ಹೂವಿನಹಡಗಲಿ: ‘ವಿಧಾನಸಭೆ ಚುನಾವಣೆಗೂ ಮುನ್ನ ರಾಜ್ಯದಲ್ಲಿ ಪಕ್ಷಾಂತರ ಪರ್ವ ಆರಂಭವಾಗಿದೆ. ಯಾರು ಎಲ್ಲಿಗೆ ಬೇಕಾದರೂ ಹೋಗಲಿ. ಆಯಾರಾಂ, ಗಯಾರಾಂ ಬಗ್ಗೆ ನಾನು ತಲೆಕಡೆಸಿಕೊಳ್ಳಲ್ಲ. ನ. 1ರಿಂದ ರಾಜ್ಯದಲ್ಲಿ ಪ್ರವಾಸ ಹಮ್ಮಿಕೊಂಡು ಪಕ್ಷದ ಸಂಘಟನೆಯನ್ನು ಚುರುಕುಗೊಳಿಸುತ್ತೇನೆ. ಮುಂಬರುವ ಚುನಾವಣೆಯಲ್ಲಿ ನಾವು ಅಧಿಕಾರಕ್ಕೆ ಬರುವುದೊಂದೇ ಉದ್ದೇಶ’ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದರು.
‘ಸಾಮೂಹಿಕ ನಾಯಕತ್ವದಲ್ಲಿ ಬಿಜೆಪಿ, ಕಾಂಗ್ರೆಸ್ ಪಕ್ಷಗಳ ಅನ್ಯಾಯವನ್ನು ಜನರ ಮುಂದಿಡುತ್ತೇವೆ ಎಂದು ಮಂಗಳವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.
‘ಕುಮಾರಸ್ವಾಮಿ ಸರ್ಕಾರದ ಸಾಧನೆಗಳನ್ನು ರಾಜ್ಯದ ಜನರು ಇಂದಿಗೂ ಸ್ಮರಿಸುತ್ತಾರೆ. ಈಗಾಗಲೇ ಕೊಡಗು ಸೇರಿದಂತೆ ಇತರೆ ಕಡೆಗಳಲ್ಲಿ ಬಿಜೆಪಿ, ಕಾಂಗ್ರೆಸ್ ಪಕ್ಷಗಳಿಂದ ನೂರಾರು ಯುವಕರು ಜೆಡಿಎಸ್ ಸೇರಲು ಬಯಸಿದ್ದಾರೆ. ಹಾಗಾಗಿ ಎಲ್ಲ 224 ಕ್ಷೇತ್ರಗಳಲ್ಲೂ ತಮ್ಮ ಪಕ್ಷ ಸ್ಪರ್ಧಿಸುತ್ತಿದ್ದು, ಅಧಿಕಾರಕ್ಕೆ ಬರುವ ಸಂಪೂರ್ಣ ವಿಶ್ವಾಸವಿದೆ’ ಎಂದರು.
ಕುಶಲೋಪರಿ ವಿಚಾರಿಸಿದ ಶಾಸಕ : ಹೂವಿನಹಡಗಲಿ ಪ್ರವಾಸಿ ಮಂದಿರದಲ್ಲಿ ವಾಸ್ತವ್ಯ ಹೂಡಿದ್ದ ಎಚ್.ಡಿ.ದೇವೇಗೌಡ ಅವರನ್ನು ಕ್ಷೇತ್ರದ ಕಾಂಗ್ರೆಸ್ ಶಾಸಕ ಪಿ.ಟಿ.ಪರಮೇಶ್ವರನಾಯ್ಕ ಭೇಟಿಯಾಗಿ ಕುಶಲೋಪರಿ ವಿಚಾರಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ, ‘ಹಿರಿಯ ಮುತ್ಸದ್ದಿ ದೇವೇಗೌಡ ಅವರು ತಮ್ಮ ಕ್ಷೇತ್ರಕ್ಕೆ ಆಗಮಿಸಿರುವುದರಿಂದ ಸೌಜನ್ಯಯುತವಾಗಿ ಅವರನ್ನು ಭೇಟಿಯಾಗಿದ್ದೇನೆ. ಇದರಲ್ಲಿ ಯಾವುದೇ ರಾಜಕೀಯ ಇಲ್ಲ ಮತ್ತು ರಾಜಕಾರಣದ ಪ್ರಸ್ತಾಪವನ್ನೂ ಮಾಡಿಲ್ಲ’ ಎಂದು ಹೇಳಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಐಗೋಳ ಚಿದಾನಂದ, ಎಂ.ಪರಮೇಶ್ವರಪ್ಪ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಸೋಗಿ ಹಾಲೇಶ್, ಪುರಸಭೆ ಅಧ್ಯಕ್ಷೆ ಆರ್.ಪವಿತ್ರ, ಎಪಿಎಂಸಿ ಅಧ್ಯಕ್ಷ ಸೊಪ್ಪಿನ ಪ್ರಕಾಶ, ಮುಖಂಡರಾದ ಅರವಳ್ಳಿ ವೀರಣ್ಣ, ಅಟವಾಳಗಿ ಕೊಟ್ರೇಶ, ವಾರದ ಗೌಸ್ ಮೊಹಿದ್ದೀನ್, ಬಿ.ಹನುಮಂತಪ್ಪ, ಜ್ಯೋತಿ ಮಲ್ಲಣ್ಣ, ಕೆ.ರಾಘವೇಂದ್ರ ಶೆಟ್ಟಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.