ಯ ಸೋಮಪ್ಪ, ಮಾಜಿ ಸದಸ್ಯ ದೇವೇಂದ್ರಪ್ಪ, ಗ್ರಾ.ಪಂ. ಸದಸ್ಯ ಎಣ್ಣಿ ಭಾಷಾ, ಚಿನ್ನಾಪುರಪ್ಪ, ಯುವ ಘಟಕದ ಪದಾಧಿಕಾರಿಗಳಾದ ತಟ್ಟಿ ರಾಘವೇಂದ್ರ, ಶಬ್ಬೀರ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.