ADVERTISEMENT

ರಾಜಕೀಯ ಮೀಸಲಾತಿ ನೀಡಿ: ಶ್ರೀರಾಮುಲು

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2017, 7:25 IST
Last Updated 24 ಡಿಸೆಂಬರ್ 2017, 7:25 IST
ವಾಲ್ಮೀಕಿ ಜಯಂತಿ ಅಂಗವಾಗಿ ಕೂಡ್ಲಿಗಿ ಪಟ್ಟಣದಲ್ಲಿ ಶನಿವಾರ ಭಾವಚಿತ್ರವನ್ನು ಮೆರವಣಿಗೆ ಮಾಡಲಾಯಿತು
ವಾಲ್ಮೀಕಿ ಜಯಂತಿ ಅಂಗವಾಗಿ ಕೂಡ್ಲಿಗಿ ಪಟ್ಟಣದಲ್ಲಿ ಶನಿವಾರ ಭಾವಚಿತ್ರವನ್ನು ಮೆರವಣಿಗೆ ಮಾಡಲಾಯಿತು   

ಕೂಡ್ಲಿಗಿ: ‘ರಾಜ್ಯ ಸರ್ಕಾರ ಪರಿಶಿಷ್ಟ ಪಂಗಡಕ್ಕೆ ಶೇ 7.5 ರಷ್ಟು ರಾಜಕೀಯ ಮೀಸಲಾತಿ ನೀಡಬೇಕು. ಇಲ್ಲದಿದ್ದರೆ ಹೋರಾಟ ರೂಪಿಸಲಾಗುವುದು’ ಎಂದು ಸಂಸದ ಬಿ.ಶ್ರೀರಾಮುಲು ಎಚ್ಚರಿಸಿದರು.

ಪಟ್ಟಣ ಚಂದ್ರಶೇಖರ್ ಆಜಾದ್ ರಂಗ ಮಂದಿರಲ್ಲಿ ವಾಲ್ಮೀಕಿ ಮಹಾಸಭಾದಿಂದ ಶನಿವಾರ ಏರ್ಪಡಿಸಿದ್ದ ಸಾಮೂಹಿಕ ವಿವಾಹ, ವೀರ ಮದಕರಿ ವೃತ್ತ, ವಾಲ್ಮೀಕಿ ಗರಡಿ ಮನೆ ಹಾಗೂ ವಾಲ್ಮೀಕಿ ಜಯಂತ್ಯುತ್ಸವ ಉದ್ಘಾಟಿಸಿ ಮಾತನಾಡಿದರು.

‘ಈ ಹಿಂದಿದ್ದ ಬಿಜೆಪಿ ಸರ್ಕಾರ ಹಾಗೂ ಈಗಿರುವ ಕಾಂಗ್ರೆಸ್ ಸರ್ಕಾರ ಉತ್ತಮ ಆಡಳಿತ ನೀಡಿದೆ. ಯಡಿಯೂರಪ್ಪ ಅವರ ಸರ್ಕಾರದಿಂದಲೇ ವಾಲ್ಮೀಕಿ ಜಯಂತಿ ಆಚರಣೆ ಮಾಡಲಾಯಿತು. ಇಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಮುಂದೆ ವಾಲ್ಮೀಕಿ ಪುತ್ಥಳಿ ಸ್ಥಾಪನೆ ಮಾಡಿದ್ದಾರೆ’ ಎಂದು ಸ್ಮರಿಸಿದರು.

ADVERTISEMENT

ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಮಾತನಾಡಿ, ವೀರ ಮದಕರಿ ನಾಯಕ ಒಂದೇ ಜನಾಂಗಕ್ಕೆ ಮೀಸಲಾಗಿಲ್ಲ. ಎಲ್ಲಾ ಸಮುದಾಯಕ್ಕೆ ನಾಯಕರಾಗಿದ್ದರು. ಅವರ ಜಯಂತಿಯನ್ನೂ ಆಚರಣೆ ಮಾಡಬೇಕು’ ಎಂದು ಒತ್ತಾಯಿಸಿದರು. ಉಪನ್ಯಾಸಕ ಗೋವಿಂದಪ್ಪ ವಿಶೇಷ ಉಪನ್ಯಾಸ ನೀಡಿದರು. ಮುಖಂಡ ಎನ್.ಟಿ. ಬೊಮ್ಮಣ್ಣ ಮಾತನಾಡಿದರು.

ಇದೇ ವೇಳೆಯಲ್ಲಿ 11 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಇದಕ್ಕೂ ಮೊದಲು ಬೆಳಿಗ್ಗೆ ವಾಲ್ಮೀಕಿ ದೇವಸ್ಥಾನದಿಂದ ಚಂದ್ರಶೇಖರ್ ಆಜಾದ್ ರಂಗ ಮಂದಿರದವರೆಗೆ ಮಹರ್ಷಿ ವಾಲ್ಮೀಕಿ ಭಾವ ಚಿತ್ರವನ್ನು ಮೆರವಣಿಗೆ ಮಾಡಲಾಯಿತು.

ಶಾಸಕ ಬಿ. ನಾಗೇಂದ್ರ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಬಿ. ವೆಂಕಟೇಶ್ ನಾಯ್ಕ್, ಪಟ್ಟಣ ಪಂಚಾಯ್ತಿ ಅಧ್ಯಕ್ಷ ಪಿ. ರಜನಿಕಾಂತ್, ವಾಲ್ಮೀಕಿ ಪೀಠದ ಧರ್ಮದರ್ಶಿ ಜಂಬಯ್ಯ ನಾಯಕ, ಚಿತ್ರ ನಟ ಬಂಗಾರು ಹನುಂತು, ವಾಲ್ಮೀಕಿ ಮಾಹಸಭಾದ ಜಿಲ್ಲಾ ಘಟಕದ ಅಧ್ಯಕ್ಷ ದೊಡ್ಡ ಎರ್ರಿಸ್ವಾಮಿ, ಸಿ.ಬಿ. ಜಯರಾಮ ನಾಯಕ, ಕಾವಲ್ಲಿ ಶಿವಪ್ಪ ನಾಯಕ, ಭೀಮೇಶ, ಮಂಜುನಾಥ, ಜಿಲ್ಲಾ ಪಂಚಾಯ್ತಿ ಸದಸ್ಯರಾದ ಎಚ್. ರೇವಣ್ಣ, ರತ್ನಮ್ಮ ಉಪಸ್ಥಿತರಿದ್ದರು.

* * 

ಪಟ್ಟಣದಲ್ಲಿ ನಿರ್ಮಾಣಗೊಳ್ಳುತ್ತಿರುವ ವಾಲ್ಮೀಕಿ ಭವನಕ್ಕೆ ಹೆಚ್ಚುವರಿಯಾಗಿ 50 ಲಕ್ಷ ರೂಪಾಯಿಗಳನ್ನು ಬಿಡುಗಡೆ ಮಾಡಿಸಲಾಗಿದೆ. ಭವನ ನಿರ್ಮಾಣ ವಿಳಂಭವಾಗುತ್ತಿರುವ ಬಗ್ಗೆ ನಿರ್ಮಿತಿ ಕೇಂದ್ರದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ,  ಕಾಮಗಾರಿ  ಮುಗಿಸುವಂತೆ ಸೂಚಿಸಲಾಗುವುದು.
ಬಿ. ನಾಗೇಂದ್ರ, ಶಾಸಕ,  

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.